Muda Scam: ಸಿಎಂ ಸಿದ್ದರಾಮಯ್ಯಗೆ ಎದುರಾಯ್ತು ಮತ್ತೊಂದು ಕಂಟಕ
ಬೆಂಗಳೂರು, ಆಗಸ್ಟ್ 21: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಹಗರಣ ಬಯಲಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾಗೆ ಬರೆದಿದ್ದ ಪತ್ರವನ್ನು ತಿರುಚಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಈಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಇದಕ್ಕೆ ಸಂಬಂಧಿಸಿದ ಪತ್ರವನ್ನೂ ಆರ್.ಅಶೋಕ್ ಹಂಚಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬರೆದಿರುವ ಪತ್ರದಲ್ಲಿ ಯಾವ ಸ್ಥಳದಲ್ಲಿ ಪರ್ಯಾಯ ನಿವೇಶನ ಕೊಡಬೇಕು ಎಂದು ಬರೆದಿರುವ ಜಾಗಕ್ಕೆ ವೈಟ್ನರ್ ಹಾಕಲಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಅಧಿಕಾರಿಗಳು ಈ ಪತ್ರವನ್ನು ತಿರುಚುವ ಮೂಲಕ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.

ಈ ಪತ್ರದೊಂದಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿರುವ ಆರ್.ಅಶೋಕ್, ʼಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಪತ್ನಿ ಇಂತಹುದೇ ಬಡಾವಣೆಯಲ್ಲಿ ಸೈಟು ಕೊಡಿ ಎಂದು ಕೇಳಿಲ್ಲ ಎಂದು ಸಮರ್ಥನೆ ಮಾಡಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ಮಾತಿನಲ್ಲಿ ಎಷ್ಟು ಸತ್ಯ ಅಡಗಿದೆ ಎಂಬ ಅನುಮಾನ ಈಗ ಮತ್ತಷ್ಟು ದಟ್ಟವಾಗಿದೆ. ನಿವೇಶನ ಕೇಳಿ ಮುಖ್ಯಮಂತ್ರಿಗಳ ಪತ್ನಿ ಅವರು ಮೂಡಾಗೆ ಬರೆದಿರುವ ಪತ್ರವನ್ನ ತಿರುಚಿ, ಸಾಕ್ಷಿ ನಾಶ ಮಾಡಲು ಯತ್ನಿಸಿರುವ ಸಂದೇಹ ವ್ಯಕ್ತವಾಗುತ್ತಿದೆ ಎಂದು ಅಶೋಕ್ ಹೇಳಿದ್ದಾರೆ.
ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕಾದರೆ ಹಾಗೂ ಎಲ್ಲ ಅನುಮಾನಗಳು ಬಗೆಹರಿಯಬೇಕಾದರೆ ಸಿಎಂ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ, ಪಾರದರ್ಶಕ ತನಿಖೆಗೆ ಅನುವು ಮಾಡಿಕೊಡಬೇಕು ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.
ʼಭ್ರಷ್ಟಾತಿ ಭ್ರಷ್ಟ ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ ಇವೆ. ಇದರ ನುಡವೆ ಬಿಡುಗಡೆ ಆಗುತ್ತಿರುವ ದಾಖಲೆಗಳನ್ನು ಕುತಂತ್ರದ ಮೂಲಕ ಮುಚ್ಚಿ ಹಾಕಲಾಗುತ್ತಿದೆ. ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿ ಅವರು ವಿಜಯನಗರದಲ್ಲೇ ಸೈಟು ಕೊಡಿ ಎಂದು ಪತ್ರ ಬರೆದಿದ್ದು ಬೆಳಕಿಗೆ ಬಂದಿದೆ. ಆದರೆ, ಸಿದ್ದರಾಮಯ್ಯ ಅವರು ಹಾಕಿದ ಭ್ರಷ್ಟಾಚಾರದ ಗಂಜಿಗೆ ಮುಡಾ ಅಧಿಕಾರಿಗಳು ಸಿಎಂ ಪತ್ನಿ ಬರೆದ ಪತ್ರದಲ್ಲಿನ ಸಾಲುಗಳಿಗೆ ವೈಟ್ನರ್ ಹಾಕಿ ಹಗರಣ ಮುಚ್ಚಿ ಹಾಕಲು ಸಾಕ್ಷ್ಯ ನಾಶ ಮಾಡಿದ್ದಾರೆʼ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರನ್ನು ದೂರಿದೆ.

ʼತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಾಮಮಾರ್ಗ ಹಿಡಿದಿರುವ ಸಿದ್ದರಾಮಯ್ಯನವರು ಕೊತ್ವಾಲ್ ಶಿಷ್ಯಂದಿರನ್ನು ರಾಜ್ಯದ ತುಂಬಾ ಬಿಟ್ಟು ದೊಂಬಿ ಎಬ್ಬಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕು. ಹಾಗಾದಾರೆ ಮಾತ್ರ ಭ್ರಷ್ಟಾಚಾರ ಹೊರ ಬರಲು ಸಾಧ್ಯ. ಇಲ್ಲದೆ ಹೋದರೆ ತಮಗೆ ತಾವೇ ಕ್ಲೀನ್ ಚಿಟ್ ಕೊಟ್ಟುಕೊಂಡು ಜಗತ್ತಿನ ಮುಂದೆ ನಾನು ಸತ್ಯಹರಿಶ್ಚಂದ್ರನ ತುಂಡು ಎಂದು ಲಜ್ಜೆಬಿಟ್ಟು ಬಿಂಬಿಸಿಕೊಂಡರೂ ಅಚ್ಚರಿ ಇಲ್ಲ!ʼ ಎಂದು ವ್ಯಂಗ್ಯವಾಡಿದೆ.












Click it and Unblock the Notifications