ಅಡಿಕೆ, ತೆಂಗು ಬೆಳೆಗಾರರ ಹಿತ ಕಾಯಲು ಮತ್ತೊಮ್ಮೆ ಕೇಂದ್ರಕ್ಕೆ ಮನವಿ
ಬೆಂಗಳೂರು, ಆಗಸ್ಟ್, 16: ಅಡಿಕೆ ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಪಕ್ಷ ನಾಯಕರು, ಸಚಿವರು ಮತ್ತು ರೈತ ಮುಖಂಡರ ಸಭೆ ಮಂಗಳವಾರ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸಹಕಾರ ಸಚಿವ ಮಹದೇವ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.[ಅಡಿಕೆ ಧಾರಣೆ ಕುಸಿತಕ್ಕೆ ಸಾರ್ಕ್ ಒಕ್ಕೂಟ ಕಾರಣ ಅಂದ್ರೆ ನಂಬ್ತೀರಾ?]
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ'ದಲ್ಲಿ ಸಭೆ ನಡೆಯಿತು. ಅಡಿಕೆ ಮತ್ತು ತೆಂಗು ಬೆಳೆಗಾರರು ಸಂಕಷ್ಟ ಎದುರಿಸುತ್ತಿರುವುದರಿಂದ ಕೇಂದ್ರ ರಾಜ್ಯ ಸರ್ಕಾರಗಳು ಒಟ್ಟಾಗಿ ಬೆಳೆಗಾರರ ಹಿತ ಕಾಪಾಡಲು ನಿರ್ಧರಿಸಿದ್ದು, ಸದ್ಯದಲ್ಲೇ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
ಕೇಂದ್ರದ ಮೇಲೆ ಮತ್ತೆ ಒತ್ತಡ
ಸಭೆಯ ಬಳಿಕ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಅಡಿಕೆ ಮತ್ತು ತೆಂಗು ಬೆಳೆಗಾರರ ಜ್ವಲಂತ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ತಾವು ಈಗಾಗಲೇ ಕೇಂದ್ರದ ಕೃಷಿ ಮತ್ತು ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಬೆಳೆಗಾರರ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ.
ರಾಜ್ಯ ಸರ್ಕಾರದಿಂದಲೂ ನೆರವು
ರಾಜ್ಯ ಸರ್ಕಾರ ಕೂಡ ರೈತರ ನೆರವಿಗೆ ಬರುವುದಾಗಿ ಹೇಳಿದೆ. ಕೇಂದ್ರದ ಮೇಲೆ ಒತ್ತಡ ಹೇರಿಕೆ ಸದ್ಯ ರಾಜ್ಯ ಸರ್ಕಾರದ ಮುಂದಿರುವ ಆಯ್ಕೆ.
ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚೆ
ಕೇಂದ್ರ ಸಚಿವ ಸಂಪುಟ ಬುಧವಾರ ನಡೆಯಲಿದ್ದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಕೇಂದ್ರ ವಿಷಯವನ್ನು ಮತ್ತೊಮ್ಮೆ ಗಮನಕ್ಕೆ ತರಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಎಲ್ಲರೂ ಸೇರಿ ಶ್ರಮಿಸೋಣ
ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಎಲ್ಲರೂ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕೋಣ, ಜತೆಗೆ ಕಾನೂನುನಿನಲ್ಲಿ ಅಗತ್ಯವಿದ್ದರೆ ಬದಲಾವಣೆ ತರೋಣ ಎಂದು ಹೇಳಿದರು.