Arecanut: ಅಡಿಕೆ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಮತ್ತೆ ನಿರಾಸೆ!
Arecanut Growers: ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯನ್ನು ಕೊಡಲಿದೆ ಎಂದು ನಿರೀಕ್ಷೆ ಮಾಡಲಾಗುತ್ತಿತ್ತು. ಆದರೆ, ಆ ನಿರೀಕ್ಷೆಗಳು ಸದ್ಯಕ್ಕೆ ಈಡೇರುವ ಯಾವ ಲಕ್ಷಣಗಳು ಸಹ ಕಾಣಿಸುತ್ತಿಲ್ಲ. ರಾಜ್ಯದಲ್ಲಿ ಅಡಿಕೆ ಬೆಳೆಗಾರರು ಹಲವು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಅಡಿಕೆ ಬೆಳೆಯ ಕೃಷಿ ಪ್ರದೇಶವನ್ನು ಅಭಿವೃದ್ಧಿ ಮಾಡುವ ಬಗ್ಗೆ ನಿರಂತರವಾಗಿ ಚರ್ಚೆಗಳು ನಡೆಯುತ್ತಲ್ಲೇ ಇವೆ. ಅಡಿಕೆ ಬೆಳೆಗಾರರ ಹಲವು ವರ್ಷಗಳ ಸಮಸ್ಯೆಗೆ ಈ ಬಾರಿ ಕೇಂದ್ರ ಸರ್ಕಾರದಿಂದ ಪರಿಹಾರ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಅಡಿಕೆ ಬೆಳೆಗಾರರಿಗೆ ಈ ಬಾರಿಯೂ ಕೇಂದ್ರ ಸರ್ಕಾರ ಯಾವುದೇ ಗುಡ್ನ್ಯೂಸ್ ಕೊಟ್ಟಿಲ್ಲ. ಅಲ್ಲದೆ ಈ ರೈತರು ಬಹು ದಿನಗಳ ಕನಸಿಗೂ ತಣ್ಣೀರು ಎರಚಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಅಡಿಕೆ ಬೆಳೆಗಾರರು ಹೊಸ ಹೊಸ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಡಿಕೆ ಬೆಳೆಯಲ್ಲಿ ರೋಗ ಬರುವುದು ಹಾಗೂ ಅಡಿಕೆಯ ಬಗ್ಗೆ ಅಪಪ್ರಚಾರಗಳು ನಡೆಯುವುದು ಸೇರಿದಂತೆ ಹಲವು ಸಮಸ್ಯೆಗಳು ಮುಂದುವರಿದಿವೆ. ಈ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದೇ ರಾಜ್ಯದ ಅಡಿಕೆ ಬೆಳೆಗಾರರು ನಿರೀಕ್ಷೆ ಮಾಡಿದ್ದರು. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆದಿದ್ದು. ಅಡಿಕೆ ಬೆಳೆಗಾರರ ಬಹು ದಿನಗಳ ಕನಸಿಗೆ ಕೇಂದ್ರ ಸರ್ಕಾರವು ಯಾವುದೇ ಉತ್ಸಾಹ ತೋರಿಸಿಲ್ಲ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿ 2024 ಹಾಗೂ 25ನೇ ಸಾಲಿನಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ನಿರ್ವಹಣೆ ಮಾಡುವುದಕ್ಕೆಂದು ಕೇಂದ್ರ ಕೃಷಿ ಸಚಿವಾಲಯ ಬರೋಬ್ಬರಿ 37 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಅಲ್ಲದೆ ಹವಾಮಾನ ಬೆಳೆ ಆಧಾರಿತ ವಿಮಾ ಯೋಜನೆಯಲ್ಲಿಯೇ ಅಡಿಕೆ ಬೆಳೆಯನ್ನು ಸಹ ಸೇರಿಸಲಾಗಿದೆ. ಆದರೆ, ಅಡಿಕೆ ರೈತರು ಪ್ರಮುಖ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಅಡಿಕೆ ಕೃಷಿ ಪ್ರದೇಶವನ್ನು ಜಾಸ್ತಿ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೆ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದನೆ ಸಿಗಬೇಕಾದರೆ, ಪ್ರತ್ಯೇಕ ಅಡಿಕೆ ಮಂಡಳಿ ನಿರ್ಮಾಣವಾಗಬೇಕು ಎನ್ನುವ ಬೇಡಿಕೆಯನ್ನು ಹಲವು ವರ್ಷಗಳಿಂದ ಅಡಿಕೆ ಬೆಳೆಗಾರರು ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ ಎನ್ನಲಾಗಿದೆ. ಯಾಕೆಂದರೆ ಈ ವಿಚಾರದ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಸರ್ಕಾರವು ಉತ್ತರಿಸಿಲ್ಲ.

ಅಡಿಕೆ ಮಂಡಳಿ ಸ್ಥಾಪನೆಗೆ ಉತ್ತರವಿಲ್ಲ: ಇನ್ನು ಕೇಂದ್ರ ಸರ್ಕಾರವು ಅಡಿಕೆ ಮಂಡಳಿ ಸ್ಥಾಪನೆಯ ಬಗ್ಗೆ ಉತ್ತರವನ್ನೇ ಕೊಡದೆ ಇರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ರಾಯಚೂರು ಸಂಸದ ಜಿ.ಕುಮಾರ ನಾಯಕ ಅವರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರವು ಉತ್ತರಿಸಿದೆ. ಅಡಿಕೆ ಬೆಳೆ ಅಭಿವೃದ್ಧಿಗೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಕೇಂದ್ರ ಸರ್ಕಾರವು ಸುಧಾರಣೆ ಕ್ರಮಗಳನ್ನು ಕೈಗೊಂಡ ಕ್ರಮಗಳ ವಿವರ ನೀಡಿದ್ದಾರೆ. ಆದರೆ, ಮಂಡಳಿ ಸ್ಥಾಪನೆ ಬೇಡಿಕೆ ಕುರಿತು ಉತ್ತರಿಸಿಲ್ಲ.
ಕರ್ನಾಟಕ ಸಂಸದರಿಂದ ಪ್ರಶ್ನೆ: ಇನ್ನು ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಈ ಸಂಬಂಧ ಸಂಸತ್ತಿನಲ್ಲಿ ಮಾತನಾಡಿರುವ ಸಂಸದ ಕುಮಾರ ನಾಯಕ ಅವರು, ಕರ್ನಾಟಕದ 10 ಜಿಲ್ಲೆಗಳಲ್ಲಿ 7 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಅಡಿಕೆ ಕೃಷಿಯನ್ನು ಮಾಡಲಾಗುತ್ತಿದೆ. ಅಲ್ಲದೆ ಪ್ರತಿ ವರ್ಷ 11 ಲಕ್ಷ ಟನ್ಗೂ ಹೆಚ್ಚು ಅಡಿಕೆ ಉತ್ಪಾದನೆ ಮಾಡಲಾಗುತ್ತದೆ.
ಆದರೆ, ಇತ್ತೀಚಿನ ದಿನಗಳಲ್ಲಿ ಎಲೆ ಚುಕ್ಕಿ ರೋಗ ಹಾಗೂ ಹಳದಿ ರೋಗ ಎನ್ನುವುದು ಸೇರಿದಂತೆ ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ, ಅಡಿಕೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದು, ರೋಗ ನಿಯಂತ್ರಣ, ನಷ್ಟ ಪರಿಹಾರ ಕೊಡುವ ಅವಶ್ಯಕತೆ ಇದೆ ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯದಿಂದ ಪ್ರಸ್ತಾವನೆ: ರಾಜ್ಯದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವ ಉದ್ದೇಶದಿಂದ ಪ್ರತ್ಯೇಕ ಅಡಿಕೆ ಮಂಡಳಿ ಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ಈಗಾಗಲೇ ರಾಜ್ಯ ಸರ್ಕಾರವು ಪತ್ರ ಬರೆದಿತ್ತು. ಆದರೆ, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸ್ಪಂದಿಸಿಲ್ಲ ಎಂದು ಹೇಳಲಾಗಿದೆ.
ರಾಜ್ಯದ 10 ಜಿಲ್ಲೆಗಳಲ್ಲಿ ಅಡಿಕೆಯನ್ನು ಬೆಳೆಯಲಾಗುತ್ತದೆ. ಆದರೆ, ಅಡಿಕೆ ವಿಚಾರವಾಗಿ ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಅಪಪ್ರಚಾರ ಹಾಗೂ ಅಡಿಕೆಗೆ ತಗುಲುತ್ತಿರುವ ರೋಗಗಳಿಂದ ಈ ಬೆಳೆಯನ್ನು ಬೆಳೆಯುವ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ.












Click it and Unblock the Notifications