'ಗೃಹ ಸಚಿವ ಆರಗ ಜ್ಞಾನೇಂದ್ರ ಮೇಲೆ ರೇಪ್ ಮಾಡಿರುವವರನ್ನು ಸೆಕ್ಷನ್ 376 ಕೇಸ್ ಹಾಕಿ ಬಂಧಿಸಲಿ'
ಬೆಂಗಳೂರು, ಆ. 26: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಟ್ಟಿದ್ದ ಹೇಳಿಕೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ನಾನು ಮನನೊಂದು ಮಾತನಾಡಿದ್ದೆ. ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ಮತ್ತು ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ" ಎಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಆರಗ ಜ್ಞಾನೇಂದ್ರ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.
"ಆ ಹೆಣ್ಣು ಮಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಯಾಕೆ ಹೋಗಬೇಕಿತ್ತು? ಎಂದು ಸಚಿವ ಆರಗ ಜ್ಞಾನೇಂದ್ರ ಕೇಳುತ್ತಾರೆ ಎಂದರೆ, ಈ ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಬಿಜೆಪಿಯ ಮನಸ್ಥಿತಿಗೆ ಹಿಡಿದ ಕೈಗನ್ನಡಿ. ರಾಜ್ಯದಲ್ಲಿ ಸೆಕ್ಷನ್ 376ಕ್ಕೆ ಸಂಬಂಧಿಸಿದ ಅನೇಕ ಘಟನೆಗಳು ನಡೆದಿವೆ. ಯಾವ ಪ್ರಕರಣದಲ್ಲೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ. ಹಿರಿಯ ಹಾಗೂ ವಿದ್ಯಾವಂತ ಗೃಹ ಸಚಿವರು ತಮ್ಮ ಮೇಲೆಯೇ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ" ಎಂದು ಹೇಳಿಕೆ ನೀಡಿದ್ದಾರೆ.

48 ಗಂಟೆಗಳಾದರೂ FIR ದಾಖಲಾಗಿರಲಿಲ್ಲ ಯಾಕೆ?
"ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಇನ್ನು, ಗೃಹ ಮಂತ್ರಿ ಆರಗ ಜ್ಞಾನೇಂದ್ರ ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಅದು ಯಾರೇ ಆಗಿರಲಿ ಅವರ ಮೇಲೆ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಿ" ಎಂದು ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಗೃಹ ಸಚಿವರ ಮೇಲೆ ರೇಪ್ ಮಾಡಿದವರನ್ನು ಬಂಧಿಸಿ!
"ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡುತ್ತಿದ್ದಾರೆ ಎಂದು ನೂತನ ಗೃಹ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಅವರನ್ನು ಯಾವ ಕಾಂಗ್ರೆಸಿಗರು ರೇಪ್ ಮಾಡಿದ್ದಾರೆ? ಗೃಹ ಸಚಿವರ ಮೇಲೆ ಯಾರು ರೇಪ್ ಮಾಡಿದ್ದಾರೋ, ಅದು ಯಾವುದೇ ನಾಯಕರಾಗಿರಲಿ, ಅವರ ಮೇಲೆ ಪೊಲೀಸರು 376 ಕಾಯ್ದೆ ಅನ್ವಯ ದೂರು ದಾಖಲಿಸಿ, ಬಂಧಿಸಲಿ ಎಂದು ನಾನು ಪೊಲೀಸ್ ಮಹಾ ನಿರ್ದೇಶಕರನ್ನು (ಡಿಜಿಪಿ) ಆಗ್ರಹಿಸುತ್ತಿದ್ದೇನೆ. ಅವರ ಬಾಯಲ್ಲಿ ರೇಪ್ ಎಂಬ ಪದ ಇಷ್ಟು ಸಲೀಸಾಗಿ ಬರುತ್ತಿರುವುದನ್ನು ನೋಡಿದರೆ ಅವರಿಗೆ ರೇಪ್ ಎಂಬ ಪದದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದು ಗೊತ್ತಾಗುತ್ತದೆ. ಈ ವಿಚಾರವಾಗಿ ನಾನು ಗೃಹ ಸಚಿವರಿಂದ ಯಾವುದೇ ಉತ್ತರ ನಿರೀಕ್ಷಿಸುವುದಿಲ್ಲ. ಅವರ ಪಕ್ಷದ ಎಲ್ಲ ನಾಯಕರೂ ಅವರ ಹೇಳಿಕೆಗೆ ಉತ್ತರಿಸಬೇಕು. ಕಾಂಗ್ರೆಸ್ ಗೃಹ ಸಚಿವರನ್ನೇ ರೇಪ್ ಮಾಡುತ್ತಿದೆ ಎನ್ನುವುದಾದರೇ ಇವರ ಆಡಳಿತ ಯಾವ ಹಂತಕ್ಕೆ ಬಂದು ನಿಂತಿದೆ?" ಎಂದು ಟೀಕಿಸಿದ್ದಾರೆ.

ಪ್ರಕರಣದ ವರದಿ ಸಲ್ಲಿಸಲು ಡಿಕೆಶಿ ಸೂಚನೆ!
ಮೈಸೂರು ದುರ್ಘಟನೆಗೆ ಸಂಬಂಧಿಸಿದಂತೆ ಉಗ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ತನಿಖಾ ಸಮಿತಿ ರಚಿಸಿದ್ದೇವೆ. ಈ ಸಮಿತಿಯಲ್ಲಿ ಎಚ್. ಎಂ. ರೇವಣ್ಣ, ಶಾಸಕ ತನ್ವಿರ್ ಸೇಠ್, ರೂಪಾ ಶಶಿಧರ್, ಮಲ್ಲಜಮ್ಮ, ಮಾನಸ ಮಂಜುಳಾ, ಮಂಜುಳಾ ನಾಯ್ಡು ಅವರು ಇದ್ದಾರೆ. ಈ ಸಮಿತಿ ಕೂಡಲೇ ಮೈಸೂರಿಗೆ ಹೋಗಿ, ಪ್ರಕರಣದ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಇನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪೊಲೀಸ್ ಅಧಿಕಾರಿಗಳು ಅತ್ಯಾಚಾರ ಸಂತ್ರಸ್ಥೆಯ ಗುರುತನ್ನು ಬಹಿರಂಗಪಡಿಸಿದ್ದು, ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಿ ದಾಖಲೆ ಸರಿಪಡಿಸಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಮೊಬೈಲ್ ಟವರ್ ಮೂಲಕ ಆರೋಪಿಗಳನ್ನು ಪತ್ತೆ ಮಾಡಿ!
ಈ ಸರ್ಕಾರ ನಮ್ಮ ರಾಜ್ಯವನ್ನು ನೀಚ ಸಂಸ್ಕೃತಿಗೆ ತೆಗೆದುಕೊಂಡು ಹೋಗುತ್ತಿದ್ದು, ಇದನ್ನು ನಾವು ಖಂಡಿಸುತ್ತೇವೆ. ಸಂತ್ರಸ್ಥರಿಗೆ ನ್ಯಾಯ ಒದಗಿಸಿಕೊಡಲು ಪೊಲೀಸರು ಕೆಲಸ ಮಾಡಬೇಕು. ಈ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ನಮ್ಮಲ್ಲಿ ಚಾಣಾಕ್ಷ ಪೊಲೀಸರಿದ್ದಾರೆ. ಅನೇಕ ಕ್ಲಿಷ್ಟ ಪ್ರಕರಣಗಳನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ್ದಾರೆ. ನನಗಿರುವ ಅಲ್ಪ ಪ್ರಮಾಣದ ಮಾಹಿತಿಯಲ್ಲಿ ರೇಪ್ ಆದ ಸಮಯದಲ್ಲಿ ಆ ಪ್ರದೇಶದ ಸುತ್ತಮುತ್ತಲಿನಲ್ಲಿರುವ ಮೊಬೈಲ್ ಟವರ್ ಮೂಲಕ ಯಾರ್ಯಾರು ಆ ಪ್ರದೇಶದಲ್ಲಿ ಇದ್ದರು ಎಂಬ ಜಾಡು ಹಿಡಿದರೆ ಈ ದುಷ್ಕೃತ್ಯ ಮಾಡಿದವರನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಬಹುದು. ಆದರೆ 48 ಗಂಟೆಗಳಾದರೂ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಮಾಧ್ಯಮಗಳಲ್ಲಿ ಈ ವಿಚಾರ ಪ್ರಸ್ತಾಪವಾದ ನಂತರ ಸರ್ಕಾರ ಈ ವಿಚಾರವಾಗಿ ಕಣ್ಣು ಬಿಡಲಾರಂಭಿಸಿದೆ. ಇದು ಸರಕಾರದ ಅಸಡ್ಡೆಗೆ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.












Click it and Unblock the Notifications