SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!
ಬೆಂಗಳೂರು, ನ. 26: ಕೊರೊನಾ ವೈರಸ್, ಲಾಕ್ಡೌನ್ನಿಂದಾಗಿ ಕಳೆದ 9 ತಿಂಗಳುಗಳಿಂದ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮುಚ್ಚಿವೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕೆಗೆ ಸಹಾಯಕವಾಗಲಿ ಎಂಬ ಉದ್ದೇಶದಿಂದ ಎಂದು ದೇಶದಲ್ಲಿಯೇ ವಿನೂತನವಾಗಿ ವಿದ್ಯಾಗಮ ಎಂಬ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ಕೊಡಲಾಗಿತ್ತು. ಆದರೆ ಹಾಗೆ ಮಾಡಿದರೂ ಕೂಡ ಕೊರೊನಾ ವೈರಸ್ ಹರಡುವುದು ಹೆಚ್ಚಾಗುತ್ತದೆ ಎಂಬ ಆರೋಪಗಳು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮವನ್ನೂ ಶಿಕ್ಷಣ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗಿಳಿಸಿ ಆದೇಶ ಮಾಡಿದೆ.
Recommended Video
ಇನ್ನು ಮೊನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಮಹತ್ವದ ಸಬೆ ನಡೆದಿತ್ತು. ಆದರೆ ಕೋವಿಡ್ ಎರಡನೇ ಅಲೆ ಅಪ್ಪಳಿಸುವ ಎಚ್ಚರಿಕೆಯನ್ನು ತಜ್ಞರು ಕೊಟ್ಟಿದ್ದರಿಂದ ಡಿಸೆಂಬರ್ ಅಂತ್ಯದ ವರೆಗೆ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರಕಟಿಸುವ ಮೂಲಕ ಊಹಾಪೋಗಳಿಗೆ ತೆರೆ ಎಳೆದಿದ್ದಾರೆ.
ಆದರೂ ಶೈಕ್ಷಣಿಕ ಚಟುವಟಿಕೆಗಳು ಪುನರಾರಂಭವಾಗಬೇಕು ಎಂಬ ಆಶಯ ಎಲ್ಲರಲ್ಲಿಯೂ ಇದೆ. ಕೋವಿಡ್ ಆತಂಕದಿಂದ ಶಾಲೆಗಳು ತೆರೆಯುವುದು ಸಧ್ಯದ ಮಟ್ಟಿಗೆ ಅಸಾಧ್ಯ. ಹೀಗಾಗಿ ಮಕ್ಕಳು ಕೂಡ ಸಂಪೂರ್ಣವಾಗಿ ಶೈಕ್ಷಣಿಕ ಚಟುವಟಿಕೆಗಳಿಂದ ದೂರಾಗದಂತೆ ತಡೆಯಲು ಶಿಕ್ಷಣ ಇಲಾಖೆ ಪ್ರಯತ್ನ ಪಡುತ್ತಿದೆ. ಈ ಮಧ್ಯೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ ಪರೀಕ್ಷೆ
ಎನ್ಸಿಇಆರ್ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ (ಕ್ಯು.ಎಸ್.ಕ್ಯು.ಎ.ಎ.ಸಿ) ವತಿಯಿಂದ ನಡೆಸಲಾಗುವ ಎನ್ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ವರ್ಷದಲ್ಲಿ 10ನೇ ತರಗತಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ತೆಗೆದುಕೊಳ್ಳಬಹುದಾಗಿದ್ದು, ಪರೀಕ್ಷೆ 2021ನೇ ಜನವರಿ 24ರಂದು ನಡೆಯಲಿದೆ. ವಿದ್ಯಾರ್ಥಿವೇತನ ಪಡೆಯುವ ಹಿನ್ನೆಲೆಯಲ್ಲಿ ನಡೆಯುವ ಈ ಪರೀಕ್ಷೆಯನ್ನು ಹೆಚ್ಚಿನ ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ
ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಅಭ್ಯಸಿಸುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತು ಪರೀಕ್ಷೆ ಕುರಿತು ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಅರ್ಜಿ ಭರ್ತಿ ಮಾಡಲು ಕೆಎಸ್ಇಇಬಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ ಶಾಲೆಗಳ ಮುಖ್ಯೋಪಾಧ್ಯಾಯರು kseeb.kar.nic.in ವೆಬ್ಸೈಟ್ ಮೂಲಕ ಲಾಗಿನ್ ಆಗಿ ಎನ್ಟಿಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ನವೆಂಬರ್ ಅಂತ್ಯದೊಳಗೆ ಅರ್ಜಿ ಸಲ್ಲಿಸಿ
ಪರೀಕ್ಷೆ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಬೌದ್ಧಿಕ ಸಾಮರ್ಥ್ಯ ಮತ್ತು ಪ್ರಾಸಂಗಿಕ ಪ್ರವೃತ್ತಿ ಪರೀಕ್ಷೆಗಳು ನಡೆಯಲಿದ್ದು, ಕನ್ನಡ, ಇಂಗ್ಲಿಷ್, ಉರ್ದು ಮತ್ತು ಮರಾಠಿ ಮಾಧ್ಯಮಗಳಲ್ಲಿ ತೆಗೆದುಕೊಳ್ಳಬಹುದಾಗಿದೆ. ಪರೀಕ್ಷೆಗೆ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವಿದೆ.

ವಿದ್ಯಾರ್ಥಿ ವೇತನ
ಮೊದಲ ಹಂತದ ಪರೀಕ್ಷೆ ನಂತರ ದ್ವಿತೀಯ ಹಂತದ ಪರೀಕ್ಷೆ ನಡೆಯಲಿದ್ದು, ದ್ವಿತೀಯ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪಿಯು ತರಗತಿಗಳ ಅಭ್ಯಾಸದಲ್ಲಿ ತಿಂಗಳಿಗೆ 1200 ರೂ. ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ಮಾಸಿಕ 2000 ರೂ. ಮತ್ತು ಉನ್ನತ ಶಿಕ್ಷಣದ ಹಂತದಲ್ಲಿ ಯುಜಿಸಿ ನಿಯಮಾನುಸಾರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆಗೆ 080-23341615 ಕರೆ ಮಾಡಬಹುದಾಗಿದೆ. ಕಳೆದ ವರ್ಷ ಈ ಪರೀಕ್ಷೆಗೆ 1,23,101 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.












Click it and Unblock the Notifications