ರಾಜ್ಯ ಸರ್ಕಾರದ ಮತ್ತೊಬ್ಬ ಸಚಿವರ ವಿಡಿಯೋ ವೈರಲ್!
ಕರ್ನಾಟಕ ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ರಾಜ್ಯ ಸರ್ಕಾರದ ಒಂದಿಲ್ಲೊಬ್ಬರು ಸಚಿವರ ಮೇಲೆ ಇತ್ತೀಚಿನ ದಿನಗಳಲ್ಲಿ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಅಲ್ಲದೆ ಕರ್ನಾಟಕದ ಚಿತ್ರರಂಗದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೊಟ್ಟಿರುವ ಹೇಳಿಕೆ ಸಹ ಭಾರೀ ಚರ್ಚೆಗೆ ಕಾರಣವಾಗಿದೆ. ಅದರ ನಡುವೆ ಸಚಿವ ಕೆ. ವೆಂಕಟೇಶ್ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ.
ಕಾಂಗ್ರೆಸ್ ಸಚಿವರು, ಸಚಿವರ ಆಪ್ತರು, ಶಾಸಕರು ಹಾಗೂ ಶಾಸಕರ ಕುಟುಂಬದವರು ಸರ್ಕಾರಿ ಅಧಿಕಾರಿಗಳಿಗೆ ಧಮ್ಕಿ ಹಾಕುವ ನೀಚ ಸಂಸ್ಕೃತಿ ಮುಂದುವರೆಯುತ್ತಲೇ ಇದೆ. ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್ ಅವರು ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಇಂಜಿನಿಯರ್ ಗೆ ಅವಾಚ್ಯ ಶಬ್ದಗಳ ಮೂಲಕ ನಿಂದನೆ ಮಾಡಿ, ಧಮ್ಕಿ ಹಾಕಿರುವ ಘಟನೆ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಳೆದ 20 ತಿಂಗಳುಗಳಲ್ಲಿ ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾದರು. ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸತ್ತರು. ಸಚಿವ ಪ್ರಿಯಾಂಕಾ ಖರ್ಗೆ ಅವರ ಆಪ್ತನ ಕಿರುಕುಳದಿಂದ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಸಿವಿಲ್ ಎಂಜಿನಿಯರ್ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ ಕಿರುಕುಳದಿಂದ ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆಗೆ ಬಲಿಯಾದರು. ಇತ್ತೀಚೆಗಷ್ಟೆ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದರು. ಮೊನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಲಾವಿದರಿಗೆ ನಟ್ಟು ಬೋಲ್ಟು ಟೈಟು ಮಾಡುವ ಬೆದರಿಕೆ ಹಾಕಿದ್ದಾರೆ.
ಸ್ವಾಮಿ ಸಿಎಂ ಸಿದ್ದರಾಮಯ್ಯ ಅವರೇ ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ದಾಹಕ್ಕೆ ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳು ಬಲಿಯಾಗಬೇಕು? ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಪಕ್ಷದ ನೀಚ ಸಂಸ್ಕೃತಿಗೆ. ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಮತ್ತೊಂದು ಟ್ವೀಟ್ ಮಾಡಿರುವ ಬಿಜೆಪಿಯು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ಮೇಲೆ ಶಾಸಕರ ಆಪ್ತರು, ಸಚಿವರ ಗುಲಾಮರ ಗೂಂಡಾಗಿರಿ ಮಿತಿ ಮೀರುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸಚಿವ ಡಿ. ಸುಧಾಕರ್ ಆಪ್ತ ಸರ್ಕಾರಿ ಹೊಯ್ಸಳ ವಾಹನದ ಕೀ ಕಿತ್ತು ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ. ಒಂದು ಕಡೆ ಕಲಾವಿದರಿಗೆ ನಟ್ಟು ಬೋಲ್ಟ್ ಟೈಟು ಮಾಡುವ ಬೆದರಿಕೆ ಹಾಕುವ DKShivakumar ಅವರಿಗೆ ಕೊತ್ವಾಲ್ ಘಟಕದ ನಟ್ಟು ಬೋಲ್ಟು ಟೈಟು ಮಾಡಲು ಆಗುತ್ತಿಲ್ಲ.
ಕಾಂಗ್ರೆಸ್ಸಿನ ಕೊತ್ವಾಲ್ ಘಟಕ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿ ರಾಜ್ಯದಲ್ಲಿ ಪೊಲೀಸರಿಗೆ ಬೆದರಿಕೆ ಹಾಕುವ ಹಂತಕ್ಕೆ ತಲುಪಿದೆ. ಇನ್ನೂ ಜನಸಾಮಾನ್ಯರ ಪಾಡೇನು ಎಂದು ಪ್ರಶ್ನೆ ಮಾಡಿದೆ.












Click it and Unblock the Notifications