ಖಾಸಗಿ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆ: ಸಿದ್ದಗಂಗಾ ಶ್ರೀಗಳಿಗೆ ಸುರೇಶ್ ಕುಮಾರ್ ಪತ್ರ!
ಬೆಂಗಳೂರು, ಜ. 06: ಖಾಸಗಿ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆನ್ಲೈನ್ ಮೂಲಕವೇ ನಿರ್ವಹಿಸಲಾಗುವುದೆಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರುಪ್ಸಾ ಸಂಘಟನೆಯ ಪ್ರತಿನಿಧಿಗಳೊಂದಿಗೆ ಇಂದು ಸಭೆ ನಡೆಸಿದ ಸಂದರ್ಭದಲ್ಲಿ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳು ಶಿಕ್ಷಣ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಅವು ಅನಗತ್ಯ ಶೋಷಣೆಗೊಳಗಾಗಬಾರದು. ಹೀಗಾಗಿ ಈ ರೀತಿಯ ಕ್ರಮಗಳು ಮುಖ್ಯವಾಗಿದ್ದು, ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸುರೇಶ್ ಕುಮಾರ್ ಅವರು ನಿರ್ದೇಶನ ನೀಡಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಮಾರ್ಗದರ್ಶನದಂತೆ ಮಾನ್ಯತೆ ನವೀಕರಣ ಪ್ರಕ್ರಿಯೆಯಲ್ಲಿ ಸುರಕ್ಷತಾ ಕ್ರಮಗಳ ಪರಿಶೀಲನೆ ಕೂಡ ಕಡ್ಡಾಯವಾಗಿದೆ. ಹಾಗೂ ಅವುಗಳನ್ನು ಪಾಲಿಸಬೇಕಾದ್ದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ಕೂಡ ಆಗಿದೆ. ಇವೆಲ್ಲವೂ ನ್ಯಾಯಾಲಯದ ಆದೇಶದಂತೆ ನಡೆಯಬೇಕಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಿಂಗಳ ಕಾಲಾವಕಾಶ ನೀಡಿ ಮಾನ್ಯತೆ ನವೀಕರಿಸಲು ಅನುಮತಿ ಕೊಡಲಾಗಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸದ ಶಾಲೆಗಳ ವಿರುದ್ಧ ನಿಯಮಗಳ ಅನುಸಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಆರ್ಟಿಇ ಅನುದಾನ
ಸರ್ಕಾರದಿಂದ 2019-20ನೇ ಸಾಲಿಗೆ ಸಂಬಂಧಿಸಿದಂತೆ ಒದಗಿಸಲಾಗಿರುವ ಆರ್.ಟಿ.ಇ ಅನುದಾನವನ್ನು ಸಂಪೂರ್ಣವಾಗಿ ಶಾಲೆಗಳಿಗೆ ಬಿಡುಗಡೆ ಮಾಡಲಾಗಿದ್ದು, ಆರ್.ಟಿ.ಇ ನಿಯಮಗಳ ಪ್ರಕಾರ ಶೈಕ್ಷಣಿಕ ವರ್ಷದ ಸೆಪ್ಟೆಂಬರ್ ಮತ್ತು ಜನವರಿ ತಿಂಗಳಲ್ಲಿ ಶುಲ್ಕ ಮರುಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಶಿಕ್ಷಕರ ಕಲ್ಯಾಣ ನಿಧಿಯಿಂದ ಕೆಲವು ಸೌಲಭ್ಯಗಳನ್ನು ವಿಸ್ತರಿಸುವ ಬಗ್ಗೆ ನಿಯಮಗಳ ವ್ಯಾಪ್ತಿಯಲ್ಲಿ ಪರಿಶೀಲಿಸಲಾಗುವುದೆಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಈಗಾಗಲೇ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪಠ್ಯಕ್ರಮಕ್ಕೆ (Syllabus) ಸಂಬಂಧಿಸಿದಂತೆ ಪರೀಕ್ಷೆಗೆ ಅವಶ್ಯಕವಿರುವ ಪಠ್ಯ ಮಾತ್ರ ತಿಳಿಸಲಾಗುವುದು. ಜೊತೆಗೆ ಶೈಕ್ಷಣಿಕ ವೇಳಾಪಟ್ಟಿ ಕುರಿತಂತೆ ಶೀಘ್ರವಾಗಿ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಭೆಯಲ್ಲಿ ಹೇಳಿದರು.

ಕೇಂದ್ರ ವಿತ್ತ ಸಚಿವರಿಗೆ ಪತ್ರ
ಶಿಕ್ಷಣ ಸಂಸ್ಥೆಗಳು ಮಕ್ಕಳ ಹಿತದೃಷ್ಟಿಯಿಂದ ಉತ್ತಮ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಬ್ಯಾಂಕ್ಗಳ ಮೂಲಕ ಸಾಲ ಸೌಲಭ್ಯಗಳನ್ನು ಮಾಡಿಕೊಂಡಿವೆ. ಪ್ರಸಕ್ತ ವರ್ಷದಲ್ಲಿ ಒದಗಿ ಬಂದಿರುವ ದುಸ್ಥಿತಿಯ ಕಾರಣ ಇ.ಎಂ.ಐ ಮುಂದೂಡಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬಂದಿದೆ. ಆದರೆ ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿಷಯವಾದ್ದರಿಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಅನುದಾನ ವ್ಯಾಪ್ತಿಗೆ ಶಾಲೆಗಳು
1995 ರಿಂದ 2000 ರ ಅವಧಿಯಲ್ಲಿ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೊಳಪಡಿಸಬೇಕೆಂಬುದು ಸಹ ಶಿಕ್ಷಣ ಇಲಾಖೆಯ ನಿಲುವಾಗಿದ್ದು, ಈ ಬಗ್ಗೆ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನ ಸೆಳೆಯಲಾಗುವುದೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈಗಿನ ಸಂಕಷ್ಟದ ಸಂದರ್ಭದಲ್ಲಿ ಮಕ್ಕಳ ಹಿತ ನಮ್ಮೆಲ್ಲರ ಪರಮ ಧ್ಯೇಯವಾಗಬೇಕು. ಖಾಸಗಿ ಶಾಲೆಗಳು ವಿದ್ಯಾಗಮ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಲು ಮುಂದಾಗಬೇಕೆಂದರು.
Recommended Video

ಸಿದ್ದಗಂಗಾ ಶ್ರೀಗಳಿಗೆ ಪತ್ರ
ಖಾಸಗಿ ವಿದ್ಯಾಸಂಸ್ಥೆಗಳ ಮಾನ್ಯತೆ ನವೀಕರಣ ನಿಯಮಗಳ ಸಡಿಲಿಸುವ ಕುರಿತು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳ ಪತ್ರಿಕಾ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಶ್ರೀಗಳು ಪ್ರಸ್ತಾಪಿಸಿರುವ ವಿಷಯದ ಕುರಿತಂತೆ ಸರ್ಕಾರ ಗಮನ ಹರಿಸಿ ಸೂಕ್ತಕ್ರಮ ಕೈಗೊಳ್ಳಲಿದೆ ಎಂದು ಪತ್ರದಲ್ಲಿ ಸುರೇಶ್ ಕುಮಾರ್ ತಿಳಿಸಿದ್ದಾರೆ.












Click it and Unblock the Notifications