ಎಚ್.ಆಂಜನೇಯ ತವರು ಕ್ಷೇತ್ರದಲ್ಲಿ ಅಮಿತ್ ಶಾ ಭಾಷಣ!
ಚಿತ್ರದುರ್ಗ, ಜನವರಿ 02 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಚಿತ್ರದುರ್ಗ ಪ್ರವಾಸದಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ಚಿತ್ರದುರ್ಗದ ಬದಲು ಹೊಳಲ್ಕರೆಯಲ್ಲಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಜನವರಿ 10ರ ಬುಧವಾರ ಅಮಿತ್ ಶಾ ಚಿತ್ರದುರ್ಗ ಭೇಟಿ ನಿಗದಿಯಾಗಿತ್ತು. ಚಿತ್ರದುರ್ಗದಲ್ಲಿಯೇ ಅವರು ಪಕ್ಷದ ಪರಿವರ್ತನಾ ಯಾತ್ರೆ ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ, ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ.
ಅಮಿತ್ ಶಾ ಅವರು ಚಿತ್ರದುರ್ಗದ ಬದಲು ಹೊಳಲ್ಕೆರೆಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಘಟಕ ಸ್ಪಷ್ಟಪಡಿಸಿದೆ. ಚಿತ್ರದುರ್ಗದಲ್ಲಿ ನಡೆಯುವ ಸಮಾವೇಶದಲ್ಲಿ ವಿವಿಧ ನಾಯಕರು ಪಾಲ್ಗೊಳ್ಳಲಿದ್ದಾರೆ.

ಹೊಳಲ್ಕೆರೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮತ್ತು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರ ತವರು ಕ್ಷೇತ್ರ. ಅಲ್ಲಿ ಸಮಾವೇಶ ನಡೆಸುವ ಮೂಲಕ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಲು ತಯಾರಿ ನಡೆಸಿದೆ.
2013ರ ಚುನಾವಣೆಯಲ್ಲಿ ಹೊಳಲ್ಕೆರೆ ಕ್ಷೇತ್ರದಲ್ಲಿ ಆಂಜನೇಯ ಅವರು 76, 856 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ದೇವೇಂದ್ರ ನಾಯಕ್ ಕೇವಲ 7,595 ಮತಗಳನ್ನು ಪಡೆದಿದ್ದರು.
6 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. 2018ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪಕ್ಷ ತಂತ್ರ ರೂಪಿಸಿದೆ.












Click it and Unblock the Notifications