ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಎ.ಎಸ್.ಓಕಾ ಪ್ರಮಾಣ ವಚನ
ಬೆಂಗಳೂರು, ಮೇ 10 : ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎ.ಎಸ್.ಓಕಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸಿದರು.
ಶುಕ್ರವಾರ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
ಎ.ಎಸ್.ಓಕಾ (ಅಭಯ್ ಶ್ರೀನಿವಾಸ್ ಓಕಾ) ಅವರನ್ನು ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ಅವರ ನೇತೃತ್ವದ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ದಿನೇಶ್ ಮಹೇಶ್ವರಿ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದ ಬಳಿಕ ಮುಖ್ಯ ನ್ಯಾಯಮೂರ್ತಿಗಳ ಹುದ್ದೆ ತೆರವಾಗಿತ್ತು. ಕೊಲಿಜಿಯಂ ಶಿಫಾರಸಿನ ಅನ್ವಯ ನೂತನ ನ್ಯಾಯಮೂರ್ತಿಗಳ ನೇಮಕವಾಗಿದ್ದು, ಇಂದು ಪ್ರಮಾಣ ವಚನ ಸಮಾರಂಭ ನಡೆಯಿತು.

ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ
ಎ.ಎಸ್.ಓಕಾ (ಅಭಯ್ ಶ್ರೀನಿವಾಸ್ ಓಕಾ) ಅವರು ಬಾಂಬೆ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್ 10ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್ ಅವರ ನೇತೃತ್ವದ ಕೊಲಿಜಿಯಂ ಎ.ಎಸ್.ಓಕಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು.

ಪ್ರಮಾಣ ವಚನ
ಅಭಯ್ ಶ್ರೀನಿವಾಸ್ ಓಕಾ ಅವರು ಮೇ 10ರ ಶುಕ್ರವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಮಾಣ ವಚನವನ್ನು ಬೋಧಿಸಿದರು.

ವಕೀಲರಾಗಿ ಸೇವೆ
ಅಭಯ್ ಶ್ರೀನಿವಾಸ್ ಓಕಾ ಅವರು ಮೇ 25,1960ರಲ್ಲಿ ಜನಿಸಿದರು. ಬಾಂಬೆ ವಿಶ್ವವಿದ್ಯಾಲಯದಿಂದ ಬಿಎಸ್ಸಿ, ಎಲ್ಎಲ್ಎಮ್ ಪದವಿ ಪಡೆದಿದ್ದಾರೆ. 1983 ಜೂನ್ 28ರಂದು ವಕೀಲರಾಗಿ ನೋಂದಣಿ ಮಾಡಿಕೊಂಡರು.
ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎ.ಎಸ್.ಓಕಾ ಅವರು 2003ರ ಆಗಸ್ಟ್ 23ರಂದು ಬಾಂಬೆ ಹೈಕೋರ್ಟ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾದರು. 2005ರ ನವೆಂಬರ್ 12ರಿಂದ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬಳಿಕ ಎ.ಎಸ್.ಓಕಾ ಅವರನ್ನು ಅಭಿನಂದಿಸಿದರು.












Click it and Unblock the Notifications