ಕರ್ನಾಟಕದ ಸಂಸದ, ಶಾಸಕರ ಸಭೆ ಕರೆದ ಅಮಿತ್ ಶಾ
ಬೆಂಗಳೂರು, ಜನವರಿ 09 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕದ ಪಕ್ಷದ ನಾಯಕರ ಸಭೆ ಕರೆದಿದ್ದಾರೆ. ದೆಹಲಿ ಅಥವ ಮುಂಬೈನಲ್ಲಿ ಜನವರಿ 11 ಮತ್ತು 12ರಂದು ಈ ಸಭೆ ನಡೆಯಲಿದೆ.
2019ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಕರ್ನಾಟಕದ 104 ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಆಗ ಅಮಿತ್ ಶಾ ಅವರು ಸಭೆ ಬಗ್ಗೆ ಮಾಹಿತಿ ನೀಡಿದ್ದಾರೆ. ಯಡಿಯೂರಪ್ಪ ಪ್ರತಿ ಶಾಸಕರಿಗೂ ಪತ್ರ ಬರೆದು ಸಭೆಗೆ ಆಹ್ವಾನ ನೀಡಿದ್ದಾರೆ.

ಜನವರಿ 9ರಂದು ತುಮಕೂರಿನಲ್ಲಿ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ನಿಗದಿಯಾಗಿತ್ತು. ಅಮಿತ್ ಶಾ ಅವರು ಅದರಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಸಂಸತ್ ಅಧಿವೇಶನದ ಹಿನ್ನಲೆಯಲ್ಲಿ ಕಾರ್ಯಕಾರಣಿ ರದ್ದಾಗಿತ್ತು. ಆದ್ದರಿಂದ, ದೆಹಲಿ ಅಥವ ಮುಂಬೈನಲ್ಲಿ ಸಭೆ ನಡೆಯಲಿದೆ.
ಶಿವಮೊಗ್ಗದಲ್ಲಿ ಈ ಕುರಿತು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. 'ಜನವರಿ 11 ಮತ್ತು 12ರಂದು ಕಾರ್ಯಕಾರಣಿ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯದ ಸಂಸದರು ಹಾಗೂ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದ್ದಾರೆ.
'ಲೋಕಸಭಾ ಕ್ಷೇತ್ರಗಳ ಇಂದಿನ ಸ್ಥಿತಿ-ಗತಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಬಳಿಕ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಗೆ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಪ್ರವಾಸದ ಬಗ್ಗೆಯೂ ತೀರ್ಮಾನ ಮಾಡಲಾಗುತ್ತದೆ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.












Click it and Unblock the Notifications