ಜಲಾಶಯಗಳ ನೀರು ಬಿಡುಗಡೆ ಮಾಹಿತಿ ಹಂಚಿಕೆಗೆ ಕರ್ನಾಟಕ-ಮಹಾರಾಷ್ಟ್ರ ಒಪ್ಪಿಗೆ
ಬೆಂಗಳೂರು, ಜೂನ್ 19: ಮಳೆ ನೀರಿನ ಪ್ರಮಾಣ, ಜಲಾಶಯಗಳ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಪ್ರತಿ ಕ್ಷಣದ ಮಾಹಿತಿಯನ್ನು ಪರಸ್ಪರ ಹಂಚಿಕೊಳ್ಳಲು ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳು ತೀರ್ಮಾನಿಸಿವೆ.
ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಇದೀಗ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಶನಿವಾರ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣಾ ಸಮಿತಿಯ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಯಡಿಯೂರಪ್ಪ, "ಕೃಷ್ಣಾ ಹಾಗೂ ಭೀಮಾ ನದಿಯ ಜಲಾನಯನ ಪ್ರದೇಶದಲ್ಲಿ ಪ್ರವಾಹ ನಿರ್ವಹಣೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಎರಡೂ ರಾಜ್ಯಗಳ ನಡುವೆ ಮಾಹಿತಿ ಹಂಚಿಕೆಗೆ ಒಪ್ಪಿಗೆ ಸೂಚಿಸಲಾಗಿದೆ. ರಾಜ್ಯಗಳ ನಡುವೆ ಉತ್ತಮ ಸಂವಹನ ಹಾಗೂ ಸಹಕಾರ ಇರಲಿದೆ. ಇದು ಪ್ರವಾಹ ನಿರ್ವಹಣೆಗೆ ನೆರವಾಗಲಿದೆ," ಎಂದು ಹೇಳಿದ್ದಾರೆ.

ಬೇಸಿಗೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 4 ಟಿಎಂಸಿ ಅಡಿ ನೀರು ಹಾಗೂ ಮಳೆಗಾಲದಲ್ಲಿ ಮಹಾರಾಷ್ಟ್ರಕ್ಕೆ ಇಲ್ಲಿಂದ ಅಷ್ಟೇ ಪ್ರಮಾಣದ ನೀರು ಒದಗಿಸುವ ಕುರಿತು ತಾಂತ್ರಿಕ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿ ಹೆಚ್ಚುವರಿ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಕರ್ನಾಟಕ ಮತ್ತು ಮಹಾರಾಷ್ಟ್ರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications