ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ಗೆ ಬೆಂಗಳೂರಲ್ಲಿ ಮನೆ ಬೇಕಾಗಿದೆ!
ಕರ್ನಾಟಕದಲ್ಲಿ ಚುನಾವಣೆ ಎದುರಾಗುತ್ತಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆಂಗಳೂರಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದಾರೆ.
ಬೆಂಗಳೂರು, ಫೆಬ್ರವರಿ 26; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಬೇಸಿಗೆಯ ಜೊತೆಗೆ ಏರುತ್ತಿದೆ. ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೇಂದ್ರದ ಬಿಜೆಪಿ ನಾಯಕರು ಸಹ ಪ್ರಯತ್ನ ನಡೆಸಿದ್ದಾರೆ. ಇದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ಗೆ ಬೆಂಗಳೂರಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದಾರೆ.
ವಿಧಾನಸಭೆ ಚುನಾವಣೆ ನಡೆಯುವ ರಾಜ್ಯದ ಮೇಲೆ ಅಮಿತ್ ಶಾ ವಿಶೇಷ ಗಮನ ಹರಿಸುತ್ತಾರೆ. ಬಿಜೆಪಿಗರ ಪಾಲಿನ ಚುನಾವಣಾ ಚಾಣಾಕ್ಯ ನೀಡುವ ಸೂಚನೆಯಂತೆ ಅವರ ತಂಡ ರಾಜ್ಯದಲ್ಲಿ ಕೆಲಸ ಮಾಡುತ್ತದೆ. ಕರ್ನಾಟಕದ ಚುನಾವಣೆಗಾಗಿಯೇ ವಿಶೇಷ ತಂಡ ರಚನೆ ಮಾಡಲಾಗಿದ್ದು, ಅದು ಈಗಾಗಲೇ ರಾಜ್ಯದಲ್ಲಿ ತನ್ನ ಕೆಲಸಗಳನ್ನು ಆರಂಭಿಸಿದೆ.

ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಮಿತ್ ಶಾ ರಾಜ್ಯದಲ್ಲಿ ನಿರಂತರವಾಗಿ ಪ್ರಚಾರದಲ್ಲಿ ತೊಡಗಲಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಸರ್ಕಾರಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡುವಂತಿಲ್ಲ. ಆದ್ದರಿಂದ ಅವರು ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ವಿಶೇಷ ಭದ್ರತೆ ಇರುವ ಕಾರಣ ಭದ್ರತಾ ಪಡೆಗಳು ಒಪ್ಪಿದ ಮನೆಯನ್ನು ಬಿಜೆಪಿ ನಾಯಕರು ಬಾಡಿಗೆಗೆ ಪಡೆಯಲಿದ್ದಾರೆ. 2018ರ ಚುನಾವಣೆ ಸಂದರ್ಭದಲ್ಲಿಯೂ ಬೆಂಗಳೂರಿನಲ್ಲಿ 6 ಬೆಡ್ ರೂಂಗಳ ಮನೆಯನ್ನು ಅಮಿತ್ ಶಾಗಾಗಿ ಬಾಡಿಗೆಗೆ ಪಡೆಯಲಾಗಿತ್ತು. ಚುನಾವಣಾ ಸಮಯದಲ್ಲಿ ಇದೇ ಮನೆಯಿಂದ ತೆರಳಿ ಅಮಿತ್ ಶಾ ಪ್ರಚಾರ ಕೈಗೊಂಡಿದ್ದರು. ಈ ಮನೆಯಲ್ಲಿ ಹಲವು ಮಹತ್ವದ ಸಭೆಗಳು ಸಹ ನಡೆಯುತ್ತಿದ್ದವು.
ಚುನಾವಣಾ ಉಸ್ತುವಾರಿ; ಅಮಿತ್ ಶಾ ಮಾತ್ರವಲ್ಲ ಕರ್ನಾಟಕದ ಚುನಾವಣೆಗೆ ಬಿಜೆಪಿ ಉಸ್ತುವಾರಿವಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಹ ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಈಗಾಗಲೇ ಮನೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ಈ ಹಿಂದೆ ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಕೆಲಸ ಮಾಡಿದ್ದು, ಅವರಿಗೆ ರಾಜ್ಯ ರಾಜಕೀಯದ ಬಗ್ಗೆ ಅಪಾರ ಮಾಹಿತಿ ಇದೆ.

ಕಂದಾಯ ಸಚಿವ ಆರ್. ಅಶೋಕ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ಗಾಗಿ ಮನೆ ಹುಡುಕುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ, "ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಂಗಳೂರಿನಲ್ಲಿ ಮನೆ ಮಾಡಲಿದ್ದಾರೆ. ಇಬ್ಬರೂ ನಾಯಕರಿಗೆ ಮನೆ ಹುಡುಕುವ ಕಾರ್ಯ ಈಗಾಗಲೇ ನಡೆಸಲಾಗುತ್ತಿದೆ. ವಿಧಾನಸಭೆ ಚುನಾವಣೆ ಮುಗಿಯುವ ತನಕ ನಾಯಕರು ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ" ಎಂದು ಹೇಳಿದ್ದಾರೆ.
ಬಿಜೆಪಿಗೆ ಬಹುಮತವೇ ಇಲ್ಲ; ರಾಜ್ಯದಲ್ಲಿ ಪ್ರಸ್ತುತ ಬಿಜೆಪಿ ಅಧಿಕಾರ ನಡೆಸುತ್ತಿದೆ. ಆದರೆ ಪಕ್ಷಕ್ಕೆ ರಾಜ್ಯದಲ್ಲಿ ಇದುವರೆಗೂ ಸರ್ಕಾರ ರಚನೆ ಮಾಡುವಷ್ಟು ಬಹುಮತ ಸಿಕ್ಕಿಲ್ಲ. ಆಪರೇಷನ್ ಕಮಲ ಮಾಡಿಯೇ ಪಕ್ಷ ಅಧಿಕಾರ ಹಿಡಿದಿದೆ. ಆದರೆ ಈ ಬಾರಿ 150+ ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಪಡೆಯಬೇಕು ಎಂಬುದು ಬಿಜೆಪಿಯ ಗುರಿ. ಇದಕ್ಕಾಗಿ ಪಕ್ಷ ತಂತ್ರವನ್ನು ರೂಪಿಸುತ್ತಿದೆ. ಇದರ ಭಾಗವಾಗಿಯೇ ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ಬೆಂಗಳೂರಿನಲ್ಲಿ ಬಾಡಿಗೆ ಮನೆ ಮಾಡುತ್ತಿದ್ದಾರೆ.
2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳಲ್ಲಿ ಜಯಗಳಿಸಿತ್ತು. ರಾಜ್ಯಪಾಲರು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ವಿಶ್ವಾಸ ಮತ ಸಾಬೀತು ಮಾಡಲಾಗದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೂ ಒಂದು ವರ್ಷದ ಬಳಿಕ ಮೈತ್ರಿ ಸರ್ಕಾರ ಪತನಗೊಂಡಿತು.
17 ಶಾಸಕರು ರಾಜೀನಾಮೆ ನೀಡಿದ್ದರಿಂದ ಕುಮಾರಸ್ವಾಮಿ ಸರ್ಕಾರ ಬಹುಮತ ಕಳೆದುಕೊಂಡಿತು. ಬಳಿಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಆದರೆ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬಳಿಕ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದರು. ಈ ಬಾರಿ ಪೂರ್ಣ ಬಹುತದ ಜೊತೆ ಅಧಿಕಾರ ಪಡೆಯಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ.












Click it and Unblock the Notifications