ರಾಜ್ಯದ ಜನತೆಗೆ ಮತ್ತೊಂದು ಗುಡ್ನ್ಯೂಸ್: ನಿಮ್ಮ ಮನೆ ಬಾಗಿಲಿಗೆ ಬರುತ್ತೆ ಈ ಯೋಜನೆ!
ಬೆಂಗಳೂರು, ಫೆಬ್ರವರಿ 21: ವಿಧಾನಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನ ಹಂತ ಹಂತವಾಗಿ ಜಾರಿಗೊಳಿಸಿದೆ. ಇದೀಗ ಆಶಾಕಿರಣ ಯೋಜನೆ ಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರದ ಮಹತ್ವಾಕಾಂಕ್ಷಿ"ಆಶಾಕಿರಣ" ಯೋಜನೆ ರಾಜ್ಯವ್ಯಾಪಿ ಜಾರಿಯಾಗಿದೆ. ಜನರಲ್ಲಿ ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಆಶಾಕಿರಣ ಯೋಜನೆ ಈಗಾಗಲೇ ಕಾರ್ಯೋನ್ಮುಖವಾಗಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 21, 2024
"ಆಶಾಕಿರಣ - ಜನರ… pic.twitter.com/rg8YOXfzpV
"ಆಶಾಕಿರಣ" ಯೋಜನೆ ದೃಷ್ಟಿ ದೋಷ ಹೊಂದಿದ ಅನೇಕ ಜನಸಾಮಾನ್ಯರ ಪಾಲಿಗೆ ಬೆಳಕಾಗಲಿದ್ದು, ಯೋಜನೆಯನ್ನ ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿದರು. ಆಶಾಕಿರಣ ಯೋಜನೆಯಡಿ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣಾ ಕಾರ್ಯವನ್ನ ಆಶಾ ಕಾರ್ಯಕರ್ತೆಯರು ನಡೆಸಿದ್ದರು. ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 56, 59, 036 ಜನರನ್ನು ಆಶಾ ಕಾರ್ಯಕರ್ತೆಯರ ಮೂಲಕ ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿತ್ತು.

ಇವರಲ್ಲಿ 8,28, 884 ಜನರಿಗೆ ನೇತ್ರ ಸಂಬಂಧಿ ತೊಂದರೆಗಳು ಕಂಡುಬಂದಿದ್ದು, ದ್ವಿತೀಯ ಹಂತದ ಚಿಕಿತ್ಸೆಗೆ ಒಳಪಡಿಸಿದಾಗ 2,45,588 ಮಂದಿಗೆ ದೃಷ್ಟಿ ದೋಷ ಇರುವುದು ಪತ್ತೆಯಾಗಿದೆ. 2.45,588 ಜನರಿಗೂ ಉಚಿತ ಕನ್ನಡಕ ಒದಗಿಸುವ ಕಾರ್ಯ ನಾಳೆಯಿಂದ ಪ್ರಾರಂಭವಾಗಲಿದೆ. ಅಲ್ಲದೇ 39,336 ಜನರಿಗೆ ಕಣ್ಣಿನ ಪೊರೆ ತೊಂದರೆ ಕಂಡು ಬಂದಿದ್ದು, ಇವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನೂ ಕೂಡಾ ಉಚಿತವಾಗಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
"ಆಶಾಕಿರಣ" ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಶಾಕಿರಣ ಅಭಿಯಾನವನ್ನ ಈಗಾಗಲೇ ಆರಂಭಿಸಲಾಗಿದ್ದು, ಈ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 5,277,235 ಜನರನ್ನು ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ 943,398 ಜನರಲ್ಲಿ ನೇತ್ರ ಸಂಬಂಧಿ ತೊಂದರೆಗಳಿರುವುದು ಪತ್ತೆಯಾಗಿದ್ದು, ಕನ್ನಡಕ ವಿತರಣೆ, ಶಸ್ತ್ರ ಚಿಕಿತ್ಸೆ ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಕ್ರಮ ವಹಿಸುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮುಂದಿನ ಹಂತಗಳಲ್ಲಿ ರಾಮನಗರ, ಯಾದಗಿರಿ, ಕೊಡಗು, ಗದಗ ಹಾಗೂ ಚಿಕ್ಕಮಂಗಳೂರು, ಬೀದರ್, ಕೋಲಾರ, ಬಾಗಲಕೋಟೆ ಜಿಲ್ಲೆಗಳನ್ನು ಆಶಾಕಿರಣ ಯೋಜನೆಗಾಗಿ ಆಯ್ಕೆ ಮಾಡಲಾಗಿದೆ. ಹಂತ, ಹಂತವಾಗಿ ರಾಜ್ಯದ ಉಳಿದ ಜಿಲ್ಲೆಗಳಿಗೆ ಯೋಜನೆ ವಿಸ್ತರಿಸಲಾಗುವುದು. ರಾಜ್ಯದ ಎಲ್ಲ ಜನರಿಗೂ "ಆಶಾಕಿರಣ" ಯೋಜನೆಯಡಿ ಉಚಿತ ಕಣ್ಣಿನ ಆರೈಕೆ ಆರೋಗ್ಯ ಸೇವೆಯನ್ನ ರಾಜ್ಯ ಸರ್ಕಾರದ ಒದಗಿಸುವ ಗುರಿ ಹೊಂದಿದೆ.
ಮಕ್ಕಳಿನಿಂದ ಹಿಡಿದು ವಯೋವೃದ್ದರ ವರೆಗು ಎಲ್ಲರ ಕಣ್ಣಿನ ತಪಾಸಣೆಯನ್ನ ಆರೋಗ್ಯ ಇಲಾಖೆ ಜನರ ಮನೆಬಾಗಿಲಿಗೆ ಹೋಗಿ ಆರೋಗ್ಯ ಸೇವೆ ಒದಗಿಸುತ್ತಿದೆ. "ಆಶಾಕಿರಣ" ಯೋಜನೆ ರಾಜ್ಯದ ಜನಸಾಮಾನ್ಯರ ಬಾಳಲ್ಲಿ ಬೆಳಕಾಗಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಮ್ಮ ಆಶಯ ವ್ಯಕ್ತಪಡಿಸಿದರು.
ಈ ನಡುವೆ ಈ ಬಗ್ಗೆ ಮಾಹಿತಿ ನೀಡಿರುವ ದಿನೇಶ್ ಗುಂಡುರಾವ್ ಅವರು ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರದ ಮಹತ್ವಾಕಾಂಕ್ಷಿ"ಆಶಾಕಿರಣ" ಯೋಜನೆ ರಾಜ್ಯವ್ಯಾಪಿ ಜಾರಿಯಾಗಿದೆ. ಜನರಲ್ಲಿ ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಆಶಾಕಿರಣ ಯೋಜನೆ ಈಗಾಗಲೇ ಕಾರ್ಯೋನ್ಮುಖವಾಗಿದೆ. "ಆಶಾಕಿರಣ - ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ" ರಾಜ್ಯದ ಪ್ರತಿಯೊಬ್ಬರ ಕಣ್ಣಿನ ಕಾಳಜಿ ನಮ್ಮ ಆದ್ಯತೆಯಾಗಿದೆ ಅಂತ ತಿಳಿಸಿದ್ದಾರೆ.












Click it and Unblock the Notifications