ಎಪಿಎಂಸಿ ಸುಗ್ರಿವಾಜ್ಞೆ: ಯಡಿಯೂರಪ್ಪ ರೈತರಿಗೆ ಕೊಟ್ಟ ಭರವಸೆಗಳು
ಬೆಂಗಳೂರು, ಮೇ 15: ಕರ್ನಾಟಕ ಸರ್ಕಾರ ತರಲು ಹೊರಟಿರುವ ವಿವಾದಿತ ಎಪಿಎಂಸಿ ಕಾಯ್ದೆ ಸುಗ್ರಿವಾಜ್ಞೆ ಕಡೆಗೂ ರಾಜ್ಯಪಾಲರ ಬಳಿ ಹೋಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಂಪುಟದ ಒಪ್ಪಿಗೆ ಪಡೆದು ಸುಗ್ರಿವಾಜ್ಞೆ ಜಾರಿಗೊಳಿಸಲು ರಾಜ್ಯಪಾಲರಿಗೆ ಕಳುಹಿಸಿದ್ದಾರೆ.
ಇತ್ತ ಸುಗ್ರಿವಾಜ್ಞೆಗೆ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಾಗೂ ರೈತ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇದಕ್ಕೆ ಇಂದು ಸುದ್ದಿಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿರುವ ಯಡಿಯೂರಪ್ಪ ಅವರು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ರೈತರ ಹಿತಕ್ಕಾಗಿ ಎಂದು ಹೇಳಿದ್ದಾರೆ.
ಏನಿದು ಎಪಿಎಂಸಿ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ? ಅದಕ್ಕೆ ಅಷ್ಟೊಂದು ವಿರೋಧ ಯಾಕೆ?
ರೈತರ ಹಿತಕ್ಕೆ ಧಕ್ಕೆ ಬರುವುದಾದರೆ, ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವುದಿಲ್ಲ ಎಂದಿದ್ದಾರೆ. ಯಡಿಯೂರಪ್ಪ ಅವರು ಎಪಿಎಂಸಿ ತಿದ್ದುಪಡಿಯನ್ನು ಈ ಕೆಳಗಿನಂತೆ ಸಮರ್ಥಿಸಿಕೊಂಡಿದ್ದಾರೆ...
ನಮಗೆ ರೈತರೇ ಮೊದಲು
ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ "ರೈತರೇ ಮೊದಲು" ಎಂಬ ಘೋಷವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ. ಇದರಿಂದ ರೈತರಿಗೆ ತಮ್ಮ ಉತ್ಪನ್ನಗಳಿಗೆ ಯೋಗ್ಯ ಧಾರಣೆ ದೊರೆಯುವ ಅವಕಾಶ ಕಲ್ಪಿಸಿದಂತಾಗುತ್ತದೆ. ಈ ಕಾಯ್ದೆಯಿಂದ ಪಿಎಂಸಿ ಕಮಿಟಿಗಳ ಅಸ್ತಿತ್ವಕ್ಕೆ ಯಾವುದೇ ಆಗುವುದಿಲ್ಲ. ಅವು ಹಿಂದಿನಂತೆ ಮುಂದುವರೆಯುತ್ತವೆ.
ರೈತರ ಹಿತ ಕಾಯಲು ಅವಕಾಶ ನೀಡುತ್ತದೆ
ಮಾರುಕಟ್ಟೆ ಪ್ರಾಂಗಣದ ಹೊರಗೆ ಅಧಿಸೂಚಿತ ಕೃಷಿ ಉತ್ಪನ್ನಗಳ ವಹಿವಾಟು ನಡೆಸಲು ಮತ್ತು ಮೇಲ್ವಿಚಾರಣೆಯನ್ನು ಕೃಷಿ ಮಾರಾಟ ನಿರ್ದೇಶಕರು ಮಾಡುತ್ತಾರೆ. ಈ ತಿದ್ದುಪಡಿ ಕಾಯ್ದೆಯಿಂದ ಎಪಿಎಂಸಿ ಕಮಿಟಿಗಳನ್ನು ಮಾರುಕಟ್ಟೆ ಪ್ರಾಂಗಣಕ್ಕೆ ಸೀಮಿತಗೊಳಿಸಿ ರೈತರು ಉತ್ತಮ ಧಾರಣೆ ಪಡೆಯಲು ಅವಕಾಶ ಒದಗಿಸಿ ಆ ಮೂಲಕ ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ಮಾರುಕಟ್ಟೆ ಒದಗಿಸಿ ರೈತರ ಹಿತ ಕಾಯಲು ಅವಕಾಶ ನೀಡುತ್ತದೆ.
ಇದು ಯಾವ ರೀತಿಯ ಆತ್ಮನಿರ್ಭರ್ ಭಾರತ? ಪ್ರಧಾನಿ ಮೋದಿ ಅವರಿಗೆ ಎಚ್ಡಿಕೆ ಪ್ರಶ್ನೆ!
ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗಾಗಲಿ, ಕೇಂದ್ರ ಸರ್ಕಾರಕ್ಕಾಗಲಿ ರೈತರ ಹಿತಾಸಕ್ತಿ ಸಂರಕ್ಷಣೆಯೇ ಮುಖ್ಯ. 2022ರ ವೇಳೆಗೆ ರೈತರ ಆದಾಯ ದ್ವಿಗುಣ ಮಾಡಬೇಕು. ರೈತರಿಗೆ ನೆರವಾಗಬೇಕು ಎನ್ನುವುದಕ್ಕಾಗಿಯೇ ಅನೇಕ ಕಾರ್ಯಕ್ರಮಗಳನ್ನು ಮತ್ತು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ. ಈಗಲೂ ಎಪಿಎಂಸಿ ಕಾಯ್ದೆಯನ್ನೇನೂ ನಾವು ತೆಗೆದು ಹಾಕಿಲ್ಲ. ಕೇವಲ ಕಾಯ್ದೆಯ ಎರಡು ಸೆಕ್ಷನ್ ಗಳಿಗೆ ತಿದ್ದುಪಡಿ ಮಾಡಿದ್ದೇವೆ.
ಮಾರುಕಟ್ಟೆಯ ಹೆಚ್ಚಿನ ಆಯ್ಕೆಗಳು ಲಭಿಸಲಿವೆ
ಈ ಸುಧಾರಣೆಯ ಉದ್ದೇಶ- ನಮ್ಮ ರೈತರಿಗೆ ಮಾರುಕಟ್ಟೆಯ ಹೆಚ್ಚಿನ ಆಯ್ಕೆಗಳು ಲಭಿಸಲಿವೆ. ನಮ್ಮ ರೈತರು ಎಪಿಎಂಸಿ ಯಾಗಲೀ ಅಥವಾ ಇತರೇ ವರ್ತಕರ ಅಧೀನಕ್ಕೆ ಒಳಪಡುವುದಿಲ್ಲ. ತಮ್ಮಿಷ್ಟದಂತೆ ಯಾರಿಗೆ ಬೇಕಾದರೂ ಉತ್ಪನ್ನ ಮಾರಾಟ ಮಾಡಬಹುದು. ಬೆಂಬಲ ಬೆಲೆಗೆ ಕಡಿಮೆ ದರದಲ್ಲಿ ಖರೀದಿ ಮಾಡುವ, ಎಷ್ಟೋ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇದೆ. ಈ ಶೋಷಣೆಯನ್ನು ಇನ್ನು ಮುಂದೆ ತಪ್ಪಿಸಬಹುದು. ಇನ್ನು ಮುಂದೆ ಎಪಿಎಂಸಿಯಲ್ಲಿ ವ್ಯವಹಾರ ಮಾಡುವ ವರ್ತಕರು ರೈತರನ್ನು ಶೋಷಣೆ ಮಾಡುವುದು ತಪ್ಪುತ್ತದೆ.
ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ
ಖಾಸಗಿಯವರೂ ಎಪಿಎಂಸಿ ಹೊರಗಡೆ ವ್ಯವಹಾರ ಮಾಡುವಾಗಲೂ ಕೂಡ ಷರತ್ತನ್ನು ಪಾಲಿಸಬೇಕಾಗುತ್ತದೆ. ಸರ್ಕಾರದ ಅನುಮತಿ ಪಡೆಯಬೇಕಾಗಿದೆ. ಇದೆಲ್ಲವೂ ನಮ್ಮ ರೈತರ ಹಿತರಕ್ಷಣೆ, ಮಾರಾಟ ಸ್ವಾತಂತ್ರ್ಯ ನೀಡಲು ಸುಧಾರಣೆ ತರಲಾಗುತ್ತಿದೆ. ಆದರೆ ಕೆಲವರು ಇದರ ವಿರುದ್ಧ ಅಪಪ್ರಚಾರ ಮಾಡಿ ನಮ್ಮ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ.