ಬೀದರ್ ಆಸ್ಪತ್ರೆಯಲ್ಲಿ ಯಡಿಯೂರಪ್ಪ ರುದ್ರಾವತಾರ ತಾಳಿದ್ದೇಕೆ?
ಬೀದರ್, ಆಗಸ್ಟ್ 9: ಮುಂಬರುವ ಸ್ಥಳೀಯ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆ ಬೀದರ್ನಿಂದ ರಾಜ್ಯ ಪ್ರವಾಸ ಆರಂಭಿಸಿರುವ ವಿಧಾನಸಭೆ ವಿರೋಧಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಬೀದರ್ನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಗುರುವಾರ ಆಕಸ್ಮಿಕ ಭೇಟಿ ನೀಡಿದರು.
ಈ ವೇಳೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ನೂರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದರೂ ಆಸ್ಪತ್ರೆಯಲ್ಲಿ ಮೂಲಸೌಕರ್ಯವಿಲ್ಲ, ವೈದ್ಯಕೀಯ ಉಪಕರಣಗಳಿಲ್ಲ.ಈ ಆಸ್ಪತ್ರೆ ಸ್ಥಾಪನೆಯಲ್ಲಿ ಭಾರಿ ಹಗರಣ ನಡೆದಿದೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರ ರಾಜ್ಯ ಪ್ರವಾಸ, ಯಾವ ಜಿಲ್ಲೆಗೆ ಯಾವ ತಂಡ?
ಬೀದರ್ ವೈದ್ಯಾಧಿಕಾರಿಗಳ ವಿರುದ್ಧ ಕೆಂಡಾಮಂಡಲವಾದ ಅವರು, ನೂರು ಕೋಟಿ ರೂ.,ಗಳಿಗೂ ಹೆಚ್ಚು ವೆಚ್ಚದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಸ್ಥಾಪಿಸಿದರೂ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳಿಲ್ಲ. ಕನಿಷ್ಠ ಸಂಖ್ಯೆಯ ವೈದ್ಯರೂ ಇಲ್ಲ. ಹೀಗಾಗಿ ರೋಗಿಗಳ ಪರಿಸ್ಥಿತಿ ಹೇಳತೀರದಾಗಿದೆ ಎಂದು ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಹಲವಾರು ರೋಗಿಗಳು ಯಡಿಯೂರಪ್ಪ ಎದುರು ತಮ್ಮ ಅಳಲನ್ನು ತೋಡಿಕೊಂಡು ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ವೈದ್ಯಕೀಯ ಉಪಕರಣಗಳನ್ನು ಒದಗಿಸುವಂತೆ ಮನವಿ ಮಾಡಿದರು. ಈ ಕುರಿತು ಉನ್ನತ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.
ಆಸ್ಪತ್ರೆಯಲ್ಲಿ ಸಧ್ಯಕ್ಕೆ ಲಭ್ಯವಿರುವ ಸೌಲಭ್ಯವನ್ನಾದರೂ ರೋಗಿಗಳಿಗೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ತಾಕೀತು ಮಾಡಿದರು.