ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ, ಸರ್ಕಾರಕ್ಕೆ ನೋಟಿಸ್
ಬೆಂಗಳೂರು ಜು.22. ರಾಜ್ಯದಲ್ಲಿ ಬಲವಂತದ ಮತಾಂತರವನ್ನು ನಿಷೇಧಿಸುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ-2021 ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ದೆಹಲಿ ಮೂಲದ ಇವಾನಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಮತ್ತು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ-2021 ಹಾಗೂ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಸುಗ್ರಿವಾಜ್ಞೆ-2022ನ್ನು ಪ್ರಶ್ನಿಸಿವೆ.
ಅವುಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ವಿಭಾಗೀಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಪರ ವಕೀಲರು, ಜಾತ್ಯಾತೀತ ತತ್ವಗಳಿಗೆ ವಿರುದ್ಧವಾದ ಮತ್ತು ಮೂಲಭೂತ ಹಕ್ಕು, ಸಮಾನತೆ, ಧಾರ್ಮಿಕ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಳ್ಳುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಸುಗ್ರಿವಾಜ್ಞೆ-2022ರ ಸೆಕ್ಷನ್ 3ರಿಂದ 12 ಮತ್ತು ಸೆಕ್ಷನ್ 14ನ್ನು ಸಂವಿಧಾನಬಾಹಿರವೆಂದು ಘೋಷಿಸಬೇಕು ಎಂದು ಕೋರಿದರು.
ಅಲ್ಲದೆ, ಅರ್ಜಿ ಇತ್ಯರ್ಥವಾಗುವವರೆಗೆ ಸುಗ್ರಿವಾಜ್ಞೆಯ ಸೆಕ್ಷನ್ 3ರಿಂದ 12 ಮತ್ತು ಸೆಕ್ಷನ್ 14ರ ಕಾರ್ಯಾಚರಣೆಗೆ ತಡೆ ನೀಡಬೇಕು. 2022ರ ಮೇ 17ರಿಂದ ಜಾರಿಗೆ ಬಂದಿರುವ ಸುಗ್ರಿವಾಜ್ಞೆ ಆಧರಿಸಿ ಯಾರನ್ನೂ ಬಂಧಿಸಿದಂತೆ, ಯಾರ ವಿರುದ್ಧವೂ ಕ್ರಮ ಕೈಗೊಳ್ಳದಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಮಧ್ಯಂತರ ಮನವಿ ಮಾಡಲಾಗಿದೆ.
ಅರ್ಜಿದಾರರ ವಾದವೇನು?
ಮತಾಂತರ ನಿಷೇಧಕ್ಕೆ 2021ರಲ್ಲಿ ಕಾಯ್ದೆ ರೂಪಿಸಿದ್ದ ರಾಜ್ಯ ಸರ್ಕಾರ ಅದನ್ನು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಸುಗ್ರಿವಾಜ್ಞೆ-2022 ಹೆಸರಲ್ಲಿ ಜಾರಿಗೆ ತಂದಿದೆ, ಕಾಯ್ದೆ ಜಾತ್ಯಾತೀತ ತತ್ವಗಳಿಗೆ ವಿರುದ್ಧವಾಗಿದೆ. ಸಾರ್ವಜನಿಕ ಸುವ್ಯವಸ್ಥೆ ವ್ಯಾಪ್ತಿಗೆ ಮೀರಿದ್ದಾಗಿದೆ. ಧಾರ್ಮಿಕ ಸ್ವಾತಂತ್ರ್ಯ ಖಾತಪರಿಪಡಿಸುವ ಸಂವಿಧಾನದ ಅನುಚ್ಛೇದ 25ಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಜೊತೆಗೆ ದೇಶದ ಸಂವಿಧಾನ ರಚನಾ ಮಂಡಳಿ ಸಭೆಯ ಆಶಯ ಮತ್ತು ತೀರ್ಮಾನಗಳಿಗೆ ವಿರುದ್ಧವಾಗಿದೆ. ಮಾನವ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅಂತರರಾಷ್ಟ್ರೀಯ ಒಡಂಬಡಿಕೆಗಳಿಗೆ ತದ್ವಿರುದ್ಧವಾಗಿದೆ. ಸಂವಿಧಾನದ ಅನುಚ್ಛೇದ 14, 15, 19 (1)(ಎ), 19 (1)(ಜಿ) ಹಾಗೂ 30ರ ಉಲ್ಲಂಘನೆಯಾಗಿದೆ. ಸರ್ಕಾರದ ಈ ಕ್ರಮ ಕಾನೂನಿನ ಸ್ಪಷ್ಟ ದುರ್ಬಳಕೆ ಮತ್ತು ಕೇಂದ್ರದ ಶಾಸನಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.












Click it and Unblock the Notifications