ಅರ್ಕಾವತಿ ಬಡಾವಣೆ ಫೈಟ್ ಯಾರು, ಏನು ಹೇಳಿದರು?
ಬೆಂಗಳೂರು, ಜ.17 : ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಅರ್ಕಾವತಿ ಫೈಟ್ ನಡೆಯುತ್ತಿದೆ. ಅರ್ಕಾವತಿ ಅಕ್ರಮ ಡಿನೋಟಿಫಿಕೇಶನ್ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಅನುಮತಿ ಕೋರಿ ರಾಜಭವನದ ಕದ ತಟ್ಟಲು ಬಿಜೆಪಿ ಸಿದ್ಧತೆ ನಡೆಸಿದೆ. ನಾನು ಒಂದಿಚೂ ಡಿನೋಟಿಫಿಕೇಶನ್ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, 'ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಗುಂಟೆ ಭೂಮಿಯನ್ನು ಡಿನೋಟಿಫೈ ಮಾಡಿಲ್ಲ. ಡಿನೋಟಿಫೈ ಹಗರಣಗಳೆಲ್ಲವೂ ಬಿಜೆಪಿ ಅವಧಿಯಲ್ಲಿ ನಡೆದಿವೆ. ಈ ವಿಚಾರವಾಗಿ ವಿಧಾನಸಭೆಯಲ್ಲಿ ದಿನಾಂಕ ಸಹಿತ ದಾಖಲೆ ನೀಡಿದ್ದೇನೆ' ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. [ಅರ್ಕಾವತಿ ಬಡಾವಣೆ ವಿವಾದ ಏಕೆ? ಏನು?]
'ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಅರ್ಕಾವತಿ ಗಲಾಟೆ ಬಗ್ಗೆ ಯಾರು ಏನು ಹೇಳಿದರು.
ರಾಜಕೀಯ ಲಾಭಕ್ಕಾಗಿ ಬಿಜೆಪಿ ವಿಷಯ ಪ್ರಸ್ತಾಪಿಸುತ್ತಿದೆ
'ನಮ್ಮ ಸರ್ಕಾರ ಬಂದ ಮೇಲೆ ಒಂದೇ ಒಂದು ಗುಂಟೆ ಭೂಮಿಯನ್ನು ಡಿನೋಟಿಫೈ ಮಾಡಿಲ್ಲ. ಈ ವಿಚಾರವಾಗಿ ವಿಧಾನಸಭೆಯಲ್ಲಿ ದಿನಾಂಕ ಸಹಿತ ದಾಖಲೆ ನೀಡಿದ್ದೇನೆ. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಈ ವಿಷಯ ಪ್ರಸ್ತಾಪಿಸುತ್ತಿದ್ದಾರೆ. ಅವರ ಬಳಿ ದಾಖಲೆಗಳಿದ್ದರೂ ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ ನೀಡಲಿ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅರ್ಕಾವತಿ ಕೇಸಲ್ಲಿ ಪ್ರಾಮಾಣಿಕತೆ ಸಾಬೀತುಪಡಿಸಿ
ಅರ್ಕಾವತಿ ಹಗರಣದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಅರ್ಕಾವತಿ ಕೇಸಲ್ಲಿ ಪ್ರಾಮಾಣಿಕತೆ ಸಾಬೀತುಪಡಿಸಿ, ಅರ್ಕಾವತಿ ಡಿನೋಟಿಫಿಕಶನ್ ಹಗರಣದಲ್ಲಿ ಸಿಎಂ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆದಿದೆ' ಎಂದು ಅವರು ಹೇಳಿದ್ದಾರೆ.
ಒಂದು ವಾರದೊಳಗೆ ನಿರ್ಧಾರ
ಅರ್ಕಾವತಿ ಫೈಟ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, 'ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಹೋರಾಟ ನಡೆಸಲು ವಾರದೊಳಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ' ಹೇಳಿದ್ದಾರೆ.
ಅರ್ಕಾವತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ
ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. 'ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಹೈಕೋರ್ಟ್ ಆದೇಶದಂತೆ ಡಿನೋಟಿಫೈ ಮಾಡಲಾಗಿದೆ, ಬಿಜೆಪಿ ನಾಯಕರು ಇದರ ಬಗ್ಗೆ ಇಲ್ಲಸಲ್ಲದ ಆರೋಪವನ್ನು ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ' ಎಂದು ಆಂಜನೇಯ ದೂರಿದ್ದಾರೆ.
ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ
ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ. 'ಅರ್ಕಾವತಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನೂ ಇಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ ನಡೆದಿದೆ' ಎಂದು ಆರೋಪಿಸಿದ್ದಾರೆ.