ಜಿಲ್ಲಾ ಪದಾಧಿಕಾರಿಗಳು ತಿಂಗಳಿಗೆ 15 ದಿನ ಪ್ರವಾಸ ಮಾಡಬೇಕು: ಅರುಣ್ ಸಿಂಗ್ ಟಾಸ್ಕ್
ಬೆಂಗಳೂರು ಆಗಸ್ಟ 18: ಕರ್ನಾಟಕದ ಪ್ರತಿ ಬೂತ್ ಅನ್ನು ಕನಿಷ್ಠ 50ಕ್ಕೂ ಹೆಚ್ಚು ಮತ ಪಡೆಯುವ ಬೂತ್ಗಳಾಗಿ ಪರಿವರ್ತಿಸಬೇಕು. ಅದಕ್ಕಾಗಿ ರಾಜ್ಯದ ಎಲ್ಲ ಜಿಲ್ಲಾ ಪದಾಧಿಕಾರಿಗಳು ತಿಂಗಳಿಗೆ 15 ದಿನ ಪ್ರವಾಸ ಮಾಡಬೇಕು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಚಿಸಿದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟನಾ ಸಮಾರಂಭದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಬಿಜೆಪಿಗೆ ಪಕ್ಷ ಸಂಘಟನೆ ಮುಖ್ಯ ಹೊರತು ಪಕ್ಷದ ವಿಚಾರದಲ್ಲಿ ಚರ್ಚೆ ಮಾಡುವುದನ್ನು, ಅಶಿಸ್ತು ಪ್ರದರ್ಶಿಸುವುದನ್ನು ಬಿಜೆಪಿ ಸಹಿಸುವುದಿಲ್ಲ. ಇದನ್ನು ಅರಿತುಕೊಂಡು ಎಲ್ಲರೂ ಅಭಿವೃದ್ಧಿ ಮತ್ತು ಪಕ್ಷದ ಸಂಘಟನಾ ಕಾರ್ಯಗಳಿಗೆ ಆದ್ಯತೆ ನೀಡಬೇಕೆಂದು ತಿಳಿಸಿರುವುದಾಗಿ ಅವರು ಹೇಳಿದರು.
ಕೇಂದ್ರದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನೇಮಕದಿಂದ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಆನೆ ಬಲದಂತಾಗಿದೆ. ಈ ಭಾಗದಲ್ಲಿ ಪಕ್ಷ ಮತ್ತಷ್ಟು ಗಟ್ಟಿಗೊಳ್ಳಲಿದೆ. ಅಲ್ಲದೇ ಕರ್ನಾಟಕದ ರಾಜಕೀಯದಲ್ಲಿ ಮಹತ್ತರವಾದ ಕಾರ್ಯವನ್ನು ನಿರ್ವಹಿಸುವ ಅವಕಾಶ ಒದಗಿಬಂದಂತಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದರು.
ಈ ಸಭೆ ಆರಂಭಕ್ಕೂ ಮುನ್ನ ನಾಯಕರು, ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭಕೋರಿದರು.

ಕೇಂದ್ರ ನೀರ್ಣಯ ಸ್ವಾಗತಾರ್ಹ
ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು, ಕೇಂದ್ರದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನೇಮಕವನ್ನು ಸಭೆ ಸ್ವಾಗತಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.

ರಾಜಕೀಯಕ್ಕಾಗಿ ಸಾವರ್ಕರ್ ಹೆಸರು ಬಳಕೆ ಖಂಡನೀಯ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ, ವಿಡಿ ಸಾವರ್ಕರ್ ಅವರನ್ನು ಮತಬ್ಯಾಂಕ್ ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷವು ಅವಹೇಳನ ಮಾಡುವುದು ಖಂಡನೀಯ. ತುಷ್ಟೀಕರಣ ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ವಿಡಿ ಸಾವರ್ಕರ್ ಅವರ ಬಗ್ಗೆ ಅನುಸರಿಸುತ್ತಿರುವ ನಿಲುವನ್ನು ಎಲ್ಲರು ವಿರೋಧಿಸಿದ್ದೇವೆ ಎಂದು ತಿಳಿಸಿದರು.

ಮುಖಂಡರ ಪ್ರವಾಸ- ಜನೋತ್ಸವ ವಿಷಯ ನಿರ್ಧಾರ
ಬಿಜೆಪಿ ಪ್ರಮುಖ ನಾಯಕರ ಮುಂದಿನ ಒಂದು ತಿಂಗಳ ಕರ್ನಾಟಕ ಪ್ರವಾಸ ಕುರಿತು ನಿರ್ಧರಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್ ತಲಾ 50ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕೆಂದು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಅಕ್ಟೋಬರ್ ಮಧ್ಯ ಭಾಗದವರೆಗೆ ಕರ್ನಾಟಕದ 7ಕಡೆ ಬೃಹತ್ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲಿದ್ದು, ಈ ಪೈಕಿ ದೊಡ್ಡಬಳ್ಳಾಪುರದಲ್ಲಿ ಮೊದಲ ಸಮಾವೇಶ ಜರುಗಲಿದೆ ಎಂದು ಅರುಣ್ ಸಿಂಗ್ ಹೇಳಿದರು.

ಮೂರು ತಿಂಗಳಿಗೊಮ್ಮೆ ಸಭೆ
ಮುಂದಿನ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಸೆಪ್ಟೆಂಬರ್ 10 ಮತ್ತು 11ರಂದು ಬೆಂಗಳೂರಿನಲ್ಲಿ ನಡೆಸಲಾಗುವುದು. ಮೂರು ತಿಂಗಳಿಗೊಮ್ಮೆ ಈ ರೀತಿ ಸಭೆ ನಡೆಯಲಿದೆ. ಕರ್ನಾಟಕದಲ್ಲಿ 145ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿಯವರ ಪಂಚ ಸಂಕಲ್ಪಗಳು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಂಚ ಯೋಜನೆಗಳನ್ನು ಬಳಸಿಕೊಳ್ಳಬೇಕು. ಸರ್ಕಾರ ಎಲ್ಲ ಯೋಜನೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ತಿಳಿಸಿದರು.












Click it and Unblock the Notifications