ಅರಸೀಕೆರೆ ಸ್ಪರ್ಧೆಗೆ ಸಜ್ಜಾಗಿದ್ದ BSY ಆಪ್ತನಿಗೆ ಟಿಕೆಟ್ ಮಿಸ್; ಬಿಜೆಪಿ ಟಿಕೆಟ್ ಆಕಾಂಕ್ಷಿ ಸಂತೋಷ್ ಈಗ ಜೆಡಿಎಸ್ ನತ್ತ?
ಹಾಸನ,ಏಪ್ರಿಲ್13: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಯನ್ನ ನಡೆಸಿರುವ ಬಿಜೆಪಿ ಹೈಕಮಾಂಡ್ ಆಡಳಿತ ವಿರೋಧಿ ಅಲೆಯನ್ನ ಶಮನಗೊಳಿಸುವ ನಿಟ್ಟಿನಲ್ಲಿ 60 ಕ್ಕೂ ಹೆಚ್ಚು ಹೊಸ ಮುಖಗಳಿಗೆ ಟಿಕೆಟ್ ನೀಡಿ, ಚುನಾವಣಾ ಕಣಕ್ಕಿಳಿಸಿದೆ.
224 ಕ್ಷೇತ್ರಗಳ ಪೈಕಿ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಮಂಗಳವಾರ ಬಿಡುಗಡೆಗೊಳಿಸಿದ್ದು, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳನ್ನ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಇನ್ನೂ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಲವು ಜನ ನಾಯಕರಿಗೆ ಟಿಕೆಟ್ ಮಿಸ್ ಆಗಿದ್ದು ಬಿಜೆಪಿ ಪಾಳಯದಲ್ಲಿ ಬಂಡಾಯ ಬೆಂಕಿ ಹೆಚ್ಚಾಗಿದೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಂಬಂಧಿಕರು ಹಾಗೂ ಆಪ್ತರಾಗಿ ಗುರುತಿಸಿಕೊಂಡಿದ್ ಎನ್. ಆರ್ ಸಂತೋಷ್ ಅರಸೀಕೆರೆ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಎನ್ ಆರ್ ಸಂತೋಷ್ ಗೆ ಟಿಕೆಟ್ ಮಿಸ್ ಆಗಿದೆ. ಅರಸೀಕೆರೆಯಿಂದ ಈ ಬಾರಿ ಜಿ.ವಿ ಬಸವರಾಜು ಅವರಿಗೆ ಬಿಜೆಪಿ ಹೈಕಮಾಂಡ್ ಮಾಡಿದ್ದು, ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದ ಸಂತೋಷ್ ಗೆ ಹಿನ್ನಡೆ ಉಂಟಾಗಿದೆ.
ಈಗಾಗಲೇ ಕಾಂಗ್ರೆಸ್ನಿಂದ ಶಿವಲಿಂಗೇಗೌಡರು ಸ್ಪರ್ಧಿಸುವುದು ಖಚಿತವಾಗಿದ್ದು, ಜೆಡಿಎಸ್ನಿಂದ ಬಾಣಾವರ ಅಶೋಕ್ ಅವರನ್ನು ಕಣಕ್ಕೆ ಇಳಿಸಲು ಜೆಡಿಎಸ್ ನಿರ್ಧರಿಸಿದೆ. ಈ ಮಧ್ಯೆ ಸಂತೋಷ್ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಜೆಡಿಎಸ್ನಿಂದ ಸ್ಪರ್ಧೆ ಮಾಡಬಹುದು ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಈ ಬಗ್ಗೆ ಈಗಾಗಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಜೊತೆಗೆ ಸಂತೋಷ್ ಮಾತನಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನೂ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಾಗಿವೆ. ಇತ್ತ ಎನ್.ಆರ್. ಸಂತೋಷ್ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ಸಂತೋಷ್ ಅವರಿಗೆ ಟಿಕೆಟ್ ನೀಡುವ ನಿಟ್ಟಿನಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರೂ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಆದರೆ, 2018 ರಲ್ಲಿ ರಚನೆಯಾಗಿದ್ದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ೆಕಾರದ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿ ಎಸ್ ಯಡಿಯೂರಪ್ಪ್ ಅವರು ಆಪ್ತ ಎನ್ ಆರ್ ಸಂತೋಷ್ ಅವರಿಗೆ ಜೆಡಿಎಸ್ನಿಂದ ಟಿಕೆಟ್ ನೀಡಲು ಎಚ್.ಡಿ.ಕುಮಾರಸ್ವಾಮಿ ಒಪ್ಪುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ಈಗಾಗಲೇ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ದತೆಯನ್ನ ನಡೆಸುತ್ತಿರುವ ದಳಪತಿಗಳು ಕಾದು ನೋಡುವ ತಂತ್ರಕ್ಕೆ ಮುಂದಾಗಿದ್ದು, ಅಸಮಾಧಾನರನ್ನ ಪಕ್ಷದತ್ತ ಸೆಳೆಯುವ ತಂತ್ರಕ್ಕೆ ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಹೀಗಾಗಿ ಇನ್ನೂ ಎನ್ ಆರ್ ಸಂತೋಷ್ ಜೆಡಿಎಸ್ ಪಕ್ಷ ಸೇರುವುದು ಚರ್ಚೆಯ ಹಂತದಲ್ಲಿದೆ. ರಾಜಕೀಯದಲ್ಲಿ ಏನೂ ಬೇಕಾದರೂ ನಡೆಯಬಹುದು. ಹಾಗಾಗಿ ಸಂತೋಷ್ ಜೆಡಿಎಸ್ನಿಂದ ಸ್ಪರ್ಧೆಗೆ ಇಳಿದರೂ ಅಚ್ಚರಿ ಇಲ್ಲ ಎನ್ನುವಂತಾಗಿದೆ.
ಕಳೆದ ಒಂದು ವರ್ಷಗಳಿಂದ ಕ್ಷೇತ್ರದಲ್ಲಿ ಶಿವಲಿಂಗೇಗೌಡರಿಗೆ ಸ್ಪರ್ಧೆ ನೀಡುತ್ತಲೇ ಬಂದಿರುವ ಸಂತೋಷ್, ಇದೀಗ ಬಿಜೆಪಿಯಿಂದ ಟಿಕೆಟ್ ತಪ್ಪಿದ್ದರಿಂದ ತಮ್ಮೆಲ್ಲ ಶ್ರಮ ವ್ಯರ್ಥವಾಗುತ್ತದೆ. ಅದಕ್ಕಾಗಿ ಬೇರೆ ಪಕ್ಷ ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅರಸೀಕೆರೆಯಲ್ಲಿ ಈ ಕುರಿತು ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.












Click it and Unblock the Notifications