ರಾಣಿಚೆನ್ನಮ್ಮ ವಿ.ವಿ.ಗೆ 126 ಎಕರೆ ಜಮೀನು ಮೀಸಲು: ಸಚಿವ ಅಶ್ವಥ್ ನಾರಾಯಣ್
ಬೆಳಗಾವಿ, ಡಿಸೆಂಬರ್ 30: ಬೆಳಗಾವಿಯ ರಾಣಿಚೆನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆಗೆ 126.27ಎಕರೆ ಸರ್ಕಾರಿ ಜಮೀನು ಮೀಸಲಿರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು.
ವಿಧಾನಸಭೆಯಲ್ಲಿ ಗುರುವಾರ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆಗೆ ಉತ್ತರಿಸಿದ ಅವರು, ವಿ.ವಿಗೆ ಹಿರೇಬಾಗೇವಾಡಿ- ಹಾಲಗಿಮರ್ಡಿಗ್ರಾಮದಲ್ಲಿ ಮುಂಜೂರಾದ ಜಾಗದಲ್ಲಿ ಕಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಮೊದಲನೇ ಹಂತದ ಕಟ್ಟಡ ಕಾಮಗಾರಿಗೆ ಸ್ಥಳೀಯ ರೈತರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿ.9ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರು ಹಾಗು ವಿವಿಯ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರೈತರಿಗೆ ಕಬ್ಬು ಹಾಗೂ ಇನ್ನಿತರೆ ಕೃಷಿ ಸಂಬಂಧಿತ ವಸ್ತುಗಳನ್ನು ಸಾಗಿಸಲು ಅನುಕೂಲವಾಗುವಂತೆ ರಸ್ತೆ ಬಿಟ್ಟುಕೊಡಲು ವಿಶ್ವವಿದ್ಯಾಲಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಕಂಪೌಂಡ್ ಗೋಡೆಯನ್ನು ತೆರವುಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.
ಹುಣಸೂರು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಶೀಘ್ರ ಪೂರ್ಣ: ಸಚಿವ ಡಾ.ಸುಧಾಕರ್
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಶೀಘ್ರ ಪೋರ್ಣಗೊಳ್ಳಲಿದ್ದು ಸಾರ್ವಜನಿಕರ ಬಳಕೆಗೆ ಸಿಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಡಾ. ಸುಧಾಕರ್ ಹೇಳಿದರು.

ವಿಧಾನ ಸಭೆಯಲ್ಲಿ ಗುರುವಾರ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ಪ್ರಶ್ನೆಗೆ ಉತ್ತರಿಸಿದ ಅವರು 25 ಕೋಟಿ ಕೋಟಿ ಅನುದಾನದಲ್ಲಿ ಆರಂಭವಾದ ಕಟ್ಟಡದ ಅಂದಾಜು35 ಕೋಟಿಗಳಿಗೆ ಏರಿಕೆಯಾಗಿದೆ. ಪ್ರಸ್ತುತ 100 ಹಾಸಿಗೆಗಳ ತಾಲೂಕು ಆಸ್ಪತ್ರೆ ಕಟ್ಟಡದ ನೆಲಮಹಡಿ, ಮೊದಲನೇ ಮಹಡಿ ಮತ್ತು ಎರಡನೇ ಮಹಡಿಯ ಛಾವಣಿಯ ಕೆಲಸಗಳು, ನೆಲಹಾಸು ಕೆಲಸಗಳು ಸ್ಯಾನಿಟರಿ ಮತ್ತು ನೀರು ಸರಬರಾಜು ಲೈನ್ ಪೂರ್ಣಗೊಂಡಿದ್ದು ಎರಡನೆಯ ಕೆಲ ಕಾಮಗಾರಿಗಳು ಪ್ರಗತಿಯಲ್ಲಿರುತ್ತಿವೆ ಹಾಗೂ 94 ಹುದ್ದೆಗಳು ಮುಂಜೂರಾಗಿರುತ್ತವೆ.ಆಸ್ಪತ್ರೆಯಒಟ್ಟಾರೆ ರೂ.3115 ಲಕ್ಷಗಳ ಅಂದಾಜು ಪಟ್ಟಿ ಮತ್ತು ಹೆಚ್ಚುವರಿ ಕಾಮಗಾರಿಗಳ ರೂ. 995 ಅಂದಾಜು ಪಟ್ಟಿ ಪರಿಶೀಲನೆಯಲ್ಲಿದ್ದು ಆಡಳಿತಾತ್ಮಕ ಅನುಮೋದನೆ ನೀಡಿದ ನಂತರ ಕಾಮಗಾರಿಗಳನ್ನು ಪೂರ್ಣಗೊಳಿಸಿ ಆಸ್ಪತ್ರೆಯನ್ನು ಕಾರ್ಯಾರಂಭ ಮಾಡಲಾಗುವುದೆಂದರು.
ಕುಶಾಲನಗರ ಸಿಎಚ್ಸಿಯನ್ನು 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ: ಸಚಿವ ಸುಧಾಕರ್
ಕೊಡಗು ಜಿಲ್ಲೆ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.
ವಿಧಾನಸಭೆಯಲ್ಲಿ ಗುರುವಾರ ಮಡಿಕೇರಿ ಶಾಸಕ ಅಪ್ಪಚ್ಚುರಂಜನ್ ಅವರು ಕೊಡಗು ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ತಾತ್ವಿಕವಾಗಿ ಅನುಮೋದನೆ ನೀಡಲಾಗಿರುವ ಹೊಸ ತಾಲೂಕು ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಈಗಾಗಲೇ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನ ಆಸ್ಪತ್ರೆಯು 300 ಹಾಸಿಗೆ ಸಾಮಥ್ರ್ಯ ಹೊಂದಿದ್ದು ಹೆಚ್ಚುವರಿಯಾಗಿ 450 ಹಾಸಿಗೆ ಸಾಮಥ್ರ್ಯದ ಮಲ್ಟಿ ಸ್ಪೆಷಾಲಿಟಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಲಭ್ಯವಿರುವ ಎಲ್ಲಾ ಚಿಕಿತ್ಸೆಗಳನ್ನು ಆಸ್ಪತ್ರೆಯಲ್ಲಿ ನೀಡುತ್ತಿದೆ ಎಂದು ಅವರು ತಿಳಿಸಿದರು.
ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ ಅಗತ್ಯ ಸಂದರ್ಭಗಳಲ್ಲಿ ಮಾತ್ರ ರೋಗಿಗಳ ಇಚ್ಚೆಯನುಸಾರ ಶಿಪಾರಸ್ಸು ಮಾಡಲಾಗುತ್ತಿದೆ. ಆದುದರಿಂದ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಾರಂಭಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications