ಅಂಬೇಡ್ಕರ್ಗೆ ಅಪಮಾನ; ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಎತ್ತಂಗಡಿ
ಬೆಂಗಳೂರು.ಫೆ.18; ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದರೆಂಬ ಆರೋಪ ಎದುರಿಸುತ್ತಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.
ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ.
ರಾಯಚೂರಿನಲ್ಲಿ ಅಂಬೇಡ್ಕರ್ಗೆ ಅಪಮಾನ ಆರೋಪ: ಪರಿಶೀಲಿಸಿ ಕ್ರಮ- ಸಿಜೆ ಭರವಸೆ
ಸಿಜೆ ಅವರ ನಿರ್ದೇಶನದ ಮೇರೆಗೆ ರಾಯಚೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಈವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿದ್ದ ಎಸ್. ಎಚ್. ರೇಣುಕಾದೇವಿ ಫೆ.28ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಮಲ್ಲಿಕಾರ್ಜುನ ಗೌಡ ಅವರನ್ನು ನೇಮಿಸಲಾಗಿದ್ದು, ಈ ಆದೇಶ ಫೆ.28ರಿಂದ ಜಾರಿಗೆ ಬರಲಿದೆ.
ವಿವಾದದ ಹಿನ್ನೆಲೆ:
ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬುಧವಾರ ಧ್ವಜಾರೋಹಣ ನಡೆಯುತ್ತಿದ್ದ ಸ್ಥಳದಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಲಾಗಿತ್ತು. ಆದರೆ, ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಧ್ವಜಾರೋಹಣ ಸ್ಥಳದಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿದ್ದರು. ಇದು ವಿವಾದಕ್ಕೆ ಗುರಿಯಾಗಿತ್ತು. ಮಲ್ಲಿಕಾರ್ಜುನ ಗೌಡರ ವರ್ಗಾವಣೆಗೆ ರಾಜ್ಯಾದ್ಯಂತ ವ್ಯಾಪಕ ಒತ್ತಡ ಪ್ರತಿಭಟನೆಗಳು ನಡೆದಿದ್ದವು.
ದೂರುಗಳು ಸಲ್ಲಿಕೆ:
ರಾಯಚೂರಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ತೆಗೆಸಿದ ವಿವಾದ ಸಂಬಂಧ ಬೆಂಗಳೂರು ವಕೀಲರ ಸಂಘ ಸೇರಿ ಕೆಲವು ಸಂಘಟನೆಗಳು ಹಾಗೂ ವಕೀಲರಿಂದ ಹೈಕೋರ್ಟ್ಗೆ ದೂರುಗಳು ಸಲ್ಲಿಕೆಯಾಗಿದ್ದವು.
ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ರಿಜಿಸ್ಟ್ರಾರ್ ಜನರಲ್ ಅವರಿಗೆ ಇ-ಮೇಲ್, ಪತ್ರ ಮುಖೇನ ಹಾಗೂ ಖುದ್ದಾಗಿ ಮೂಲಕ ಕೆಲವು ವಕೀಲರು ಮತ್ತು ವಕೀಲರ ಸಂಘಗಳಿಂದ ದೂರುಗಳು ಸಲ್ಲಿಕೆಯಾಗಿವೆ. ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಹಾಗೂ ವಕೀಲ ವೆಂಕಟೇಶ್ ದೊಡ್ಡೇರಿ, ಮತ್ತೋರ್ವ ವಕೀಲ ರಮೇಶ್ ಎಲ್. ನಾಯಕ್ ಮುಖ್ಯ ನ್ಯಾಯಮೂರ್ತಿ ಮತ್ತು ರಿಜಿಸ್ಟ್ರಾರ್ ಜನರಲ್ಗೆ ದೂರು ಸಲ್ಲಿಸಿದ್ದರು
ಅಂಬೇಡ್ಕರ್ ಭಾವಚಿತ್ರ ಕಡ್ಡಾಯ:
ಆನಂತರ ನಡೆದ ಬೆಳವಣಿಗೆಯಲ್ಲಿ ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿತ್ತು. ರಾಯಚೂರಿನಲ್ಲಿ ಘಟನೆ ಬೆನ್ನಲ್ಲೆ ಮಹತ್ವದ ತೀರ್ಮಾನವನ್ನು ಹೈಕೋರ್ಟ್ ಕೈಗೊಂಡಿತ್ತು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದಲ್ಲಿ ನಡೆದ ಆಡಳಿತಾತ್ಮಕ ಪೂರ್ಣಪೀಠ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಸುತ್ತೋಲೆ ಹೊರಡಿಸಿದ್ದು, ಜ.26ರಂದು ಗಣರಾಜ್ಯೋತ್ಸವ, ಆ.15ರಂದು ಸ್ವಾತಂತ್ರ್ಯೋತ್ಸವ ಹಾಗೂ ನ.26ರಂದು ಸಂವಿಧಾನ ದಿನದ ಅಂಗವಾಗಿ ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳು ಹಾಗೂ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಆಯೋಜಿಸಲಾಗುವ ಅಧಿಕೃತ ಕಾರ್ಯಕ್ರಮಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವಿಡಲು ಕ್ರಮ ಕೈಗೊಳ್ಳುವಂತೆ ಆಯಾ ನ್ಯಾಯಾಲಯಗಳ ಮುಖ್ಯಸ್ಥರಿಗೆ ಸೂಚಿಸಿದ್ದರು.