ನೈತಿಕ ಪೊಲೀಸ್ಗಿರಿ ಹತ್ತಿಕ್ಕಲು ಆಂಟಿ ಕಮ್ಯೂನಲ್ ವಿಂಗ್ ಸ್ಥಾಪನೆ: ಜಿ ಪರಮೇಶ್ವರ್
ಮಂಗಳೂರು, ಜೂನ್ 6: ಕರಾವಳಿ ಭಾಗದಲ್ಲಿ ನಡೆಯುವ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆಂಟಿ ಕಮ್ಯೂನಲ್ ವಿಂಗ್ನ ಹೊಸ ಘಟಕ ಆರಂಭಿಸುತ್ತೇವೆ. ಈ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಾವೆಲ್ಲಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನರು ಮಾತಾನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಸಮಸ್ಯೆಗಳು ಹಾಗೂ ಸವಾಲುಗಳ ಬಗ್ಗೆ ವಿಚಾರಿಸಿದ್ದೇನೆ. ನನಗೆ ಇದು ಹೊಸದಲ್ಲ. ನಾನು ಮೂರನೇ ಭಾರೀ ಗೃಹ ಸಚಿವನಾಗಿದ್ದೇನೆ. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ನೈತಿಕ ಪೊಲೀಸ್ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಸೂಚನೆ ನೀಡಿದರು.
ಕೋಮುದ್ವೇಷಕ್ಕೆ ಹತ್ಯೆಯಾ ದೀಪಕ್ ರಾವ್, ಫಾಜಿಲ್, ಜಲೀಲ್, ಮಸೂದ್ ಕುಟುಂಬಸ್ಥರಿಗೆ ನಮ್ಮ ಸರ್ಕಾರ ಪರಿಹಾರ ನೀಡಲಿದೆ. ಈ ಸಂಬಂಧ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮಂಗಳೂರಿನ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಡಾ.ಚಂದ್ರಗುಪ್ತ, ಆಯುಕ್ತ ಕುಲದೀಪ್ ಕುಮಾರ್ ಜೈನ್, ದಕ್ಷಿಣ ಕನ್ನಡ ಎಸ್ಪಿ ಸಿ.ಬಿ.ರಿಷ್ಯಂತ್, ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಉಡುಪಿ ಎಸ್ಪಿ ಅಕ್ಷಯ್ ಮತ್ತು ಚಿಕ್ಕಮಗಳೂರು ಎಸ್ಪಿ ಉಮಾಪ್ರಶಾಂತ್ ಇದ್ದರು.

ಇತ್ತೀಚೆಗೆ ದ್ವೇಷದ ಅಪರಾಧಗಳನ್ನು ಪರಿಶೀಲಿಸಲು ಶಾಂತಿಯುತ ಕರ್ನಾಟಕ ಎಂಬ ಹೊಸ ಸಹಾಯವಾಣಿಯನ್ನು ಸ್ಥಾಪಿಸಬೇಕು ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸೋಮವಾರ ಸರ್ಕಾರವನ್ನು ಒತ್ತಾಯಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಟ್ಯಾಗ್ ಮಾಡಿದ ಟ್ವೀಟ್ನಲ್ಲಿ, ಹೊಸ ಸಹಾಯವಾಣಿಯು ಕರ್ನಾಟಕದಲ್ಲಿ ಯಾವುದೇ ದ್ವೇಷ ಹರಡದಂತೆ ನೋಡಿಕೊಳ್ಳಬೇಕು ಮತ್ತು ಅಂತಹ ಯಾವುದೇ ಘಟನೆಗಳ ಬಗ್ಗೆ ನಿಗಾ ಇಡಬೇಕು ಎಂದು ಹೇಳಿದ್ದರು.
ಜೂನ್ 1 ರಂದು ಸೋಮೇಶ್ವರ ಬೀಚ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಘಟನೆಯಲ್ಲಿ ಉಳ್ಳಾಲ ಪೊಲೀಸರು ಪೊಲೀಸ್ ಠಾಣೆ ಆವರಣದಲ್ಲಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ಸಂಬಂಧಿಕರೊಬ್ಬರಿಂದ ಪೊಲೀಸರು ದೂರು ಸ್ವೀಕರಿಸಿದ್ದಾರೆ. ಈ ಬಗ್ಗೆ ಡಿಸಿಪಿಗೆ ಮನವಿ ಸಲ್ಲಿಸಲಾಗಿದೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ಡಿಸಿಪಿ (ಎಲ್ & ಒ) ತನಿಖೆ ನಡೆಸಲಾಗುವುದು. ಹಕ್ಕುಗಳು ಸಾಬೀತಾದರೆ, ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.
ಜೂನ್ 1 ರಂದು ಸೋಮೇಶ್ವರ ಬೀಚ್ನಲ್ಲಿ ಮೂವರು ಹುಡುಗಿಯರೊಂದಿಗೆ ಇದ್ದ ಮೂವರು ಹುಡುಗರನ್ನು ಯುವಕರ ಗುಂಪೊಂದು ಪ್ರಶ್ನಿಸಿದ್ದು, ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ಸಂತ್ರಸ್ತರ ದೂರಿನ ಆಧಾರದ ಮೇಲೆ ಪೊಲೀಸರು ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ.












Click it and Unblock the Notifications