ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು, ಡಿಸೆಂಬರ್ 16; ಚಿತ್ರದುರ್ಗದ ಮುರುಘಾಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮ ಇದೀಗ ಕಟಕಟೆ ಏರಿದೆ.
ಇದರಿಂದಾಗಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮರುಘಾ ಸ್ವಾಮೀಜಿ ಪ್ರಕರಣಕ್ಕೂ ಹೊಸ ತಿರುವು ಸಿಕ್ಕಿದೆ. ಚಿತ್ರದುರ್ಗದ ಮಠದ ಭಕ್ತರಾದ ಡಿ. ಎಸ್. ಮಲ್ಲಿಕಾರ್ಜುನ ಮತ್ತಿತರರು ಸರ್ಕಾರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಸರಕಾರ ಡಿ.13ರಂದು ಹೊರಡಿಸಿರುವ ಆದೇಶ ರದ್ದುಗೊಳಿಸುವಂತೆ ಕೋರಿದ್ದಾರೆ. ಅರ್ಜಿ ಶುಕ್ರವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ತಮ್ಮ ವಿರುದ್ಧ ಪ್ರಕರಣ ದಾಖಲಾದ ನಂತರ ಈಗಾಗಲೇ ಮುರುಘಾ ಶರಣರು ಮಠದ ವ್ಯವಹಾರಗಳಿಗೆ ಸಂಬಂಧಿಸಿದ ಜಿಪಿಎ ನೀಡಿದ್ದಾರೆ. ಶಿಕ್ಷ ಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮಿಗೆ ಜಿಪಿಎ ನೀಡಲಾಗಿದೆ. ಮಠಾಧಿಪತಿ ಜೈಲಿನಲ್ಲಿರುವುದು ಆಡಳಿತಾಧಿಕಾರಿ ನೇಮಿಸಲು ಸಕಾರಣವಲ್ಲ. ಹಾಗಾಗಿ ಆಡಳಿತಾಧಿಕಾರಿ ನೇಮಕ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಅಲ್ಲದೆ, ಅರ್ಜಿಯಲ್ಲಿ ಆಡಳಿತಾಧಿಕಾರಿಯನ್ನಾಗಿ ನೇಮಿಸಿರುವ ಅಧಿಕಾರಿಯ ವಿರುದ್ದವೂ ಹಲವು ಆರೋಪಗಳಿವೆ ಎಂದು ಹೇಳಲಾಗಿದದೆ.
ಅರ್ಜಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಕಾರ್ಯದರ್ಶಿ, ಮುಜರಾಯಿ ಇಲಾಖೆಯ ಉಪ ಕಾರ್ಯದರ್ಶಿ, ಮುಜರಾಯಿ ಆಯುಕ್ತರು, ಚಿತ್ರದುರ್ಗ ಜಿಲ್ಲಾಧಿಕಾರಿ, ಆಡಳಿತಾಧಿಕಾರಿ ಪಿ. ಎಸ್. ವಸ್ತ್ರದ, ರಿಜಿಸ್ಟ್ರಾರ್ ಆಫ್ ಸೊಸೈಟಿ, ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷ ಮತ್ತು ಪೊಕ್ಸೊ ಪ್ರಕರಣದ ಆರೋಪಿ ಶಿವಮೂರ್ತಿ ಶರಣರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಸರ್ಕಾರದಿಂದ ನೇಮಕ; ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಅವರು ಜೈಲು ಸೇರಿದ್ದಾರೆ. ಸ್ವಾಮೀಜಿಗಳು ನ್ಯಾಯಾಂಗ ಬಂಧನದಲ್ಲಿರುವ ಕಾರಣ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಒತ್ತಾಯಿಸಲಾಗಿತ್ತು.
ಈ ಸಂಬಂಧ ಕರ್ನಾಟಕ ಸರ್ಕಾರ ಅಡ್ವೊಕೇಟ್ ಜನರಲ್ ಅಭಿಪ್ರಾಯ ಕೇಳಿತ್ತು. ಆಗ ಟ್ರಸ್ಟ್ ಸ್ವತ್ತು ರಕ್ಷಣೆ ಮಾಡುವ ಉದ್ದೇಶದಿಂದ ಸಂವಿಧಾನದ ಅನುಚ್ಛೇಧ 162ರ ಅನ್ವಯ ಸರ್ಕಾರ ಆಡಳಿತಾಧಿಕಾರಿ ನೇಮಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಬಳಿಕ ಚಿತ್ರದುರ್ಗ ಮುರುಘಾ ಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ್ರನ್ನು ಆಡಳಿತಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈಗ ಈ ಆದೇಶವನ್ನು ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿದೆ.












Click it and Unblock the Notifications