Second Airport: ಈ ಜಿಲ್ಲೆಯಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ: ಬಿಗ್ ಅಪ್ಡೇಟ್ ಇಲ್ಲಿದೆ
ತುಮಕೂರು, ಡಿಸೆಂಬರ್ 02: ರಾಜಧಾನಿ ಬೆಂಗಳೂರು ನಗರಕ್ಕೆ ಪ್ರತ್ಯೇಕವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲೆಯ ರೂ. 1259 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆಯ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮಾತನಾಡಿ, ತುಮಕೂರು ಜಿಲ್ಲೆಯು ಅಭಿವೃದ್ಧಿಯ ಕಡೆ ದಾಪುಗಾಲು ಇಡುತ್ತಿದೆ. ಏಷ್ಯಾದ ಅತಿದೊಡ್ಡ ಕೈಗಾರಿಕಾ ಘಟಕವನ್ನು ಸ್ಥಾಪಿಸಲು 20 ಸಾವಿರ ಭೂಮಿಯನ್ನು ನೀಡಲಾಗಿದೆ. ಜಿಲ್ಲೆಗೆ ಮೆಟ್ರೋ ರೈಲು ಯೋಜನೆ ತರಲು ಮುಖ್ಯಮಂತ್ರಿಯವರನ್ನು ಕೇಳಿಕೊಂಡಾಗ, ಅದಕ್ಕೆ ಒಪ್ಪಿ ಕಾರ್ಯಸಾಧ್ಯತ ವರದಿಗೆ ಸೂಚಿಸಿದ್ದಾರೆ.

ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡಿಗಲ್ಲು ಹಾಕಿದ್ದಾರೆ. ಸರ್ಕಾರವು ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಚಿಂತನೆ ನಡೆಸಿದೆ. ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಪರಮೇಶ್ವರ್ ಅವರು ಒತ್ತಾಯಿಸಿದರು.
ಜಿಲ್ಲೆಗೆ ಅಭಿವೃದ್ಧಿಯ ಕಾಯಕಲ್ಪ ಮಾಡಲು ನಮ್ಮ ಸರ್ಕಾರವು ಎಲ್ಲ ರೀತಿಯ ಕಾರ್ಯಗತವಾಗಿ ಶ್ರಮಿಸುತ್ತಿದೆ. 2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಪ್ರವಾಸ ಕೈಗೊಂಡು ಭರವಸೆಗಳನ್ನು ನೀಡಿದ್ದರು. ಬಡತನ ನಿರ್ಮೂಲನೆ ಮಾಡಿ, ಆರ್ಥಿಕವಾಗಿ ಮೇಲೆತ್ತುವ ದೃಷ್ಟಿಯಿಂದ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ ಎಂದರು.
ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಜಿಲ್ಲೆಗೆ ವಿಶ್ವವಿದ್ಯಾನಿಲಯ ಮಂಜೂರಾಗಿತ್ತು. ವಿಶ್ವವಿದ್ಯಾಲಯಕ್ಕೆ ನೂತನ ಕ್ಯಾಂಪಸ್ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಉದ್ಘಾಟಿಸಬೇಕು. ಕೊರಟಗೆರೆಯಲ್ಲಿನ ಕೆಎಸ್ಆರ್ಪಿ ಬೆಟಾಲಿಯನ್, ಪಾವಘಡ ತಾಲ್ಲೂಕಿಗೆ ಕುಡಿಯಲು ತುಂಗಾಭದ್ರ ನದಿಯಿಂದ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಯೋಜನೆಯನ್ನು ತಾವುಗಳು ಉದ್ಘಾಟಿಸಬೇಕು ಎಂದು ಕೋರಿದರು. ಇನ್ನೂ ಸ್ಮಾರ್ಟ್ಸಿಟಿ ಯೋಜನೆ ತುಮಕೂರು ಮಹಾನಗರದ ಕೆಲವೇ ವಾರ್ಡ್ಗಳಿಗೆ ಸೀಮಿತವಾಗಿದೆ. 35 ವಾರ್ಡ್ಗಳ ಅಭಿವೃದ್ಧಿಗೆ ರೂ. 500 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೆಶ್, ಬಿ.ಸುರೇಶ್ಗೌಡ, ಹೆಚ್.ವಿ.ವೆಂಕಟೇಶ್, ಕೆ.ಷಡಕ್ಷರಿ, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಡಿ.ಟಿ.ಶ್ರೀನಿವಾಸ್, ಆರ್.ರಾಜೇಂದ್ರ, ಕೇಂದ್ರ ವಲಯ ಐಜಿಪಿ ಲಾಭೂ ರಾಮ್ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳು, ಜಿಲ್ಲಾಡಳಿತ, ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.












Click it and Unblock the Notifications