ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಕೆ; ಕೆಲವು ಕ್ಷೇತ್ರಗಳಿಗೆ ಭಾರೀ ಬೇಡಿಕೆ
ಬೆಂಗಳೂರು, ನವೆಂಬರ್ 15; ಕಾಂಗ್ರೆಸ್ ಪಕ್ಷ 2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕರೆ ನೀಡಿತ್ತು. ಟಿಕೆಟ್ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದು, ಕೆಲವು ಕ್ಷೇತ್ರಗಳಿಗೆ ಭಾರೀ ಪೈಪೋಟಿ ಇದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಹಾಕುವ ಕುರಿತು ಮಾತನಾಡಿದ್ದರು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕದ ಜೊತೆ 2 ಲಕ್ಷದ ಡಿಡಿ ಸಲ್ಲಿಸಬೇಕು ಎಂದು ಹೇಳಿದ್ದರು. ಪರಿಶಿಷ್ಟರಿಗೆ ಡಿಡಿಯಲ್ಲಿ ಶೇ 50ರಷ್ಟು ರಿಯಾಯಿತಿ ಇದೆ ಎಂದು ತಿಳಿಸಿದ್ದರು.
ಕಾಂಗ್ರೆಸ್ ಪಕ್ಷ ಟಿಕೆಟ್ ಆಕಾಂಕ್ಷಿಗಳಿಂದ ಸಂಗ್ರಹಣೆ ಮಾಡಿದ ಹಣವನ್ನು ಕೆಪಿಸಿಸಿ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಮಾಡುತ್ತಿದೆ. ಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ ಮತ್ತು ಜಾಹೀರಾತಿಗೆ ಬಳಕೆ ಮಾಡಲಿದೆ.

ಟಿಕೆಟ್ಗೆ ಭಾರೀ ಬೇಡಿಕೆ; ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ ಭಾರೀ ಬೇಡಿಕೆ ಇದೆ. ಕೆಲವು ಕ್ಷೇತ್ರಗಳಲ್ಲಿ 4, 5 ಜನರು ಟಿಕೆಟ್ ಬಯಸಿದ್ದಾರೆ. ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಟಿಕೆಟ್ಗಾಗಿ ಇಬ್ಬರು, ತೀರ್ಥಹಳ್ಳಿ ಕ್ಷೇತ್ರದ ಟಿಕೆಟ್ಗೆ 5, ಸಾಗರ ಕ್ಷೇತ್ರದ ಟಿಕೆಟ್ಗೆ ಒಂದೇ ಕುಟುಂಬದ ಮೂವರು ಅರ್ಜಿ ಸಲ್ಲಿಸಿದ್ದಾರೆ. ಹಾಲಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಕ್ಕೆ ಸಹ ಟಿಕೆಟ್ ಆಕಾಂಕ್ಷಿಗಳಿದ್ದಾರೆ.
ಅಪ್ಪ ಮತ್ತು ಮಗ ಬೇರೆ ಬೇರೆ ಕ್ಷೇತ್ರದಲ್ಲಿ ಟಿಕೆಟ್ ಬಯಸಿ ಅರ್ಜಿ ಹಾಕಿದ್ದಾರೆ. ಒಂದು ಸಾವಿರಕ್ಕೂ ಅಧಿಕ ಮಂದಿ ಅರ್ಜಿ ಸ್ವೀಕಾರ ಮಾಡಿದ್ದರು. ಇವರಲ್ಲಿ 400ಕ್ಕೂ ಅಧಿಕ ಆಕಾಂಕ್ಷಿಗಳು ಇದುವರೆಗೂ ಟಿಕೆಟ್ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಹಾಲಿ ಶಾಸಕರು, ಕಾಂಗ್ರೆಸ್ನ ವಿವಿಧ ಘಟಕಗಳ ಪದಾಧಿಕಾರಿಗಳು, ಮಾಜಿ ಶಾಸಕರು ಮುಂದಿನ ವಿಧಾನಸಭೆ ಚುಣಾವಣೆಯ ಟಿಕೆಟ್ ಕೇಳಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 15 ಕೊನೆಯ ದಿನ ಎಂದು ಕಾಂಗ್ರೆಸ್ ಹೇಳಿತ್ತು.
ಆದರೆ ಇನ್ನೂ ಅರ್ಜಿ ಸಲ್ಲಿಕೆ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಲ್ಲದೇ ಹಾಲಿ ಶಾಸಕರು ಕೆಲವರು ಇನ್ನೂ ಅರ್ಜಿ ಸಲ್ಲಿಕೆ ಮಾಡಿಲ್ಲ. ಈ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ.
ಯಾವ ಕ್ಷೇತ್ರಗಳಿಗೆ ಬೇಡಿಕೆ; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಟಿಕೆಟ್ಗಾಗಿ ಐವರು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆರ್. ಎಂ. ಮಂಜುನಾಥ ಗೌಡ ಅರ್ಜಿ ಸಲ್ಲಿಸಿದ್ದಾರೆ. ಸಚಿನ್ ಮಿಗಾ ಸಹ ಕ್ಷೇತ್ರದ ಟಿಕೆಟ್ಗಾಗಿ ಅರ್ಜಿ ಹಾಕಿದ್ದಾರೆ.
ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಸಚಿನ್ ಮಿಗಾ ಚಿಕ್ಕಮಗಳೂರು, ಶೃಂಗೇರಿ, ತೀರ್ಥಹಳ್ಳಿ, ಪಾಂಡವಪುರ, ದೇವರಹಿಪ್ಪರಗಿ ಕ್ಷೇತ್ರಗಳ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ.
92 ವರ್ಷದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಬಯಸಿದ್ದಾರೆ. 27 ವರ್ಷದ ಐಶ್ವರ್ಯಾ ಮಹದೇವ್ ಕೆ. ಆರ್. ನಗರ ಕ್ಷೇತ್ರದ ಟಿಕೆಟ್ಗಾಗಿ ಅರ್ಜಿ ಹಾಕಿದ್ದಾರೆ.
ಬಸವನಬಾಗೇವಾಡಿಯಿಂದ ಹಾಲಿ ಶಾಸಕ ಶಿವಾನಂದ್ ಪಾಟೀಲ್ ಅರ್ಜಿ ಹಾಕಿದ್ದರೆ ಅವರ ಪುತ್ರಿ ಸಂಯುಕ್ತಾ ಪಾಟೀಲ್ ವಿಜಯಪುರ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ.
ಮಾಜಿ ಸಚಿವ ಹೆಚ್. ಸಿ. ಮಹದೇವಪ್ಪ ನಂಜನಗೂಡು ಕ್ಷೇತ್ರದ ಟಿಕೆಟ್ ಕೇಳಿದ್ದಾರೆ. ಅವರ ಪುತ್ರ ಸುನೀಲ್ ಬೋಸ್ ಟಿ. ನರಸೀಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ.
ಸಾಗರ ಕ್ಷೇತ್ರದ ಟಿಕೆಟ್ಗಾಗಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿ, ಬೇಳೂರು ಗೋಪಾಲಕೃಷ್ಣ ಅರ್ಜಿ ಹಾಕಿದ್ದಾರೆ.
ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಟಿಕೆಟ್ಗೆ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಪ್ರಸನ್ನ ಕುಮಾರ್ ಟಿಕೆಟ್ ಬಯಸಿದ್ದಾರೆ.
ಕಲಘಟಗಿ ಕ್ಷೇತ್ರದ ಟಿಕೆಟ್ಗಾಗಿ ಮಾಜಿ ಸಚಿವ ಸಂತೋಷ್ ಲಾಡ್, ನಾಗರಾಜ್ ಛಬ್ಬಿ ಆಕಾಂಕ್ಷಿಗಳು. ಅಲ್ಲದೇ ಸಂತೋಷ್ ಲಾಡ್ ಬಳ್ಳಾರಿ ನಗರದ ಟಿಕೆಟ್ ಸಹ ಕೇಳಿದ್ದಾರೆ.












Click it and Unblock the Notifications