ಅಮಿತ್ ಶಾ ರಾಜ್ಯ ಪ್ರವಾಸ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳೇ ಟಾರ್ಗೆಟ್!
ಜನವರಿ 27 ಮತ್ತು 28ರಂದು ಅಮಿತ್ ಶಾ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಇರುವ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಸಮಾವೇಶ ಆಯೋಜನೆ ಮಾಡಲಾಗುತ್ತಿದ್ದು, ಅದನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಂಗಳೂರು, ಜನವರಿ 25; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ. ಜನವರಿ 27 ಮತ್ತು 28ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಿಸಲು ತಂತ್ರ ರೂಪಿಸಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ನಾಯಕರು ಪದೇ ಪದೇ ಈ ಭಾಗದ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಅಮಿತ್ ಶಾ ಧಾರವಾಡ ಮತ್ತು ಬೆಳಗಾವಿಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಬಳಿಕ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ಅಮಿತ್ ಶಾ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಬೇಕು ಎಂಬುದು ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆಯಾಗಿದೆ. ಆದ್ದರಿಂದ ರಾಜ್ಯ ಬಿಜೆಪಿ ಘಟಕ ಜನರ ಬಳಿ ತೆರಳಲು ಹಲವಾರು ಕಾರ್ಯಕ್ರಮ ರೂಪಿಸಿದೆ. ರಾಷ್ಟ್ರೀಯ ನಾಯಕರು ರಾಜ್ಯ ನಾಯಕರಿಗೆ 150 + ಸ್ಥಾನದಲ್ಲಿ ಗೆಲ್ಲುವ ಟಾರ್ಗೆಟ್ ನೀಡಿದ್ದಾರೆ. ಇದನ್ನು ಸಾಕಾರಗೊಳಿಸಲು ಪಕ್ಷದ ನಾಯಕರು ತಂತ್ರಗಳನ್ನು ರೂಪಿಸುತ್ತಿದ್ದಾರೆ.

ಅಮಿತ್ ಶಾ ಕರ್ನಾಟಕ ಪ್ರವಾಸ
ಅಮಿತ್ ಶಾ ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಜನವರಿ 28ರಂದು ಬೆಳಗ್ಗೆ 10 ಗಂಟೆಗೆ ಕುಂದಗೋಳಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಕೆಎಲ್ಇ ಸಂಸ್ಥೆಯ ಕಾರ್ಯಕ್ರಮ, ಬಳಿಕ ಧಾರವಾಡದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಕೇಂದ್ರಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 3.45ಕ್ಕೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.

ಬೆಳಗಾವಿಯಲ್ಲಿ ಅಮಿತ್ ಶಾ ಕಾರ್ಯಕ್ರಮ
ಧಾರವಾಡದಿಂದ ಬೆಳಗಾವಿಗೆ ಆಗಮಿಸುವ ಅಮಿತ್ ಶಾ ಎಂ. ಕೆ. ಹುಬ್ಬಳ್ಳಿಯಲ್ಲಿ ಪಕ್ಷದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕಿತ್ತೂರು ವಿಧಾನಸಭಾ ಕ್ಷೇತ್ರದ ಸಮಾವೇಶವನ್ನು ಎಂ. ಕೆ. ಹುಬ್ಬಳ್ಳಿಯಲ್ಲಿ ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ, ಬಿಜೆಪಿ ಶಾಸಕರು ಇರುವ ಕ್ಷೇತ್ರವನ್ನು ಕೇಂದ್ರವನ್ನಾಗಿ ಮಾಡಿ ಬಿಜೆಪಿ ಸಮಾವೇಶ ಆಯೋಜನೆ ಮಾಡುತ್ತಿದೆ. ಈ ಸಮಾವೇಶ ಉದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ.

ಬಿಜೆಪಿ ಬಾವುಟ ಹಾರಿಸಲು ಮಾಸ್ಟರ್ ಪ್ಲಾನ್
ಬೆಳಗಾವಿ ಗ್ರಾಮೀಣ, ಖಾನಾಪುರ, ಬೈಲಹೊಂಗಲದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಈ ಪ್ರಭಾವ ತಗ್ಗಿಸಿ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ಬಿಜೆಪಿ ತಂತ್ರ ರೂಪಿಸಿದೆ. ಇದಕ್ಕಾಗಿಯೇ ಎಂ. ಕೆ. ಹುಬ್ಬಳ್ಳಿಯಲ್ಲಿ ಪಕ್ಷದ ಸಮಾವೇಶ ಆಯೋಜನೆ ಮಾಡಲಾಗಿದೆ.

ಅಮಿತ್ ಶಾ ಸರಣಿ ಸಭೆಗಳು
ಜನವರಿ 28ರಂದು ಸಂಜೆ 6.30 ರಿಂದ 10 ಗಂಟೆಯ ತನಕ ಬೆಳಗಾವಿಯಲ್ಲಿ ಅಮಿತ್ ಶಾ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಸಂಘ ಪರಿವಾರದ ಹಿರಿಯರೊಂದಿಗೆ ಸಭೆ ನಡೆಯಲಿದೆ.
ಪಕ್ಷದ ಸಂಘಟನೆ ಬಗ್ಗೆ ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿಯ ಪಕ್ಷದ ಪದಾಧಿಕಾರಿಗಳ ಜೊತೆ ಸಭೆ ನಿಗದಿದಯಾಗಿದೆ. ಬೆಳಗಾವಿ ಜಿಲ್ಲೆಯ ಪಕ್ಷದ ಹಿರಿಯ ನಾಯಕರ ಸಭೆ ಸಹ ನಿಗದಿ ಮಾಡಲಾಗಿದೆ. ಬೆಳಗಾವಿಯಿಂದ 10 ಗಂಟೆ ಬಳಿಕ ಅಮಿತ್ ಶಾ ದೆಹಲಿಗೆ ವಾಪಸ್ ಆಗಲಿದ್ದಾರೆ.












Click it and Unblock the Notifications