65 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ : ಹೈಕೋರ್ಟ್
ಬೆಂಗಳೂರು, ಜುಲೈ 23 : ರಾಜ್ಯದ 65 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಬೇಕು, ತಾಲೂಕುಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್. ಟಿ. ನರೇಂದ್ರ ಪ್ರಸಾದ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದ್ದು, ಎರಡು ವಾರಗಳ ಕಾಲಾವಕಾಶ ಕೊಟ್ಟಿದೆ.
65 ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಪ್ರತಿ ತಾಲೂಕಿನಲ್ಲಿ ಒಂದು ಗೋ ಶಾಲೆ ಅಥವ ಜಾನುವಾರ ಶಿಬಿರ ಸ್ಥಾಪನೆ ಮಾಡಬೇಕು. ಇದನ್ನು ಜಾರಿಗೊಳಿಸಲು ನ್ಯಾಯಾಲಯದ ಆದೇಶ ಪ್ರತಿ ಸಿಗುವ ತನಕ ಕಾಯಬೇಕಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ರಾಜ್ಯದ ಬರ ಪೀಡಿತ ಪ್ರದೇಶಗಳ ಸಮಗ್ರ ನಿರ್ಹವಣೆಗೆ ಸಂಬಂಧಿಸಿದಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅನುಷ್ಠಾನದ ಕುರಿತು ನ್ಯಾಯಾಲಯಕ್ಕೆ ವರದಿ ನೀಡಬೇಕು. ಪ್ರತಿ ಜಾನುವಾರುಗಳಿಗೆ ಒಣ, ಹಸಿ, ಪಶು ಆಹಾರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
6 ತಿಂಗಳ ಹಿಂದೆ ಕರ್ನಾಟಕ ಸರ್ಕಾರ 156 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿತ್ತು. ರಾಜ್ಯ ಸರ್ಕಾರ 2018ರ ಡಿಸೆಂಬರ್ 29ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ 2019ರ ಜೂನ್ 30ಕ್ಕೆ ಕೊನೆಗೊಂಡಿದೆ.
2019ನೇ ಸಾಲಿನಲ್ಲಿಯೂ 30 ಜಿಲ್ಲೆಗಳ 156 ತಾಲೂಕುಗಳನ್ನು ರಾಜ್ಯ ಸರ್ಕಾರ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 107 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. 20.40 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಮಳೆ ಕೊರತೆ ಎದುರಿಸುತ್ತಿದೆ.












Click it and Unblock the Notifications