ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಹಿನ್ನಡೆ?
ಬೆಂಗಳೂರು, ಅ. 05: ಉಪ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಯಾವುದೇ ಜವಾಬ್ದಾರಿ ಕೊಡದೇ ನಿರ್ಲಕ್ಷ್ಯ ತೋರಲಾಗಿತ್ತು. ಆದರೆ ವಿಜಯೇಂದ್ರ ಅಭಿಮಾನಿಗಳ ಒತ್ತಡಕ್ಕೆ ಮಣಿದ ರಾಜ್ಯ ಬಿಜೆಪಿ ನಾಯಕರು ಮತ್ತೆ ಹಾನಗಲ್ ವಿಧಾನಸಭಾ ಚುನಾವಣೆಯ ಉಸ್ತುವಾರಿಗಳ ಪಟ್ಟಿಯಲ್ಲಿ ಬಿ.ವೈ. ವಿಜಯೇಂದ್ರ ಹೆಸರು ಸೇರಿಸಿದ್ದಾರೆ. ಈ ಬೆಳವಣಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗಾದ ಹಿನ್ನಡೆ ಎಂದೇ ರಾಜ್ಯ ರಾಜಕೀಯದಲ್ಲಿ ಚರ್ಚೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ.
ಈ ಬೆಳವಣಿಗೆ ಕೂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಗುತ್ತಿರುವ ಹಿನ್ನಡೆ ಎಂಬ ವಿಶ್ಲೇಷಣೆಗಳು ಕೇಳಿ ಬರುತ್ತಿವೆ. ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರಿಗೆ ಮೊದಲಿಗೆ ಯಾವುದೇ ಜವಾಬ್ದಾರಿಯನ್ನು ಕೊಟ್ಟಿರಲಿಲ್ಲ. ಆದರೆ ನಂತರ ಅವರ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಆದೇಶ ಮಾಡಿ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಸೇರಿಸಿದ್ದರು.
ಇದೀಗ ಮತ್ತೊಂದು ಬೆಳವಣಿಗೆ ರಾಜ್ಯ ಬಿಜೆಪಿಯಲ್ಲಿ ಆಗುತ್ತಿದೆ. ಅದರಲ್ಲಿಯೂ ಕೂಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅದಕ್ಕೆ ಕಾರಣಗಳು ಇವೆ. ಅಷ್ಟಕ್ಕೂ ಆಗುತ್ತಿರುವುದೇನು? ಮುಂದಿದೆ ಮಾಹಿತಿ!
ಬದಲಾವಣೆಗೆ ಮೂವರ ಸದಸ್ಯರ ಸಮಿತಿ ರಚನೆ!
ರಾಜ್ಯ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾವಣೆ ಮಾಡಲು ಕಂದಾಯ ಸಚಿವ ಆರ್. ಅಶೋಕ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನ ಸೇರಿದಂತೆ ಮೂರು ಜನರ ಸಮಿತಿ ರಚನೆ ಮಾಡಲಾಗಿದೆ. ಭಾನುವಾರ ಬಿಜೆಪಿ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆೆ ಬಂದ ಮೇಲೆ ನಿಗಮ ಮಂಡಳಿ ಅಧ್ಯಕ್ಷರಾಗಿ ಒಂದೂವರೆ ವರ್ಷ ಪೂರೈಸಿದವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ಕೊಡಲು ರಾಜ್ಯ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಹುತೇಕರು ಮಾಜಿ ಸಿಎಂ ಯಡಿಯೂರಪ್ಪ ಆಪ್ತರು!
ಕಂದಾಯ ಸಚಿವ ಆರ್. ಅಶೋಕ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಸಮಿತಿಯ ಜವಾಬ್ದಾರಿ ವಹಿಸಲಾಗಿದೆ. ಪಕ್ಷದ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನ ಅವರನ್ನು ಈ ಸಮಿತಿಗೆ ಕಾರ್ಯದರ್ಶಿಯನ್ನಾಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
2019 ರಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆೆ ಬಂದ ಮೇಲೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾದವರಲ್ಲಿ ಬಹುತೇಕರು ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ. ಜೊತೆಗೆ ಅವರೆಲ್ಲ ಒಂದೂವರೆ ವರ್ಷ ಅಧಿಕಾರ ಮುಗಿಸಿದ್ದಾರೆ. ಈಗ ಅವರನ್ನು ಬದಲಾಯಿಸಿ ಪಕ್ಷಕ್ಕಾಗಿ ಕೆಲಸ ಮಾಡಿದ ಇನ್ನಷ್ಟು ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕೆಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಯಾರೆಲ್ಲ ಒಂದೂವರೆ ವರ್ಷ ಪೂರೈಸಿದ್ದಾರೆ?
ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸುವ ಕುರಿತು ಪಕ್ಷ ನೇಮಿಸಿರುವ ಮೂವರು ಸದಸ್ಯರ ಸಮಿತಿ ಇದೇ ಅಕ್ಟೋಬರ್ 10 ರಂದು ಮೊದಲ ಸಭೆ ಸೇರಿ ಚರ್ಚಿಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿಯಿದೆ. ಈಗಾಗಲೇ ನೇಮಕಗೊಂಡಿರುವ ನಿಗಮ ಮಂಡಳಿ ಅಧ್ಯಕ್ಷರಲ್ಲಿ ಯಾರೆಲ್ಲ ಒಂದೂವರೆ ವರ್ಷ ಪೂರೈಸಿದ್ದಾರೆ ಎನ್ನುವುದನ್ನು ಪಟ್ಟಿ ಮಾಡಿ, ಅವರ ಬದಲಿಗೆ ಯಾರಿಗೆ ಅವಕಾಶ ಕೊಡಬೇಕು ಎಂಬ ಬಗ್ಗೆ ಈ ಮೂವರು ಸದಸ್ಯರ ಸಮಿತಿಯಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ. ಒಂದೂವರೆ ವರ್ಷ ಪೂರೈಸಿದವರನ್ನು ಬದಲಾಯಿಸುವುದು ಅವರ ಸ್ಥಾನಕ್ಕೆ ನೇಮಕ ಮಾಡಬಹುದಾದವರ ಪಟ್ಟಿಯನ್ನು ಮುಂದಿನ ಕೋರ್ ಕಮಿಟಿ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಸಮಿತಿ ಸದಸ್ಯರಿಗೆ ಸೂಚಿಸಲಾಗಿದೆ. ಒಂದೂವರೆ ವರ್ಷ ಪೂರೈಸದವರನ್ನು ಮುಂದುವರೆಸಲು ಸೂಚಿಸಲಾಗಿದೆ ಎನ್ನಲಾಗಿದೆ.
Recommended Video
ಮಾಜಿ ಸಿಎಂ ಯಡಿಯೂರಪ್ಪಗೆ ಹಿನ್ನಡೆ ಹೇಗೆ?
ಜೊತೆಗೆ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಶಾಸಕರು ಅಧ್ಯಕ್ಷರಾಗಿ ಒಂದೂವರೆ ವರ್ಷ ಪೂರೈಸಿದ್ದರೂ, ಅವರ ಬದಲಾವಣೆಯ ಬಗ್ಗೆೆ ಕೋರ್ ಕಮಿಟಿ ಸಭೆಯಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ತಿಳಿದು ಬಂದಿದೆ. ಒಂದು ವೇಳೆ ಶಾಸಕರ ಬದಲಾವಣೆಗೆ ಮುಂದಾದರೆ ಈಗಾಗಲೇ ಸಂಪುಟದಲ್ಲಿ ಸ್ಥಾನ ಸಿಗದೇ ಮುನಿಸಿಕೊಂಡಿರುವ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದಲೂ ತೆಗೆದು ಹಾಕಿದರೆ ಶಾಸಕರ ಆಕ್ರೋಶ ಸ್ಫೋಟವಾಗಬಹುದು ಎಂಬ ಕಾರಣಕ್ಕೆೆ ಅವರನ್ನು ಬದಲಾಯಿಸದಿರಲು ರಾಜ್ಯ ಬಿಜೆಪಿ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಅವಧಿಯಲ್ಲಿ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಬಹುತೇಕರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರು ಎನ್ನಲಾಗಿದೆ. ಹೀಗಾಗಿ ಈಗ ಅವರನ್ನು ಬದಲಾಯಿಸುವುದರಿಂದ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತಷ್ಟು ಹಿನ್ನಡೆಯಾದಂತಾಗುತ್ತದೆ ಎಂಬ ಮಾತುಗಳೂ ಕೇಳಿ ಬಂದಿವೆ. ಆದರೆ, ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಎಲ್ಲರೂ ಪಾಲಿಸಬೇಕು ಎಂದು ಪಕ್ಷದ ಹಿರಿಯ ನಾಯಕರು ಕೋರ್ ಕಮಿಟಿ ಸಭೆಯಲ್ಲಿ ಒಟ್ಟಾರೆಯಾಗಿ ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.