ಮುಖ್ಯಮಂತ್ರಿಗಳನ್ನು ಕಂಡಾಗ ಕನಿಕರ ಮೂಡುತ್ತಿದೆ; ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 25; "ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಲಸಿಕೆ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಲಸಿಕೆ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿ ಅವರೇ, 'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ" ಎಂದು ಒತ್ತಾಯಿಸಿದ್ದಾರೆ.
"ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ 10 ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪಿಎಂಮೋ ಇಂಡಿಯಾ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ" ಎಂದು ಟ್ವೀಟ್ ಮಾಡಿದ್ದಾರೆ.

ಯೋಜನೆ ಕೊಂಡಾಡುವುದು ತಮಾಷೆ
"ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು, ಈಗ ಪ್ರಧಾನಿಗಳು ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಡವರ ಶಾಪಕ್ಕೆ ಈಡಾಗಬೇಡಿ
"ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿ ಅವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಡವರ ವಿರೋಧಿ ಸರ್ಕಾರ
"ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು" ಎಂದು ಟ್ವೀಟ್ ಮಾಡಿದ್ದಾರೆ.
Recommended Video
|
ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ
ಸಿದ್ದರಾಮಯ್ಯ ಅವರು "25 @BJP4Karnataka ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ" ಎಂದು ಆಗ್ರಹಿಸಿದ್ದಾರೆ.












Click it and Unblock the Notifications