ತಮಿಳುನಾಡಿಗೆ ಹೆಚ್ಚುವರಿ 100 ಟಿಎಂಸಿ ನೀರು ಹರಿದಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು, ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬೇಕಿತ್ತು. ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಎಲ್ಲಾ ಕಾರಣಗಳನ್ನಿಟ್ಟುಕೊಂಡು ಮೇಕೆದಾಟು ಯೋಜನೆ ಅನುಮತಿಗೆ ಮನವಿ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದ 220 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. ಮೋಡಕ್ಕೆ ಯಾವ ಸರ್ಕಾರ ಇದೆ ಎಂದು ಗೊತ್ತಾಗುತ್ತದೆಯೇ? ಮೂರು- ನಾಲ್ಕು ವರ್ಷಗಳಿಗೆ ಒಮ್ಮೆ ಬರಗಾಲ ಬರುವುದು ಪ್ರಕೃತಿ ನಿಯಮ. ರಾಜ್ಯದ ಎಲ್ಲಾ ಪ್ರಮುಖ ಅಣೆಕಟ್ಟುಗಳು ತುಂಬಿವೆ. ಒಂದಷ್ಟು ಜಿಲ್ಲೆಗಳಲ್ಲಿ ಕೆರೆಗಳು ತುಂಬಿಲ್ಲ ಎಂದು ಹೇಳಿದರು.

ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ"ಎಂದು ತಿಳಿಸಿದರು. ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಈ ಅಣೆಕಟ್ಟಿನ ಉದ್ಯಾನವನ ಉತ್ತಮವಾಗಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಏನು ಕೆಲಸ ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ ಎಂದರು. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಜನ ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಎಲ್ಲರ ಬಳಿ ಯಾವ, ಕೆಲಸಗಳನ್ನು ಮಾಡಬಹುದು ಎಂದು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ವಿಚಾರವಾಗಿ ಪ್ರತ್ಯೇಕ ಸಭೆ ಕರೆದು, ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ಪರಿಹಾರ ನೀಡಬಹುದು ಎಂಬುದರ ಕುರಿತು ತೀರ್ಮಾನ ಮಾಡಲಾಗುವುದು. ಪುನರ್ವಸತಿ ವಿಚಾರವಾಗಿ ಅವಗಾಹನೆ ನಡೆಸಬೇಕಿದೆ. ಈಗಾಗಲೇ ಕಳೆದ ವರ್ಷದ ಏಪ್ರಿಲ್, ನವೆಂಬರ್ ಅಲ್ಲಿ ತಪಾಸಣೆ ನಡೆಲಾಗಿದೆ ಎಂದು ಹೇಳಿದರು.
Paytm: ಝೊಮ್ಯಾಟೊಗೆ ಟಿಕೆಟಿಂಗ್ ವ್ಯಾಪಾರ ಮಾರಿದ ಪೇಟಿಎಂ?
ಕೃಷ್ಣ ನದಿ ನೀರಿನ ಬಳಕೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿ, ನಮ್ಮ ರಾಜ್ಯದ ಪಾಲಿನ ಒಂದು ಹನಿ ನೀರನ್ನು ಸಹ ರೈತರ ಹಿತ ಕಾಪಾಡಲು ಬಳಕೆ ಮಾಡಲಾಗುವುದು. ನಿಮ್ಮ (ಮಾಧ್ಯಮಗಳ) ಸಲಹೆ ಇದ್ದರೆ ನೀಡಿ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.












Click it and Unblock the Notifications