ಬೆಂಗಳೂರಿಗೆ ಅಮಿತ್ ಶಾ: ಅಧ್ಯಕ್ಷ ಸ್ಥಾನ ಜಟಾಪಟಿ, ಬಿಜೆಪಿ ಯಾವ ಬಣಕ್ಕೆ ಶುಭ ಶುಕ್ರವಾರ
ಬೆಂಗಳೂರು, ಮಾರ್ಚ್ 06: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಎರಡು ಬಣಗಳ ನಡುವೆಭಿನ್ನಮತ ಬುಗಿಲೆದ್ದಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ (ಮಾರ್ಚ್ 06) ಬೆಂಗಳೂರಿಗೆ ಆಗಮಿಸುತ್ತಿರುವುದು ಭಾರೀ ಕುತೂಹಲ ಕೆರಳಿಸಿದೆ. ಬಿಜೆಪಿ ಹಾಲಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ವಿರೋಧಿ ಬಣದ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಬಣ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಇದೀಗ ಕರ್ನಾಟಕಕ್ಕೆ ಅಮಿತ್ ಶಾ ಆಗಮಿಸುತ್ತಿರುವುದು ಹಲವು ಕುತೂಹಲ ಮೂಡಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದು, ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇಲ್ನೋಟಕ್ಕೆ ಇದೊಂದು ಖಾಸಗಿ ಕಾರ್ಯಕ್ರಮ ಎಂದು ಹೇಳಲಾಗುತ್ತಿದ್ದರೂ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ಅಂಕುಶ ಹಾಕಲು ಅಮಿತ್ ಶಾ ಅವರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಬೂದಿ ಮುಚ್ಚಿದ ಕೆಂಡದ ಹಾಗಿದೆ. ಹೀಗಾಗಿ ರಾಜ್ಯ ಬಿಜೆಪಿಯಲ್ಲಿರುವ ಭಿನ್ನಮತದ ಕುರಿತು ಬೆಂಗಳೂರು ಪ್ರವಾಸದ ವೇಳೆ ಅಮಿತ್ ಶಾ ಅವರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ ಬಂಗಾರಪ್ಪ , ಅರವಿಂದ ಲಿಂಬಾವಳಿ, ಬಿಪಿ ಹರೀಶ್ ಹಾಗೂ ಡಾ. ಕೆ ಸುಧಾಕರ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಭುಗಿಲೆದ್ದ ಭಿನ್ನಮತ ಮತ್ತೊಂದು ಹೆಜ್ಜೆ ಮುಂದುವರಿದಿದೆ. ಅಲ್ಲದೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕು ಎಂಬುವುದು ಯತ್ನಾಳ್ ಅವರ ಬೇಡಿಕೆಯಾಗಿದೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ.
ಇತ್ತ ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಮಾಜಿ ಸಚಿವ ಶ್ರೀರಾಮುಲು ಅವರು, ಕೇಂದ್ರ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಲು ಪ್ಲಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮಿತ್ ಶಾ ಅವರನ್ನ ಭೇಟಿ ಮಾಡುವ ಮೂಲಕ ತಮಗೆ ಪಕ್ಷದಲ್ಲಾಗಿರುವ ಅವಮಾನದ ಬಗ್ಗೆ ವಿವರಣೆ ನೀಡಲು ಶ್ರೀರಾಮುಲು ಸಿದ್ಧವಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಬಿಜೆಪಿಯಲ್ಲಿ ಬಣ ಗುದ್ದಾಟ ಮತ್ತಷ್ಟು ತೀವ್ರಗೊಂಡಿದೆ. ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಭುಗಿಲೆದ್ದ ಭಿನ್ನಮತ ಹಾಗೂ ಎಲ್ಲಾ ಚರ್ಚೆಗಳಿಗೆ ಅಮಿತ್ ಶಾ ಅವರು ಬ್ರೇಕ್ ಹಾಕಲಿದ್ದಾರೆ. ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಆಗಿರುವ ನೇಮಕಾತಿಯಲ್ಲೂ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಸುಳಿವು ಸ್ಪಷ್ಟವಾಗಿ ಕಾಣಸಿಗುತ್ತಿದೆ.
23 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಪಟ್ಟಿ ಘೋಷಣೆಯಾಗಿದ್ದು, ಇದರಲ್ಲಿ ಬಹುತೇಕ ವಿಜಯೇಂದ್ರ ಬಣದವರೇ ಇದ್ದಾರೆ. ಹಾಗಾಗಿ ಅಧ್ಯಕ್ಷರಾಗಿ ಮುಂದುವರಿಯಲು ವಿಜಯೇಂದ್ರ ಅವರಿಗೆ ತೊಡಕಾಗುವ ಸಾಧ್ಯತೆ ಇಲ್ಲ, ಹೀನಾಗಿ ನಾಳೆ(ಶುಕ್ರವಾರ) ಅಮಿತ್ ಶಾ ಅವರು ಎಲ್ಲಾ ಅಪಸ್ವರ ಹಾಗೂ ಅಸಮಾಧಾನಕ್ಕೂ ಬ್ರೇಕ್ ಹಾಕುವ ಮೂಲಕ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂಬ ಸಂದೇಶವನ್ನ ಅಮಿತ್ ಶಾ ಅವರು ತಿಳಿಸಲಿದ್ದಾರೆ ಎನ್ನಲಾಗಿದೆ.












Click it and Unblock the Notifications