Siddaramaiah: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರ: ಸಚಿವರಿಂದ ಇಂದು 'ರಾಜಭವನ ಚಲೋ'ಗೆ ಸಿದ್ಧತೆ
ಬೆಂಗಳೂರು ಆಗಸ್ಟ್ 17: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟವನ್ನು ತಂದೊಡ್ಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದರ ವಿರುದ್ಧ ಸಚಿವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸಚಿವರಿಂದ ಇಂದು 'ರಾಜಭವನ ಚಲೋ'ಗೆ ಸಿದ್ಧತೆ ನಡೆಸಲಾಗಿದೆ.
ಇದೇ ಕಾರಣಕ್ಕೆ ಇಂದು ಸಂಜೆ ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಲಾಗಿದೆ. ಕಾನೂನು ತಜ್ಞರು ಹಾಗೂ ಹಿರಿಯ ಸಚಿವರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಬಳಿಕ ಸಚಿವರೊಂದಿಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಹೀಗಾಗಿ ಇಂದು ಸಂಜೆ ಸಚಿವರಿಗೆ ಬುಲಾವ್ ನೀಡಲಾಗಿದೆ.

ಪ್ರಾಸಿಕ್ಯೂಷನ್ಗೆ ಅನುಮತಿ ವಿರೋಧಿಸಿ ಸಂಪುಟದಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಇಂದಿನ ಸಂಪುಟ ಸಭೆಗೂ ಸಿಎಂ ಸಿದ್ದರಾಮಯ್ಯ ಗೈರಾಗುವ ಸಾಧ್ಯತೆ ಇದ್ದು ಸಭೆ ರದ್ದುಗೊಳಿಸಲಾಗಿದೆ. ಈ ಹಿಂದೆ ರಾಜ್ಯಪಾಲರ ಕ್ರಮ ವಿರೋಧಿಸಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೂಡ ಸಿದ್ದರಾಮಯ್ಯ ಸಂಪುಟ ಸಭೆಯಿಂದ ಹೊರಗುಳಿದಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿತ್ತು.
ಏನಿದು ಪ್ರಕರಣ?
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಹೀಗಾಗಿ ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ. ಇದರಿಂದಾಗಿ ಸಿಎಂ ನಿವಾಸದಲ್ಲಿ ಈ ಬಗ್ಗೆ ಬಿಸಿ ಬಿಸಿ ಚರ್ಚೆಗಳು ಶುರುವಾಗಿವೆ.
ಕ್ರಿಮಿನಲ್ ಪ್ರಕರಣ ದಾಖಲಾದರೆ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ. ಇದರಲ್ಲಿ ಕೋರ್ಟ್ ಆದೇಶ ಮಹತ್ವ ಪಡೆಯಲಿದೆ. ಕೋರ್ಟ್ ತನಿಖೆಗೆ ಆದೇಶ ನೀಡಬಹುದು. ಇಲ್ಲವಾದಲ್ಲಿ ಸಿಎಂಗೆ ಸಮನ್ಸ್ ಜಾರಿಗೊಳಿಸಬಹುದು. ಅಥವಾ ದೂರಿನಲ್ಲಿ ಸತ್ಯಾಂಶವಿಲ್ಲ ಎನ್ನಿಸಿದರೆ ಖಾಸಗಿ ದೂರು ವಜಾಗೊಳಿಸಬಹುದು.
ಹೀಗಾಗಿ ಮುಂದೆ ಎಲ್ಲವೂ ಕೋರ್ಟ್ ಆದೇಶದ ಮೇಲೆ ನಿರ್ಣಯವಾಗಲಿದೆ. ಒಂದು ವೇಳೆ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದು ಮುಡಾ ಹಗರಣದಲ್ಲಿ ತಪ್ಪಿದೆ ಎಂದು ಸಾಬೀತಾದರೆ, ವಿಚಾರಣೆಗೆ ಹಾಜರಾಗಬೇಕಾಗಿ ಬಂದರೆ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇದರಿಂದಾಗಿ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗಳು ಶುರುವಾಗಿವೆ.












Click it and Unblock the Notifications