'ಸಿದ್ದರಾಮಯ್ಯಗೆ ಯಾವಾಗ ಏನು ಮಾತನಾಡಬೇಕು ಅನ್ನೋ ಪರಿಜ್ಞಾನ ಇಲ್ಲ'
ಪೆಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರವಾಗಿ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು? ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ತಿರುಗೇಟು ನೀಡಿದ್ದಾರೆ.
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ, ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆಗೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು. ಇದಕ್ಕಾಗಿಯೇ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನ ಬೆಂಬಲಿಸುತ್ತೇವೆ ಎಂದು ಹೇಳಿವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ದೇಶದಲ್ಲಿ ವೃತ್ತಿಪರ ಸೇನಾಪಡೆಗಳಿವೆ. ಯಾವ ಸಂದರ್ಭದಲ್ಲಿ ಎಂತಹ ಕ್ರಮ ಕೈಗೊಳ್ಳಬೇಕು ಎನ್ನುವ ಪರಿಣಿತಿ, ಅನುಭವ ನಮ್ಮ ಸೇನಾಪಡೆಗಳಿವೆ. ಈ ವಿಷಯದಲ್ಲಿ ನಿಮ್ಮ ಸಲಹೆಯ ಅಗತ್ಯವೂ ಇಲ್ಲ, ಸಲಹೆ ನೀಡುವ ಯಾವುದೇ ಅರ್ಹತೆಯೂ ತಮಗಿಲ್ಲ ಎಂದು ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶಿ, ರೋಹಿಂಗ್ಯ, ಪಾಕಿಸ್ತಾನಿ ಅಕ್ರಮ ವಲಸಿಗರು ರಾಜಾರೋಷವಾಗಿ ತಿರುಗಾಡಿಕೊಂಡಿದ್ದಾರೆ. ಮೊದಲು ಅವರನ್ನ ಗುರುತಿಸಿ, ಗಡಿಪಾರು ಮಾಡಿ ಕನ್ನಡಿಗರ ಸುರಕ್ಷತೆ ಕಾಪಾಡುವ ಕಡೆ ಗಮನ ಕೊಡಿ. ಸುಮ್ಮನೆ ತಮ್ಮದಲ್ಲದ ವಿಷಯದಲ್ಲಿ ಅನಾವಶ್ಯಕವಾಗಿ ಮೂಗು ತೂರಿಸಬೇಡಿ ಎಂದು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?
ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಸಜ್ಜಾಗಿರುವ ಭಾರತದ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ, ಆದರೆ, ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪಹಲ್ಗಾಮ್ ಒಂದು ಪ್ರವಾಸಿ ಸ್ಥಳ. ಅಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕಿತ್ತು. ಇದು ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಎಂದು ದೂರಿದ್ದಾರೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯವಿದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರ ಕೂಡ ಅದನ್ನ ಒಪ್ಪಿಕೊಂಡಿದೆ. ಅಲ್ಲಿಗೆ ನಾನು ಹೇಳಿದ್ದು ನಿಜ ಎಂದಿದ್ದಾರೆ.

ನಾವು ಯುದ್ಧದ ಪರವಾಗಿಲ್ಲ, ಶಾಂತಿ ವ್ಯವಸ್ಥೆ ಇರಬೇಕು. ಜನರಿಗೆ ಸೂಕ್ತ ಭದ್ರತೆ ಇರಬೇಕು. ಹೀಗಾಗಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜಮ್ಮು-ಕಾಶ್ಮೀರ ಪ್ರವಾಸಿ ಸ್ಥಳ, ಅಲ್ಲಿ ಭದ್ರತೆ ಬಿಗಿಗೊಳಿಸಬೇಕಿತ್ತು. ಈ ಹಿಂದೆ ಪುಲ್ವಾಮಾ ದಾಳಿಯ ಬಳಿಕ ಇನ್ನೂ ಎಚ್ಚರಿಕೆಯಿಂದ ಇರಬೇಕಿತ್ತು. ಇದರಲ್ಲಿ ಗುಪ್ತಚರ ಹಾಗೂ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಸುರಕ್ಷಿತ ವಾತಾವರಣವಿದೆ ಎಂಬ ಭಾವನೆಯಲ್ಲಿ ಜನ ಪ್ರವಾಸಕ್ಕೆ ಹೋಗುತ್ತಿದ್ದರು. ಆದರೆ ಕೇಂದ್ರ ಸರ್ಕಾರದಿಂದ ರಕ್ಷಣೆ ನೀಡಲು ಸಾಧ್ಯವಾಗಲಿಲ್ಲ. 26 ಮಂದಿಯ ಜೀವ ಹೋಗಿದ್ದು, ಈಗ ಇವರು ಏನೆಲ್ಲ ಕ್ರಮ ತೆಗೆದುಕೊಂಡರೂ ಅಷ್ಟು ಜೀವಗಳು ವಾಪಸ್ ಬರುತ್ತವೆಯೇ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದಿದ್ದಾರೆ.












Click it and Unblock the Notifications