ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ!
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ನ ಶಾಸಕರೇ ತಿರುಗಿ ಬಿದಿದ್ದಾರೆ. ಈಚೆಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದು ತೀವ್ರ ಮುಜುಗರವನ್ನು ಸೃಷ್ಟಿ ಮಾಡಿದ್ದರು. ಇದೀಗ ಕಾಂಗ್ರೆಸ್ನ ಮತ್ತೊಬ್ಬ ಶಾಸಕ (ವಿಜಯ ನಗರ) ಎಚ್.ಆರ್ ಗವಿಯಪ್ಪ ಅವರು ಸಹ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ಶಾಸಕರೇ ತಿರುಗಿ ಬೀಳುತ್ತಿರುವುದನ್ನೇ ವಿರೋಧ ಪಕ್ಷಗಳು ಅಸ್ತ್ರವನ್ನಾಗಿಸಿಕೊಳ್ಳುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರವು ದಿವಾಳಿಯಾಗಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಲ್ಲೇ ಇದ್ದಾರೆ. ಇದರ ಬೆನ್ನಲ್ಲೇ ಸಾಲು ಸಾಲು ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ.
ಅನುದಾನ ನೀಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ದೂರಿದ್ದರು. ನಮ್ಮ ಸಚಿವರೇ ನಮಗೆ ಕಿಮ್ಮತ್ತು ಕೊಡುತ್ತಿಲ್ಲ. ಇದೇ ರೀತಿ ಮುಂದುವರಿದೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ದೂರಿದ್ದರು. ನಾನು ಯಾವ ಪುರುಷಾರ್ಥಕ್ಕಾಗಿ ಶಾಸಕನಾಗಿರಬೇಕು ನಮ್ಮದೇ ಕ್ಷೇತ್ರದ ಜನರ ಸಮಸ್ಯೆಗಳಿಗೆ ನನ್ನಿಂದ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಈ ರೀತಿ ಹೇಳಿಕೊಳ್ಳಬೇಕಾದರೆ, ಪರಿಸ್ಥಿತಿ ಏನಾಗಿರಬೇಕು ಹೇಳಿ ಎಂದಿದ್ದರು.

ಇದೀಗ ವಿಜಯನಗರದ ಶಾಸಕ ಎಚ್.ಆರ್ ಗವಿಯಪ್ಪ ಅವರು ನನ್ನ ಕ್ಷೇತ್ರದಲ್ಲಿ ಜನ ಪ್ರಶ್ನೆ ಮಾಡುತ್ತಿದ್ದಾರೆ. ಅವರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಬೇರೆ ಕ್ಷೇತ್ರಗಳಿಗೆ ಭರ್ಜರಿ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ, ನಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗುತ್ತಿಲ್ಲ.
ವಿಜಯನಗರ ಕ್ಷೇತ್ರಕ್ಕೆ ಕನಿಷ್ಠ 10 ಕೋಟಿ ರೂಪಾಯಿಯಾದರೂ ಬೇಡವೇ ಎಂದು ಪ್ರಶ್ನೆ ಮಾಡಿದ್ದಾರೆ. ನಾವು ಕೆಲಸ ಮಾಡುವುದಕ್ಕೆ ಅವಕಾಶ ಮಾಡಿಕೊಡಬೇಕು. ಹೋದ ಬಾರಿ ಬಿಜೆಪಿ ಶಾಸಕರು ಸ್ವಲ್ಪ ಕೆಲಸ ಮಾಡಿದ್ದಾರೆ ಎಂದೂ ಅವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ. ಇದನ್ನು ಜೆಡಿಎಸ್ ಪಕ್ಷ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡು ವ್ಯಂಗ್ಯವಾಡಿದೆ.
ಅನುದಾನ ಸಾಕಾಗುತ್ತಿಲ್ಲ ಎಂದ ಕಾಂಗ್ರೆಸ್ ಶಾಸಕ
ಇನ್ನು ಇದೀಗ ಕಾಂಗ್ರೆಸ್ನ ಮತ್ತೊಬ್ಬ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿಜಯನಗರದ ಶಾಸಕ ಎಚ್.ಆರ್ ಗವಿಯಪ್ಪ ಅವರು ಸರ್ಕಾರ ನಮ್ಮ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುತ್ತಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ನಮ್ಮ ಜಿಲ್ಲೆ ಹೊಸದಾಗಿ ರಚನೆಯಾಗಿದೆ. ಎಲ್ಲಾ ಇಲಾಖೆಗಳಿಗೂ ಹೊಸದಾಗಿ ಕಚೇರಿ ಹಾಗೂ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಕಚೇರಿಗಳನ್ನು ನಿರ್ಮಿಸಿಕೊಡಬೇಕಾಗಿದೆ.
ಬೇರೆ ಜಿಲ್ಲೆಗಳಿಗೆ ವರ್ಷಕ್ಕೆ 60ರಿಂದ 80 ಕೋಟಿ ರೂಪಾಯಿಯ ವರೆಗೆ ಅನುದಾನ ಕೊಡ್ತಿದ್ದಾರೆ. ಆದರೆ, ನಮ್ಮ ಕ್ಷೇತ್ರಕ್ಕೆ 2023-24ಕ್ಕೆ 22 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಅದರಲ್ಲಿ 10 ಕೋಟಿ ರೂಪಾಯಿ ಆಸ್ಪತ್ರೆಗೆ ಹಾಗೂ ರಸ್ತೆ ಅಭಿವೃದ್ಧಿಗೆ ಸಾಕಾಗಿಲ್ಲ. 2024 -25ರಲ್ಲಿ 25 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಅದರಲ್ಲೂ ಜಿಲ್ಲಾ ಆಸ್ಪತ್ರೆ ಕಟ್ಟಡ ನಿರ್ಮಾಣವಾಗುತ್ತಿದೆ. 250 ಹಾಸಿಗೆಗಳ ನಿರ್ಮಾಣವಾಗುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆಯೇ: ಜೆಡಿಎಸ್
ದಿವಾಳಿಯಾಗಿದೆಯಾ ರಾಜ್ಯ ಕಾಂಗ್ರೆಸ್ ಸರ್ಕಾರ ದುಡ್ಡಿಲ್ಲದ ಖಾಲಿ 'ಕೈ' ಆಡಳಿತ ಎಂದು ಜೆಡಿಎಸ್ ಪಕ್ಷವು ವ್ಯಂಗ್ಯವಾಡಿದೆ. ರಾಜು ಕಾಗೆ ಅವರಾದ ಮೇಲೆ ಇದೀಗ ಕಾಂಗ್ರೆಸ್ನ ಮತ್ತೊಬ್ಬ ಶಾಸಕ ಗವಿಯಪ್ಪ ಅವರು, ನಮ್ಮ ಕ್ಷೇತ್ರಕ್ಕೆ ಅನುದಾನ ಸಾಕಾಗ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
ನೂತನ ಜಿಲ್ಲೆಯಾಗಿರುವ ವಿಜಯನಗರಕ್ಕೆ ಕೇವಲ 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿನ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ.ಆದರೆ, ಈ ಬಾರಿ ಅನುದಾನ ಸಿಗುತ್ತಿಲ್ಲ. ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿನ ಆಸ್ಪತ್ರೆಗಳು ಹಾಗೂ ರಸ್ತೆಗಳ ಸಮಸ್ಯೆ ಹೆಚ್ಚಾಗಿವೆ. ಕ್ಷೇತ್ರದ ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ಇದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅದಕ್ಷ ಆಡಳಿತಕ್ಕೆ ಉದಾಹರಣೆ ಎಂದು ಹೇಳಿದೆ.
ಗ್ಯಾರಂಟಿ ಯೋಜನೆಗಳಿಗೆ ಹಣಹೊಂದಿಸಲು ಹೆಣಗಾಡುತ್ತಿರುವ ಸಿಎಂ, ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡುತ್ತಿಲ್ಲ. ಸ್ವತಃ ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಕಣ್ಣೀರಿಡುತ್ತಿದ್ದರೂ ಮುಖ್ಯಮಂತ್ರಿಗಳು ಕಿವಿಗೊಡುತ್ತಿಲ್ಲ. ಯಾಕಂದರೆ ಸರ್ಕಾರದ ಬೊಕ್ಕಸ ಖಾಲಿ ಮಾಡಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆ ಎಂದು ವ್ಯಂಗ್ಯವಾಡಿದೆ.












Click it and Unblock the Notifications