ಡಿ.31ರಂದು ಬೆಂಗಳೂರಿಗೆ ಅಮಿತ್ ಶಾ, ಹಲವು ಸಭೆ
ಬೆಂಗಳೂರು, ಡಿಸೆಂಬರ್ 29 : ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಬಳಿಕ ಬಿಜೆಪಿ ಕರ್ನಾಟಕದ ಮೇಲೆ ಕಣ್ಣಿಟ್ಟಿದೆ. ಕಾಂಗ್ರೆಸ್ ಆಡಳಿತವಿರುವ ದೇಶದ ಅತೀ ದೊಡ್ಡ ರಾಜ್ಯದಲ್ಲಿ ಕಮಲ ಅರಳಬೇಕು ಎಂಬುದು ಬಿಜೆಪಿ ರಾಷ್ಟ್ರೀಯ ನಾಯಕರ ಗುರಿ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಕ್ಷ ಡಿಸೆಂಬರ್ 31ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆ ಕುರಿತು ಅವರು ವಿವಿಧ ಸಭೆಗಳನ್ನು ನಡೆಸಲಿದ್ದಾರೆ.

ಹಿಂದೆ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದಾಗ ಒಬ್ಬ ಸಂಸದನಿಗೆ 2 ವಿಧಾನಸಭಾ ಕ್ಷೇತ್ರ, ಒಬ್ಬರು ಶಾಸಕರಿಗೆ ಅವರು ಮತ್ತು ಪಕ್ಕದ ಕ್ಷೇತ್ರದಲ್ಲಿ ಸಂಘಟನೆ ಮಾಡುವ ಜವಾಬ್ದಾರಿ ನೀಡಲಾಗಿತ್ತು. ಈ ಬಗ್ಗೆ ಶಾಸಕರು, ಸಂಸದರ ಜೊತೆ ಅಮಿತ್ ಶಾ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
140 ಕ್ಷೇತ್ರಗಳಲ್ಲಿ ಪಕ್ಷದ ಪರಿವರ್ತನಾ ಯಾತ್ರೆ ಮುಕ್ತಾಯಗೊಂಡಿದೆ. ಈ ಬಗ್ಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೊತೆ ಸಭೆ ನಡೆಸಲಿದ್ದಾರೆ ಮತ್ತು ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಮುಕ್ತವಾಗಬೇಕು, 2018ರ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಬಿಜೆಪಿ ನಾಯಕರ ಗುರಿ. ಇದಕ್ಕಾಗಿ ಅಮಿತ್ ಶಾ ರಾಜ್ಯ ನಾಯಕರಿಗೆ ಮತ್ತಷ್ಟು ಜವಾಬ್ದಾರಿಗಳನ್ನು ನೀಡಲಿದ್ದಾರೆ.
ಜನವರಿ 28ರಂದು ಪರಿವರ್ತಯಾ ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ. ಇದರಲ್ಲಿ ಪ್ರಧಾನ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಬಗ್ಗೆಯೂ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.











Click it and Unblock the Notifications