ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಓವೈಸಿ: ಕಷ್ಟ, ಸಂಕಷ್ಟ ಯಾರಿಗೆ?
ಬೆಂಗಳೂರು, ಡಿಸೆಂಬರ್ 16: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಒಂದೇ ಬಿಜೆಪಿಗೆ ಮಣೆ ಹಾಕಿದೆ. ಇಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ಇದ್ದರೂ, ಜಾತ್ಯತೀತ ಜನತಾಪಕ್ಷವನ್ನು ಅಲ್ಲಗಳೆಯುಂತಿಲ್ಲ. ಉತ್ತರ, ಮಧ್ಯ ಹಾಗೂ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷದ ಬೇರುಗಳು ಗಟ್ಟಿಯಾಗಿವೆ. ಹೀಗಾಗಿ, ಈ ಪ್ರಾಂತ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸ್ಪರ್ಧೆ ಉಂಟಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಜೆಡಿಎಸ್ ಜೊತೆ ಮೈತ್ರಿ ಇಲ್ಲವೆಂದ ಓವೈಸಿ
ಒಕ್ಕಲಿಗ ಪ್ರಾಬಲ್ಯವಿರುವ ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿದೆ. ಉತ್ತರ ಕರ್ನಾಟಕದಲ್ಲಿ ಪ್ರಾಬಲ್ಯ ಹೊಂದಿರದ ಜೆಡಿಎಸ್ ಮುಸ್ಲಿಮರ ಮತ ಬುಟ್ಟಿಗೆ ಕೈಹಾಕಲಿದೆ ಎಂಬ ಮಾತುಗಳು ಕೇಳಿಬಂದಿವೆ. ಇದಕ್ಕೆ ಪೂರಕವೆಂಬಂತೆ ಎರಡು ವರ್ಷಗಳ ಹಿಂದೆ ನಡೆದಿದ್ದ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ನಿಲ್ಲಿಸಿತ್ತು. ಕಳೆದ ಬಾರಿಯ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ಅವರು ಜೆಡಿಎಸ್ ಪರ ಪ್ರಚಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಪುಕಾರುಗಳು ಹಬ್ಬಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಓವೈಸಿ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ನುಡಿದಿದ್ದಾರೆ.

ಗುಜರಾತ್, ಯುಪಿ, ಬಿಹಾರದಲ್ಲಿ ಕಾಂಗ್ರೆಸ್ ಮುಳ್ಳಾದ ಓವೈಸಿ
ಗುಜರಾತ್, ಉತ್ತರ ಪ್ರದೇಶ ಹಾಗೂ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು ಸ್ಪರ್ಧಿಸಿತ್ತು. ಬಿಹಾರದಲ್ಲಿ ಐದು ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಮುಸ್ಲಿಮರ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಾವಿರಾರು ಮತಗಳನ್ನು ಪಡೆದುಕೊಂಡಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಾನಿ ಉಂಟು ಮಾಡಿತ್ತು. ಉತ್ತರ ಪ್ರದೇಶದಲ್ಲಿಯೂ ಎಐಎಂಐಎಂಗೆ ಗಣನೀಯ ಪ್ರಮಾಣದ ಮುಸ್ಲಿಂ ಮತಗಳು ಬಂದಿದ್ದರಿಂದ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಿತ್ತು.
ಇನ್ನು ಇದೇ ತಿಂಗಳು ಕೊನೆಗೊಂಡ ಗುಜರಾತ್ ಚುನಾವಣೆಯಲ್ಲಿಯೂ ಓವೈಸಿ ಪಕ್ಷವು ಕಾಂಗ್ರೆಸ್ಗೆ ಮಗ್ಗುಲ ಮುಳ್ಳಾಗಿ ಪರಿಣಮಿಸಿತ್ತು. ಗುಜರಾತ್ನ 16 ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ 13 ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ದೊಡ್ಡ ಪ್ರಮಾಣದ ಮುಸ್ಲಿಂ ಮತಗಳು ಎಐಎಂಐಎಂಗೆ ಹೋಗಿದ್ದವು. ಈ ಪ್ರದೇಶಗಳಲ್ಲಿ ಕಾಂಗ್ರೆಸ್ಗೆ ಅಭ್ಯರ್ಥಿಗಳಿಗೆ ಈ ಹಿಂದಿನಿಂದಲೂ ಲಾಭವಾಗುತ್ತಿತ್ತು. ಆದರೆ, ಓವೈಸಿ ಪಕ್ಷವು ಮುಸ್ಲಿಮರ ಮತ ಬುಟ್ಟಿಗೆ ಕೈಹಾಕಿದ್ದರಿಂದ ಕಾಂಗ್ರೆಸ್ಗೆ ಭಾರೀ ಪ್ರಮಾಣದ ಹಾನಿ ಉಂಟಾಯಿತು ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದಲ್ಲಿ 100 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಓವೈಸಿ ಸಿದ್ಧತೆ
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನೂರು ಅಭ್ಯರ್ಥಿಗಳನ್ನು ಕಣ್ಣಕ್ಕಿಳಿಸುವುದಾಗಿ ಓವೈಸಿ ಹೇಳಿದ್ದಾರೆ. ಕರ್ನಾಟಕದ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ ತಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದಾಗಿ ಅವರು ಘೋಷಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ಎಐಎಂಐಎಂ ಪಕ್ಷದ ರಾಜ್ಯಾಧ್ಯಕ್ಷ ಉಸ್ಮಾನ್ ಘನಿ, 'ಎಐಎಂಐಎಂ ಮುಂದಿನ ವರ್ಷ ಕರ್ನಾಟಕದ ಒಟ್ಟು 224 ವಿಧಾನಸಭಾ ಸ್ಥಾನಗಳ ಪೈಕಿ 100ರಲ್ಲಿ ಸ್ಪರ್ಧಿಸಲಿದೆ. ಈ ಚುನಾವಣೆಗೆ ಪಕ್ಷವು ವಿಶೇಷ ಯೋಜನೆ ರೂಪಿಸಿದೆ. ನಮ್ಮ ಪಕ್ಷವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ 52 ವಿಧಾನಸಭಾ ಸ್ಥಾನಗಳ ಮೇಲೆ ಕೇಂದ್ರೀಕರಿಸುತ್ತದೆ. ಎಸ್ಸಿ, ಎಸ್ಟಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳಿದ್ದಾರೆ' ಎಂದು ಹೇಳಿದ್ದಾರೆ.
'ಉತ್ತರ ಕರ್ನಾಟಕದ ಮುಸ್ಲಿಂ ಬಾಹುಳ್ಯದ ಪ್ರದೇಶಗಳಾದ ವಿಜಯಪುರ, ಕಲಬುರಗಿ, ರಾಯಚೂರು, ಬಸವಕಲ್ಯಾಣ, ಹುಬ್ಬಳ್ಳಿ, ಬೆಳಗಾವಿ, ಕುಷ್ಟಗಿ ಕ್ಷೇತ್ರಗಳಲ್ಲಿ ಎಐಎಂಐಎಂ ಮುಂದಿನ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ನಿರೀಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು' ಎಂದು ಉಸ್ಮಾನ್ ಘನಿ ತಿಳಿಸಿದ್ದಾರೆ.

ಕಾಂಗ್ರೆಸ್ಗೆ ಹೊಡೆತ ನೀಡಲಿರುವ ಓವೈಸಿ
ಉಳಿದ ರಾಜ್ಯಗಳಂತೆ ಕರ್ನಾಟಕದಲ್ಲಿಯೂ ಕಾಂಗ್ರೆಸ್ಗೆ ಓವೈಸಿ ದೊಡ್ಡ ಕಂಟಕವಾಗಿ ಪರಿಣಮಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿವೆ. ಒಂದು ವೇಳೆ, ಉತ್ತರ ಕರ್ನಾಟಕ ಭಾಗಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ಗೆ ನಷ್ಟವಾಗಲಿದೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ನ ಪ್ರಾಬಲ್ಯ ಅಷ್ಟಾಗಿ ಇಲ್ಲದಿರುವುದರಿಂದ ಕುಮಾರಸ್ವಾಮಿ ನೇತೃತ್ವದ ಪಕ್ಷಕ್ಕೆ ಅಷ್ಟೇನೂ ತೊಂದರೆ ಆಗುವುದಿಲ್ಲವೆಂದು ವಿಶ್ಲೇಷಿಸಲಾಗಿದೆ. ಒಂದು ವೇಳೆ, ಕಾಂಗ್ರೆಸ್ ಪರ ವೋಟು ಚಲಾಯಿಸುತ್ತಿದ್ದ ಮುಸ್ಲಿಮರು ಓವೈಸಿ ಪರ ವೋಟು ನೀಡಿದರೆ, ಅದು ಬಿಜೆಪಿಗೆ ದೊಡ್ಡ ಲಾಭ ತಂದುಕೊಡಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications