DK Shivakumar: ಮಹತ್ವದ ಸ್ಪಷ್ಟನೆ ನೀಡಿ ಅಮೆರಿಕಕ್ಕೆ ಹಾರಿದ ಡಿ. ಕೆ. ಶಿವಕುಮಾರ್!
ಬೆಂಗಳೂರು, ಸೆಪ್ಟೆಂಬರ್ 09: ಮುಡ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ, ಸಿಎಂ ಪಟ್ಟದ ಬಗ್ಗೆ ವಿವಿಧ ಸಚಿವರ ಹೇಳಿಕೆಗಳು ಹೊರಬರುತ್ತಿರುವಾಗಲೇ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದರೆ ಭಾನುವಾರ ರಾತ್ರಿ ವಿಮಾನ ಏರುವ ಮೊದಲು ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ಕುಟುಂಬದ ಜೊತೆ ಒಂದು ವಾರದ ಪ್ರವಾಸಕ್ಕಾಗಿ ಡಿ. ಕೆ. ಶಿವಕುಮಾರ್ ಭಾನುವಾರ ರಾತ್ರಿ ಅಮೆರಿಕಕ್ಕೆ ತೆರಳಿದ್ದಾರೆ. ಇದು ವೈಯಕ್ತಿಕ ಪ್ರವಾಸವಾಗಿದೆ. ಆದರೆ ಇದರ ಹಿಂದೆ ರಾಜಕೀಯ ನಡೆ ಇದೆ ಎಂದು ಬಿಂಬಿಸಲಾಗುತ್ತಿತ್ತು. ಆದ್ದರಿಂದ ಡಿ. ಕೆ. ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಡಿ. ಕೆ. ಶಿವಕುಮಾರ್ ಪೋಸ್ಟ್: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, 'ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ' ಎಂದು ಪೋಸ್ಟ್ ಹಾಕಿದ್ದಾರೆ.
ಲೋಕಸಭೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರದಿಂದ 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸಹ ಅಮೆರಿಕದಲ್ಲಿದ್ದಾರೆ. ನಟ, ರಾಜಕೀಯ ನಾಯಕ ಕಮಲ್ ಹಾಸನ್ ಸಹ ಅಮೆರಿಕ ಪ್ರವಾಸದಲ್ಲಿದ್ದಾರೆ. ಆದ್ದರಿಂದ ಡಿ. ಕೆ. ಶಿವಕುಮಾರ್ ಅಮೆರಿಕ ಪ್ರವಾಸ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಡಿ. ಕೆ. ಶಿವಕುಮಾರ್ ಭಾನುವಾರ ರಾತ್ರಿ ಬೆಂಗಳೂರಿನಿಂದ ಅಮೆರಿಕಕ್ಕೆ ತೆರಳಿದ್ದು, ಸೆಪ್ಟೆಂಬರ್ 14ರಂದು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಇದೆ. ಅಮೆರಿಕ ಪ್ರವಾಸಕ್ಕೂ ಮೊದಲು ಡಿ. ಕೆ. ಶಿವಕುಮಾರ್ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆಯನ್ನು ಸಹ ನಡೆಸಿದ್ದಾರೆ.
ಅಲ್ಲದೇ ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣಾ ತಯಾರಿ ನಡೆಯುತ್ತಿದೆ. ಪ್ರಸ್ತುತ ಅಮೆರಿಕದ ಉಪಾಧ್ಯಕ್ಷೆ ಭಾರತೀಯ ಮೂಲದ ಕಮಲಾ ಹ್ಯಾರೀಸ್ ಡಿ. ಕೆ. ಶಿವಕುಮಾರ್ಗೆ ವಿಶೇಷ ಆಹ್ವಾನ ನೀಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಡಿ. ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಇತ್ತು.
ಆದ್ದರಿಂದ ಡಿ. ಕೆ. ಶಿವಕುಮಾರ್ ಈ ಪ್ರವಾಸ, 'ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ' ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. ಆದರೆ ಡಿ. ಕೆ. ಶಿವಕುಮಾರ್ ಅಮೆರಿಕ ಭೇಟಿ ಬಗ್ಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗಳು ನಡೆಯುತ್ತಿವೆ.
ಶುಕ್ರವಾರ ಸಂಜೆ ಮತ್ತು ಶನಿವಾರ ಡಿ. ಕೆ. ಶಿವಕುಮಾರ್ ಹಾಸನ ಜಿಲ್ಲಾ ಪ್ರವಾಸದಲ್ಲಿದ್ದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಯ ಮೊದಲನೇ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚಾಲನೆ ನೀಡಿದ್ದರು.
ಶನಿವಾರ ಸ್ವಕ್ಷೇತ್ರ ಕನಕಪುರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಡಿ. ಕೆ. ಶಿವಕುಮಾರ್ ಪಾಲ್ಗೊಂಡಿದ್ದರು. ಮೂಲೆಗುಂದಿಯಲ್ಲಿ ಆರ್ಕಾವತಿ ಜಲಾಶಯ ಬಲದಂಡೆ ಏತ ನೀರಾವರಿ ಯೋಜನೆಯ ಪುನಶ್ಚೇತನ ಕಾಮಗಾರಿಯ ಪರೀಕ್ಷಾರ್ಥಕ್ಕೆ ಚಾಲನೆ ನೀಡಿದ್ದರು. ಕನಕಪುರ ಹಾಗೂ ಜಕ್ಕಸಂದ್ರದಲ್ಲಿ ಗಣಪತಿ ಪೆಂಡಾಲ್ಗೆ ಭೇಟಿ ನೀಡಿ, ವಿನಾಯಕನಿಗೆ ಪೂಜೆ ಸಲ್ಲಿಸಿದ್ದರು.
ಭಾನುವಾರ ಬೆಳಗ್ಗೆ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದರು. ಬಳಿಕ ಮಲ್ಲೇಶ್ವರದ ಬಿಬಿಎಂಪಿ ಕಛೇರಿಯಲ್ಲಿ ಬಿಬಿಎಂಪಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ವಿಚಾರಗಳ ಕುರಿತು ಚರ್ಚಿಸಿದ್ದರು. ರಾತ್ರಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.












Click it and Unblock the Notifications