Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್
ಬೆಂಗಳೂರು: ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ 4ನೇ ಸ್ಥಾನದಲ್ಲಿ ಅತ್ಯಧಿಕ ವೇತನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ.
ಬಜೆಟ್ ಮೇಲಿನ ಅಧಿವೇಶನ ಕುರಿತು ನಡೆದ ವಿಧಾನಸಭೆಯ ಕಲಾಪದ ವೇಳೆ ಇಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಸರ್ಕಾರಿ ಸೇವೆಗಳನ್ನು ಜನರಿಗೆ ತಲುಪಿಸುವ ಜವಬ್ದಾರಿ ಇದೆ. ಇವರುಗಳು ಕೆಲಸದ ಕೊಂಡಿಯಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ಸರ್ಕಾರದ ಕೆಲಸಗಳನ್ನು ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತಂದುಕೊಡುತ್ತಿದ್ದಾರೆ. ಇವರುಗಳಿಗೆ ಸೇವಾ ಭದ್ರತೆ, ಆರೋಗ್ಯ ಭದ್ರತೆ ಹಾಗೂ ವೇತನವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಪ್ರಶ್ನಿಸಿದರು.

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಳೆದ ಸಾಲಿನ (2025-26) ಆಯವ್ಯಯ ಘೋಷಣೆ ಅನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.1000-00ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ ರೂ.750-00ಗಳನ್ನು ಹೆಚ್ಚಿಸಲಾಗಿದೆ ಎಂದರು.
ವೇತನ ಪರಿಷ್ಕರಣೆ ಬಗ್ಗೆ ಸಚಿವೆ ಹೇಳಿದ್ದೇನು?
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಸರ್ಕಾರದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತಂದುಕೊಡುವ ನಿಟ್ಟಿನಲ್ಲಿ ಈ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ 4ನೇ ಸ್ಥಾನದಲ್ಲಿ ಅತ್ಯಧಿಕ ವೇತನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.1000ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ ರೂ.750ಗಳನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತೆಯರ ವೇತನವನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಕೇಂದ್ರದಿಂದ ಹಣ ಬಂದಿಲ್ಲ: ಸಚಿವೆ ಆರೋಪ
ಈ ಯೋಜನೆಯು ದಿವಂಗತ ಇಂದಿರಾಗಾಂಧಿಯವರು ಜಾರಿಗೆ ತಂದಿರುವ ಯೋಜನೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ನೀಡುವ ವೇತನವು ಕೇಂದ್ರ ಸರ್ಕಾರದ ಪಾಲು 9800 ಹಾಗೂ ರಾಜ್ಯ ಸರ್ಕಾರದ ಪಾಲು 2,700 ರಾಜ್ಯ ಸರ್ಕಾರದ ಪಾಲಾಗಿರುತ್ತದೆ. ಆದರೆ ಕೇಂದ್ರ ಸರ್ಕಾರದ ಪಾಲು ಬರುತ್ತಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಈ ಕುರಿತು ಸ್ಪಂದಿಸಿರುವುದಿಲ್ಲ ಎಂದು ತಿಳಿಸಿದರು.
ಪ್ರಸ್ತುತ 5000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ಹೇಳಿದರು.












Click it and Unblock the Notifications