Amit Shah: ಬೆಂಗಳೂರಿಗೆ ಬಂದ ಅಮಿತ್ ಶಾ, ಇಂದೇ ರಾಜ್ಯಾಧ್ಯಕ್ಷರ ಬದಲಾವಣೆ?
ಬಿಜೆಪಿ ಚಾಣಕ್ಯ ಎಂದೇ ಕರೆಸಿಕೊಂಡಿರುವ ಕೇಂದ್ರ ಬಿಜೆಪಿ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ರಾಜ್ಯದಲ್ಲಿ ಬಣ ಬಡಿದಾಟ ಹಾಗೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರದ ಗದ್ದಲದ ನಡುವೆಯೇ ಅವರು ರಾಜ್ಯಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ನಾಯಕರೊಂದಿಗೆ ಅಮಿತ್ ಶಾ ಚರ್ಚೆ ನಡೆಸುವ ಸಾಧ್ಯತೆ ಇದ್ದು, ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮಹತ್ವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬರಮಾಡಿಕೊಂಡಿದ್ದಾರೆ. ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಮಾನ್ಯ ಅಮಿತ್ ಶಾ ಜೀ ಅವರನ್ನು ಬೆಂಗಳೂರಿನಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಅಮಿತ್ ಶಾ ಅವರ ಪ್ರತಿ ಬಾರಿಯ ರಾಜ್ಯ ಭೇಟಿಯ ಸಂದರ್ಭವೂ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುತ್ತದೆ. ಅವರ ಮಾರ್ಗದರ್ಶನ ನಮಗೆ ನಿರಂತರ ಕ್ರಿಯಾಶೀಲತೆಗೆ ಚೈತನ್ಯ ತುಂಬಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸದ್ಯ ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟವು ತಾರಕಕ್ಕೇರಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗುವ ಹೊತ್ತಿನಲ್ಲೇ ಈ ಒಡಕಿನ ಕಿಡಿಯು ಹೈಕಮಾಂಡ್ಗೆ ದೊಡ್ಡ ತಲೆನೋವಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಬೇರೆಯವರಿಗೆ ಅಧಿಕಾರ ನೀಡಬೇಕು ಎಂದು ಹಲವು ನಾಯಕರಿಂದ ಒತ್ತಾಯ ಕೇಳಿಬಂದಿದೆ. ಇದಕ್ಕಾಗಿ ಹಲವರು ದೆಹಲಿಗೆ ತೆರಳಿ, ಚರ್ಚೆ ನಡೆಸಿಯೂ ಬಂದಿದ್ದಾರೆ. ಆದರೆ ಈಗ ಖುದ್ದಾಗಿ ಅಮಿತ್ ಶಾ ಅವರೇ ರಾಜ್ಯಕ್ಕೆ ಬಂದಿರುವುದರ ಹಿಂದೆ ಬಲವಾದ ಕಾರಣ ಇದೆ ಎಂದು ಹೇಳಲಾಗುತ್ತಿದೆ.
ಸದ್ಯ ಅಮಿತ್ ಶಾ ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದಾರೆ ಎಂದು ಮೇಲ್ನೋಟಕ್ಕೆ ಹೇಳುತ್ತಿದ್ದರೂ, ಪಕ್ಷದ ನಾಯಕರೊಂದಿಗೆ ಗೌಪ್ಯ ಸಭೆ ನಡೆಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಎಲ್ಲರನ್ನೂ ದೆಹಲಿಗೆ ಕರೆಸಿಕೊಂಡರೆ ಸರಿ ಬರುವುದಿಲ್ಲ ಎಂಬ ಕಾರಣಕ್ಕೆ ಕಾರ್ಯಕ್ರಮದ ನೆಪದಲ್ಲಿ ಬೆಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆಯೂ ಇದೆ.
ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಅವರ ನಡುವಿನ ಬಣದಾಟಕ್ಕೂ ಬ್ರೇಕ್ ಹಾಕುವ ಸಾಧ್ಯತೆ ಇದೆ. ಮಾಧ್ಯಮಗಳ ಮುಂದೆ ಮನಬಂದಂತೆ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ತರುತ್ತಿರುವ ನಾಯಕರಿಗೂ ಫುಲ್ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಖ್ಯವಾಗಿ ಯತ್ನಾಳ್ ಅವರೊಂದಿಗೂ ಸಭೆ ನಡೆಸಿ, ಬಂಡಾಯ ಶಮನಗೊಳಿಸಲಿದ್ದಾರೆ ಎನ್ನಲಾಗಿದೆ. ಅಗತ್ಯ ಬಿದ್ದರೆ ಎಲ್ಲರ ಅಭಿಪ್ರಾಯ ಪಡೆದು, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ನಿರ್ಧಾರ ಪ್ರಕಟಿಸಬಹುದು ಎಂದು ಹೇಳಲಾಗುತ್ತಿದೆ.

ಯಾವುದೇ ರಾಜಕೀಯ ಉದ್ದೇಶವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆಯ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದರು. ಅಮಿತ್ ಶಾ ಅವರು ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದು, ನೆಲಮಂಗಲದಲ್ಲಿ ವಿಶ್ವತೀರ್ಥ ಮಹಾಸ್ವಾಮೀಜಿ ಸ್ಥಾಪಿಸಿರುವ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಇದನ್ನು ಬಿಟ್ಟು ಯಾವುದೇ ರಾಜಕೀಯ ಕಾರ್ಯಕ್ರಮಕ್ಕಾಗಿ ಅವರು ಇಲ್ಲಿಗೆ ಬರುತ್ತಿಲ್ಲ ಎಂದು ವಿಜಯೇಂದ್ರ ಹೇಳಿದ್ದರು. ಆದರೆ ರಾಜ್ಯ ಬಿಜೆಪಿ ಒಡೆದ ಮನೆಯಾಗಿರುವ ಹೊತ್ತಲ್ಲೇ ಅವರು ರಾಜ್ಯಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಪಕ್ಷದಲ್ಲಿರುವ ಬಣ ಬಡಿದಾಟದ ಕಿಚ್ಚನ್ನು ಅಮಿತ್ ಶಾ ಆರಿಸುತ್ತಾರಾ? ಎಂಬುದು ಕಾದುನೋಡಬೇಕಿದೆ.












Click it and Unblock the Notifications