ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾದ ಕಡಾಡಿ, ಗಸ್ತಿ ನಾಮಪತ್ರ ಸಲ್ಲಿಕೆ
ಬೆಂಗಳೂರು, ಜೂ. 09: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಿದ್ದ ಅಭ್ಯರ್ಥಿಗಳ ಪಟ್ಟಿಯನ್ನು ಬಿಟ್ಟು ಬೇರೆಯದ್ದೆ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿತ್ತು. ಬಿಜೆಪಿ ಬಂಡಾಯ ಶಮನಗೊಳಿಸುವ ನಿಟ್ಟಿನಲ್ಲಿ ಪ್ರಭಾವಿಗಳನ್ನು ಬಿಟ್ಟು ಪ್ರಭಾರಿಗಳಿಗೆ ಹೈಕಮಾಂಡ್ ಮಣೆ ಹಾಕಿತ್ತು.
ರಾಜ್ಯಸಭೆಗೆ ಅಚ್ಚರಿಯ ಬಿಜೆಪಿ ಅಭ್ಯರ್ಥಿಗಳು: ಈ ರಹಸ್ಯ ಮೊದಲೇ ತಿಳಿದಿದ್ದು ಈ ಇಬ್ಬರಿಗೆ ಮಾತ್ರ
ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಅಶೋಕ್ ಗಸ್ತಿ ಹಾಗೂ ವೀರಣ್ಣ ಕಡಾಡಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ ಸವದಿ ಸೆರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಜೊತೆಗೆ ವಿಧಾನಸೌಧದ ಬಿಜೆಪಿ ಕಚೇರಿಗೆ ಆಗಮಿಸಿದ್ದ ರಾಜ್ಯಸಭಾ ಟಿಕೆಟ್ ಆಕಾಂಕ್ಷಿಗಳಾಗಿದ್ದ ಉಮೇಶ್ ಕತ್ತಿ ಹಾಗೂ ಪ್ರಭಾಕರ್ ಕೋರೆ ಕೂಡ ಬಿಜೆಪಿ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇಬ್ಬರು ಸಾಮಾನ್ಯ ಕಾರ್ಯಕರ್ತರನ್ನ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ. ಪಕ್ಷದ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷಕ್ಕೆ ಅವರು ಸಲ್ಲಿಸಿದ ಸೇವೆ ಗುರುತಿಸಿ ಗೌರವ ನೀಡಲಾಗಿದೆ. ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ ನಮ್ಮ ಪಕ್ಷದಲ್ಲಿದೆ. ಕೋರ್ ಕಮಿಟಿ ಸಭೆಯಲ್ಲಿಯೂ ಬಿಜೆಪಿ ಕಾರ್ಯಕರ್ತರ ಹೆಸರನ್ನೇ ಕಳುಹಿಸಿದ್ದೆವು. ಬಿಜೆಪಿ ಹೈಕಮಾಂಡ್ ಕೂಡ ಬಿಜೆಪಿ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಿದೆ ಎಂದಿದ್ದಾರೆ.