Breaking; ಫೆ. 26ಕ್ಕೆ ದಾವಣಗೆರೆಗೆ ಕೇಜ್ರಿವಾಲ್ ಭೇಟಿ
ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 26ರಂದು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ.
ಬೆಂಗಳೂರು, ಫೆಬ್ರವರಿ 05; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕಲವೇ ದಿನಗಳು ಬಾಕಿ ಇದೆ. ವಿವಿಧ ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷ ಸಹ ಈ ಬಾರಿ ರಾಜ್ಯದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ.
ಎಎಪಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 26ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ಸಿದ್ದರಾಮೋತ್ಸವ ಮತ್ತು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬಳಿಕ ಮತ್ತೊಂದು ರಾಜಕೀಯ ಸಮಾವೇಶಕ್ಕೆ ಬೆಣ್ಣೆ ನಗರಿ ಸಾಕ್ಷಿಯಾಗಲಿದೆ.
ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ. ವಿಶ್ವನಾಥ ಈ ಕುರಿತು ಮಾಹಿತಿ ನೀಡಿದರು. "ದಾವಣಗೆರೆಯಲ್ಲಿ ಪಕ್ಷದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದಾವಣಗೆರೆಗೆ ಆಗಮಿಸಲಿದ್ದಾರೆ" ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ದಾವಣಗೆರೆಯಿಂದ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಆರಂಭವಾಗಲಿದೆ. ಬೃಹತ್ ಸಮಾವೇಶ ನಡೆಯಲಿದ್ದು, ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಆದರೆ ಸಮಾವೇಶ ಎಲ್ಲಿ ನಡೆಸಬೇಕು? ಎಂದು ಇನ್ನು ಸ್ಥಳ ನಿಗದಿಯಾಗಿಲ್ಲ.
ದೆಹಲಿ ಮತ್ತು ಪಂಜಾಬ್ನಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಜಕೀಯ ಪಕ್ಷಗಳಿಗೆ ಎದುರಾಳಿಯಾಗಿದೆ. ಎರಡೂ ಪಕ್ಷಗಳ ಆಡಳಿತ ನೋಡಿ ಜನರು ಬೇಸತ್ತು ಹೋಗಿದ್ದಾರೆ. ಜನರು ಪರ್ಯಾಯ ರಾಜಕೀಯ ಬಯಸುತ್ತಿದ್ದು, ಎಎಪಿ ಅವರ ಆಯ್ಕೆ ಎಂದು ಪಕ್ಷದ ನಾಯಕರು ನಿರೀಕ್ಷೆ ಹೊಂದಿದ್ದಾರೆ.
ಕರ್ನಾಟಕದ ನಿಜವಾದ ಕೇಂದ್ರ ಸ್ಥಳವಾದ ದಾವಣಗೆರೆಯಲ್ಲಿ ಎಎಪಿ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ. ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳುವ ಸಮಾವೇಶದ ಸ್ಥಳವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುತ್ತದೆ.
ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬವನ್ನು ಸಿದ್ದರಾಮೋತ್ಸವ ಎಂಬ ಹೆಸರಿನಲ್ಲಿ ಆಯೋಜನೆ ಮಾಡಲಾಗಿತ್ತು. ಲಕ್ಷಾಂತರ ಜನರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.
ಬಳಿಕ ಬಿಜೆಪಿಯ ವಿಜಯ ಸಂಕಲ್ಪ ಸಮಾವೇಶವೂ ದಾವಣಗೆರೆಯಲ್ಲಿ ನಡೆದಿತ್ತು. ಈಗ ಆಮ್ ಆದ್ಮಿ ಪಕ್ಷ ಸಹ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡುತ್ತಿದೆ.












Click it and Unblock the Notifications