ಎಂಟು ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ಗೆ : ಡಿ ಕೆ ಸುರೇಶ್ ಏನಂದ್ರು?
ಬೆಂಗಳೂರು, ಅಕ್ಟೋಬರ್ 25: ಎಂಟು ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಿಲಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಈ ತರಹದ ನಡವಳಿಕೆ ಇರಬಹುದೇನೋ, ಸೋಮಶೇಖರ್ ಅವರ ಬಳಿ ಮಾತನಾಡಿರಬಹುದು ಎನಿಸುತ್ತದೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.
ಯೋಗೇಶ್ವರ್ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷದವರ ಆಪರೇಷನ್ ಆಗುತ್ತದೆಯೇ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಮ್ಮ ಸರ್ಕಾರಕ್ಕೆ ಸಂಖ್ಯೆಯ ಅವಶ್ಯಕತೆಯಿಲ್ಲ. ಯಾರೇ ಪಕ್ಷಕ್ಕೂ ಬಂದರೂ ಸ್ವಾಗತಿಸುತ್ತೇವೆ ಎಂದರು.

ಚನ್ನಪಟ್ಟಣದ ಬಿಜೆಪಿ, ಜೆಡಿಎಸ್ ನ ಎರಡನೇ ಸಾಲಿನ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆಯೇ ಎಂದು ಕೇಳಿದಾಗ, ಇದು ಚುನಾವಣಾ ತಂತ್ರದ ಒಂದು ಭಾಗ. ಇದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಈಗಾಗಲೇ ಅನೇಕರು ಪಕ್ಷ ಸೇರಿದ್ದಾರೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಬಂದವರನ್ನು ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಬಂಡಾಯ ಏಳುವ ಸನ್ನಿವೇಶ ಉಂಟಾಗಿದೆ ಹಾಗೂ ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ನೀಡಬೇಕು, ಈ ಹಿಂದೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿದರು ಗೆಲ್ಲಲು ಸಾಧ್ಯವಾಗಿಲ್ಲ ಎನ್ನುವ ಕೂಗಿನ ಬಗ್ಗೆ ಕೇಳಿದಾಗ, ಆಯಾ ಕ್ಷೇತ್ರದಲ್ಲಿ ಉಂಟಾಗಿರುವ ಅಸಮಾಧಾನವನ್ನು ನಮ್ಮ ನಾಯಕರು ಸರಿಪಡಿಸಲಿದ್ದಾರೆ. ಒಬ್ಬೊಬ್ಬರದು ಒಂದೊಂದು ಅಭಿಪ್ರಾಯವಿರುತ್ತದೆ. ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಅವರ ಮಗನಿಗೆ ಏಕೆ ಟಿಕೆಟ್ ನೀಡಿದ್ದಾರೆ? ಇಲ್ಲೆಲ್ಲಾ ಕಾರ್ಯಕರ್ತರಿಗೆ ಏಕೆ ಟಿಕೆಟ್ ನೀಡಿಲ್ಲ. ಯಾರೇ ಸ್ಪರ್ಧಿಸಿದರು ಚುನಾವಣೆಯಲ್ಲಿ ಗೆಲುವು ಮುಖ್ಯ. ಪಕ್ಷದ ನೆಲೆಗಟ್ಟಿನ ದೃಷ್ಟಿಯಲ್ಲಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಗಳು ಹಾಗೂ ಜಾತ್ಯಾತೀತ ತತ್ವ ಹಾಗೂ ಪಕ್ಷದ ಸಿದ್ದಾಂತಗಳನ್ನು ಉಳಿಸಿಕೊಂಡು ಕೆಲಸ ಮಾಡಬೇಕಾಗುತ್ತದೆ ಎಂದರು.
ಶಿಗ್ಗಾವಿಯಲ್ಲಿ ಸೋತ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು ಹೊಂದಾಣಿಕೆ ರಾಜಕಾರಣವೇ ಎಂದಾಗ, ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು ಕೇಳಬೇಕು. ನಮ್ಮಲ್ಲಿ ಯಾವುದೇ ಹೊಂದಾಣಿಕೆಯಿಲ್ಲ. ಸೋತ ಅಭ್ಯರ್ಥಿಗೆ ಟಿಕೆಟ್ ನೀಡಬಾರದು ಎನ್ನುವುದೇನಿಲ್ಲವಲ್ಲ. ನಾಲ್ಕೈದು ಬಾರಿ ಸೋತವರೇ ಮುಖ್ಯಮಂತ್ರಿಗಳಾದ ಉದಾಹರಣೆ ನಮ್ಮ ಮುಂದಿದೆ ಎಂದು ಹೇಳಿದರು.
ಚುನಾವಣಾ ಪ್ರಚಾರಕ್ಕೆ ಕೇಂದ್ರ ನಾಯಕರು ಬರಲಿದ್ದಾರೆಯೇ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರು ಹಾಗೂ ನಮ್ಮ ರಾಜ್ಯದ ನಾಯಕರು ಪ್ರಚಾರ ಮಾಡಲಿದ್ದಾರೆ ಎಂದು ಡಿ ಕೆ ಸುರೇಶ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಬಿಟ್ಟ ಕ್ಷಣದಿಂದ ಸಂತೋಷವಾಗಿದ್ದೇನೆ. ಬೇರೆಯವರು ಅವರ ಆಸ್ತಿ ಎಂದು ತಿಳಿದುಕೊಂಡಿರುವಂತೆ, ಕ್ಷೇತ್ರ ನಮ್ಮ ಅಪ್ಪನ ಆಸ್ತಿಯಲ್ಲ. ಕೆಲಸ ಮಾಡಲು ಸಾರ್ವಜನಿಕರು ಕೊಟ್ಟಿರುವ ಕೊಡುಗೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಈಗ ಬೇಡ ಎಂದು ಹೇಳಿದ್ದಾರೆ, ಅದನ್ನು ಮುಕ್ತ ಕಂಠದಿಂದ ಸ್ವಾಗತ ಮಾಡಿದ್ದೇನೆ" ಎಂದರು.
ಬೆಂಗಳೂರು ಗ್ರಾಮಾಂತರದ ಸೋಲನ್ನು ಅರಗಿಸಿಕೊಳ್ಳಲು ಆಗಿಲ್ಲ ಎನ್ನುವ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ "ಅವರು ಪಕ್ಷದ ಅಧ್ಯಕ್ಷರಾದ ಕಾರಣ ಅವರಿಗೆ ಜವಾಬ್ದಾರಿ ಇರುತ್ತದೆ. ಅದರಂತೆ ಮಾತನಾಡಿದ್ದಾರೆ. ನಾನು ರಿಲ್ಯಾಕ್ಸ್ ಮೂಡ್ ನಲ್ಲಿ ಇದ್ದೇನೆ" ಎಂದರು.
ಸಂಸದ ಸ್ಥಾನ ಸೋತರೂ ಖುಷಿಯಲ್ಲಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಮೊದಲು ಸಿಟ್ಟಿನಲ್ಲಿ ಇರುತ್ತಿದ್ದೆ ಎಂದು ಕಾರ್ಯಕರ್ತರು ಹೇಳುತ್ತಿದ್ದರು. ಈಗ ಸೋತ ನಂತರ ಖುಷಿಯಲ್ಲಿದ್ದೇನೆ. ಮೊದಲು ನಿಮ್ಮನ್ನು ಮಾತನಾಡಿಸಲು ಭಯವಾಗುತ್ತಿತ್ತು ಎಂದು ಇದರ ಬಗ್ಗೆ ನಮ್ಮ ಮುಖಂಡರೇ ಹೇಳಿದ್ದಾರೆ ಎಂದರು.
ಶಾಸಕ ಸತೀಶ್ ಸೈಲ್ ಅವರ ಬಂಧನದ ಬಗ್ಗೆ ಕೇಳಿದಾಗ "ಹಳೆಯ ಪ್ರಕರಣದಲ್ಲಿ ನ್ಯಾಯಲಯದ ತೀರ್ಪು ಬಂದ ಕಾರಣಕ್ಕೆ ಬಂಧಿಸಲಾಗಿದೆ. ಅವರು ನ್ಯಾಯಲಯಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಭಾವಿಸಿದ್ದೇನೆ" ಎಂದು ಹೇಳಿದರು.












Click it and Unblock the Notifications