ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಸದಸ್ಯರ ನೇಮಕ; 2 ವಾರ ಗಡುವು
ಬೆಂಗಳೂರು, ಜುಲೈ 25; ಬಹುತೇಕ ಒಂದು ವರ್ಷದಿಂದ ಖಾಲಿ ಉಳಿದಿರುವ ಕರ್ನಾಟಕ ಪೊಲೀಸ್ ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಿದೆ.
ಇಲ್ಲವಾದರೆ ಗೃಹ ಇಲಾಖೆಯ ಹೊಣೆ ಹೊತ್ತಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಖುದ್ದು ಹಾಜರಾಗಿ ವಿವರಣೆ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ. ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಆಗ ಸರ್ಕಾರಿ ವಕೀಲರು, ಮತ್ತೆ ಸಮಯಾವಕಾಶ ಕೋರಿದರು. ಅದಕ್ಕೆ ಆಕ್ಷೇಪ ಎತ್ತಿದ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ, ಕಳೆದ ಬಾರಿಯೂ ಸಮಯ ಕೋರಿದ್ದರು. ಈಗ ಮತ್ತೆ ಕೋರುತ್ತಿದ್ದಾರೆ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಾಧಿಕಾರ ಇದ್ದೂ ಇಲ್ಲದಂತಾಗಿದೆ. ಜನರಿಗೆ ತೊಂದರೆ ಆಗುತ್ತಿದೆ ಎಂದರು.
ಕಾಲಾವಕಾಶ ನೀಡಲಾಗಿತ್ತು; ನ್ಯಾಯಪೀಠ, ಕಳೆದ ಜೂನ್ನಲ್ಲಿ ಮೂರು ವಾರ ಕಾಲಾವಕಾಶ ನೀಡಲಾಗಿತ್ತು. ಈಗ ಮತ್ತೆ ಸಮಯ ಕೋರಲಾಗುತ್ತಿದೆ. ಕೇವಲ ಎರಡು ವಾರ ನೀಡಲಾಗುವುದು. ಇದೇ ಕೊನೆಯ ಅವಕಾಶ ನೀಡುವುದು, ಅಷ್ಟರಲ್ಲಿ ನೇಮಕ ಮಾಡಬೇಕು. ಇಲ್ಲವಾದರೆ ಎಸಿಎಸ್ ಖುದ್ದು ಹಾಜರಾಗಿ ವಿವರಣೆ ನೀಡಬೇಕಾಗುತ್ತದೆ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುರ್ಖಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬ್ಬದಿ ಮತ್ತು ಆಡಳಿತ ಸುಧಾರಣೆ ಇಖಾಖೆ ಹೆಚ್ಚುವರಿ ಕಾರ್ಯದರ್ಶಿಗೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿತ್ತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸುಪ್ರಿಂಕೋರ್ಟ್ ಆದೇಶದ ಮೇರೆಗೆ ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳ ವಿರುದ್ಧ ದೂರು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪೊಲೀಸ್ ಪ್ರಾಧಿಕಾರ ರಚಿಸಲಾಗಿದೆ. ಆದರೆ, ಸಕಾಲಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡುತ್ತಿಲ್ಲ. ಪ್ರಾಧಿಕಾರಕ್ಕೆ ಅಗತ್ಯ ಸಿಬ್ಬಂದಿ ಮತ್ತು ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ತಿಳಿಸಿದರು.
ಸ್ವತಂತ್ರ ಮತ್ತು ಶಾಸನಾತ್ಮಕ ಹುದ್ದೆಯಾದ ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಬೇಕಿದೆ. ಅಧ್ಯಕ್ಷ ಹುದ್ದೆಯು 2022ರ ಆ.11ರಿಂದ ಖಾಲಿ ಉಳಿದಿದೆ. ಒಂದು ಸದಸ್ಯ ಸ್ಥಾನ 2020ರ ಮೇ 8 ರಿಂದ ಮತ್ತು ಮತ್ತೊಂದು ಸದಸ್ಯ ಸ್ಥಾನ 2022ರ ಡಿ.28ರಿಂದ ಖಾಲಿ ಇದೆ.
ಸಕಾಲಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸದ ಕಾರಣ ಪ್ರಾಧಿಕಾರ ತನ್ನ ಶಾಸನಾತ್ಮಕ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿಲ್ಲ. ಅಪಾರ ಪ್ರಮಾಣದಲ್ಲಿ ದೂರುಗಳು ಮತ್ತು ಕುಂದು ಕೊರತೆಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಆದ್ದರಿಂದ ಖಾಲಿಯಿರುವ ಪ್ರಾಧಿಕಾರದ ಅಧ್ಯಕ್ಷ ಹಾಗೂ ಇಬ್ಬರ ಸದಸ್ಯರನ್ನು ಕೂಡಲೇ ನೇಮಕ ಮಾಡಲು ಸರ್ಕಾರಕ್ಕೆ ಅದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.












Click it and Unblock the Notifications