APL Card: ಎಪಿಎಲ್ ಕಾರ್ಡ್ದಾರರಿಗೂ ‘ಗೃಹಲಕ್ಷ್ಮೀ’ ಹಣ ಬರುತ್ತೆ ಆದರೆ… : ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಬೆಳಗಾವಿ, ನವೆಂಬರ್ 22: ಬಿಪಿಎಲ್ ರೆಕಾರ್ಡ್ ಹೊಂದಿರುವವರ ಜೊತೆಗೆ ಎಪಿಎಲ್ ಕಾರ್ಡ್ ಹೊಂದಿರುವವರೆಗೂ ಗೃಹಲಕ್ಷ್ಮಿ ಹಣ ಬರುತ್ತದೆ. ಆದರೆ ಯಾವುದೇ ಕಾರಣಕ್ಕೂ ತೆರಿಗೆ ಪಾವತಿಸುತ್ತಿದ್ದರೆ ಅವರಿಗೆ ಗ್ರಹಲಕ್ಷ್ಮಿ ಹಣ ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಕಾರ್ಡ್ಗಳನ್ನು ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತಿಸಿದರೂ ಗೃಹಲಕ್ಷ್ಮಿ ಕಂತುಗಳನ್ನು ಪಡೆಯುವುದು ಮುಂದುವರಿಯುತ್ತದೆ. ಪರಿಶೀಲನಾ ಪ್ರಕ್ರಿಯೆಯ ಬಳಿಕ ಬಿಪಿಎಲ್ನಿಂದ ಎಪಿಎಲ್ ಕಾರ್ಡ್ಗೆ ಶಿಫ್ಟ್ ಆದ ಕುಟುಂಬದ ಮನೆಯ ಯಜಮಾನಿ ಕೂಡ ಎರಡು ಸಾವಿರ ರೂಪಾಯಿ ಮಾಸಿಕ ಕಂತು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಡತನ ರೇಖೆಗಿಂತ ಮೇಲಿನ ಪಡಿತರ ಚೀಟಿ ಹೊಂದಿರುವ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ ಎರಡು ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ.ಆದರೆ, ಇವರುಗಳು ಆದಾಯ ತೆರಿಗೆ ಪಾವತಿ ಮಾಡುವ ವ್ಯಕ್ತಿಗಳಾಗಿರಬಾರದು. ಆದಾಯ ತೆರಿಗೆ ಪಾವತಿ ಮಾಡುತ್ತಿರುವವರಿಗೆ ಗೃಹಲಕ್ಷ್ಮೀ ಹಣ ಸಿಗೋದಿಲ್ಲ. ಗೃಹಲಕ್ಷ್ಮೀ ಹಣದ ವಿಚಾರದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಅನ್ನೋ ವಿಚಾರ ಲೆಕ್ಕಕ್ಕೆ ಬರೋದಿಲ್ಲ. ಆದಾಯ ತೆರಿಗೆ ಪಾವತಿ ಮಾಡುವವರು ಆಗಿರಬಾರದು ಎನ್ನುವ ನಿಯಮವಿದೆ ಎಂದು ಸ್ಪಷ್ಟನೆ ನೀಡಿದರು.
80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಸಚಿವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇಡೀ ದೇಶದಲ್ಲಿ ಈ ರೀತಿಯ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ. ಸುಭದ್ರವಾಗಿರುವ ಸರ್ಕಾರವನ್ನು ಯಾರು ಏನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಡಿಸೆಂಬರ್ 9 ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಬರಬಹುದು. ಈ ಕುರಿತು ಎಲ್ಲ ಶಾಸಕರ ಜತೆಗೆ ಒಂದು ಸುತ್ತು ಮಾತನಾಡಲಾಗಿದೆ, ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮಹಾರಾಷ್ಟ್ರದಲ್ಲಿ ನಾನು ಕೂಡ ಐದು ದಿನಗಳ ಕಾಲ ಪ್ರಚಾರ ಮಾಡಿದ್ದೇನೆ. ಕಾಂಗ್ರೆಸ್ ಒಳಗೊಂಡ ಮಹಾವಿಕಾಸ ಅಘಾಡಿ (ಎಂವಿಎ) ಸರ್ಕಾರ ರಚಿಸಲಿದೆ ಎಂದು ತಿಳಿಸಿದರು. ರಾಜ್ಯದ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications