ರಾಜೀನಾಮೆ ನಿರ್ಧಾರದ ನಡುವೆ ಬಿಜೆಪಿ ಶಾಸಕ ಮಹಾಕುಂಭ ಮೇಳಕ್ಕೆ ಭೇಟಿ
ರಾಜ್ಯ ಬಿಜೆಪಿಯಲ್ಲಿ ಸದ್ಯ ರಾಜೀನಾಮೆಯ ವಿಚಾರ ಭಾರಿ ಚರ್ಚೆ ಹುಟ್ಟುಹಾಕಿದೆ. ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರು ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಬೆಳವಣಿಗೆ ನಡುವೆಯೇ ಸುನೀಲ್ ಕುಮಾರ್ ಅವರು ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬದೊಂದಿಗೆ ತೆರಳಿ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡಿದ ಸಾರ್ಥಕ ಕ್ಷಣಗಳು ಎಂದು ಸುನಿಲ್ ಕುಮಾರ್ ಹೇಳಿಕೊಂಡಿದ್ದಾರೆ. ಪ್ರಯಾಗ್ರಾಜ್ನ ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ಮೂಲಕ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ.

ಇತ್ತ ರಾಜ್ಯದಲ್ಲಿ ಸುನಿಲ್ ಕುಮಾರ್ ಅವರ ರಾಜೀನಾಮೆ ನಿರ್ಧಾರದ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವಿ.ಸುನಿಲ್ ಕುಮಾರ್ ಅವರಿಗೆ ರಾಜ್ಯ ಬಿಜೆಪಿಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನೂ ನೀಡಲಾಗಿದೆ. ಆದರೆ, ಅವರು ದಿಢೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತಮ್ಮನ್ನು ಕೆಳಗಿಳಿಸುವಂತೆ ಅವರೇ ಖುದ್ದಾಗಿ ಹೈಕಮಾಂಡ್ಗೆ ಮನವಿ ಮಾಡಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ವಿ.ಸುನಿಲ್ ಕುಮಾರ್ ಅವರು ಪ್ರಭಾವಿ ಸಚಿವರಾಗಿಯೂ ಗುರುತಿಸಿಕೊಂಡಿದ್ದರು. ಕಾರ್ಕಳ ಕ್ಷೇತ್ರದಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲೂ ಅವರು ಗೆದ್ದು ಶಾಸಕರಾಗಿದ್ದಾರೆ. ಸದ್ಯ ರಾಜ್ಯ ಬಿಜೆಪಿಯ ಪ್ರಮುಖ ನಾಯಕರ ಸಾಲಿನಲ್ಲಿ ಸುನಿಲ್ ಕುಮಾರ್ ಕೂಡ ಇದ್ದಾರೆ. ಇಷ್ಟೆಲ್ಲ ಇದ್ದರೂ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವುದು ಏಕೆ? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಒಂದೆಡೆ ಬಿಜೆಪಿಯಲ್ಲಿ ಯತ್ನಾಳ್ ಹಾಗೂ ವಿಜಯೇಂದ್ರ ಅವರ ಬಣ ಬಡಿದಾಟ ಜೋರಾಗಿದೆ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗಳು ಕೂಡ ಮುನ್ನೆಲೆಯಲ್ಲಿದೆ. ಇದರ ನಡುವೆ ವಿ.ಸುನಿಲ್ ಕುಮಾರ್ ಅವರ ರಾಜೀನಾಮೆ ನಿರ್ಧಾರವು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಸುನಿಲ್ ಕುಮಾರ್ ಅವರಿಗೆ ನೀಡಲಾಗಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಅವರು ಹೈಕಮಾಂಡ್ಗೆ ಮನವಿ ಮಾಡಿದ್ದಾರಂತೆ.
ಸುನಿಲ್ ಕುಮಾರ್ ಅವರು ಇತ್ತೀಚೆಗೆ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದೂ ಹೇಳಲಾಗುತ್ತಿದೆ. ವಿಜಯೇಂದ್ರ ಅವರ ಬಣದಲ್ಲಿ ಗುರುತಿಸಿಕೊಂಡಿದ್ದ ಅವರು ಇತ್ತೀಚೆಗೆ ದೂರ ಸರಿದಿದ್ದಾರೆ ಎಂದು ಗುಸುಗುಸು ಕೂಡ ಇದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಮುನ್ನೆಲೆಯಲ್ಲಿ ಇರುವುದರಿಂದ ಸುನಿಲ್ ಕುಮಾರ್ ಅವರು ಆ ಸ್ಥಾನದ ಆಕಾಂಕ್ಷಿಯಾಗಿದ್ದಾರಾ? ಎಂದೂ ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.

ಸದ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಕೂಡ ರಾಜ್ಯ ಬಿಜೆಪಿಯಲ್ಲಿ ಉನ್ನತ ಸ್ಥಾನ. ಅದನ್ನೇ ಅವರು ತಿರಸ್ಕರಿಸುತ್ತಿದ್ದಾರೆ ಎಂದರೆ ಇದರ ಹಿಂದೆ ಬೇರೆ ಏನೋ ಕಾರಣ ಇರಬೇಕು ಎಂದೂ ಹೇಳಲಾಗುತ್ತಿದೆ. ಈಗಾಗಲೇ ಸುನಿಲ್ ಕುಮಾರ್ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ತಮ್ಮ ರಾಜೀನಾಮೆಯ ವಿಚಾರವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಹೈಕಮಾಂಡ್ ಇನ್ನೂ ಯಾವುದೇ ನಿರ್ಧಾರ ವ್ಯಕ್ತಪಡಿಸಿಲ್ಲ. ಸುನಿಲ್ ಕುಮಾರ್ ಅವರು ತಮ್ಮ ವೈಯಕ್ತಿಕ ಕಾರಣಕ್ಕಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧರಿಸಿದ್ದು, ಇದಕ್ಕೆ ಆಂತರಿಕ ಬಣ ಬಡಿದಾಟ ಕಾರಣವಲ್ಲ ಎಂದು ಹೇಳಲಾಗುತ್ತಿದೆ.












Click it and Unblock the Notifications