ಕಾಲೇಜುಗಳಿಗೆ ರಜೆ ಘೋಷಣೆ? ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದೇನು?
ಬೆಂಗಳೂರು, ಮಾ. 15: ಪ್ರಾಥಮಿಕ ಶಿಕ್ಷಣ ಇಲಾಖೆ ಬಳಿಕ ಇದೀಗ ಉನ್ನತ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಮಾರ್ಚ್ 15) 15 ದಿನಗಳ ಕಾಲ ಸರ್ಕಾರಿ ಹಾಗು ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದಕ್ಕಿಂತ ಮೊದಲು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಕುರಿತು ಮಾಹಿತಿ ಬಂದಿತ್ತು. ನಂತರ ಅದು ಸುಳ್ಳು ಎಂದು ಸ್ವತಃ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದರು. ಇದೀಗ ಕೋವಿಡ್ 19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಿ, ರಜೆ ಘೋಷಣೆ ಮಾಡಲಾಗಿದೆ. ಆದರೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಹೇಳುತ್ತಿರುವುದೇ ಬೇರೆ.
ಡಾ. ಅಶ್ವಥ್ ನಾರಾಯಣ ಸೂಚನೆ
ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿ(ಸೋಮವಾರ)ನಿಂದ 15 ದಿನಗಳ ಕಾಲ ಸರಕಾರಿ-ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸುಳ್ಳುಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. ಈ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸ್ಪಷ್ಟನೆ ಕೊಟ್ಟ ಡಾ. ಅಶ್ವಥ್ ನಾರಾಯಣ
ಉನ್ನತ ಶಿಕ್ಷಣ ಇಲಾಖೆ ಯಾವುದೇ ಕಾರಣಕ್ಕೂ ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಕೈಗೊಂಡಿಲ್ಲ. ಕೊರೊನಾ ವೈರಸ್ನಿಂದ ಕಳೆದ ವರ್ಷದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ಇಂತಹ ಸಂದರ್ಭದಲ್ಲಿ ಅದನ್ನು ಸರಿದೂಗಿಸುವ ಅಗತ್ಯವಿದೆ. ಹೀಗಾಗಿ ರಜೆ ಘೋಷಣೆ ಮಾಡಿಲ್ಲ ಎಂದು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದಾರೆ.
ಸೈಬರ್ ಪೊಲೀಸರಿಗೆ ಸೂಚನೆ
ಯಾರೋ ಕಿಡಿಗೇಡಿಗಳು ನಕಲಿ ಸುತ್ತೋಲೆಯನ್ನು ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಅದು ವೈರಲ್ ಆಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತೀವ್ರ ಗೊಂದಲವಾಗಿದೆ. ಅದೂ ಸರಕಾರದ ಹೆಸರಿನಲ್ಲಿ ನಕಲಿ ಸುತ್ತೋಲೆ ಸೃಷ್ಟಿಸುವುದು ದೊಡ್ಡ ಅಪರಾಧ. ಹೀಗಾಗಿ ಸೈಬರ್ ಪೋಲೀಸರಿಗೆ ತಕ್ಷಣ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಸೂಚಿಲಾಗಿದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
Recommended Video
ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ ಬೇಡ
ಮಕ್ಕಳ ಭವಿಷ್ಯದ ಜತೆ ಯಾರೂ ಚೆಲ್ಲಾಟ ಆಡಬಾರದು. ಮೊದಲೇ ಕೋವಿಡ್ ಕಾರಣಕ್ಕೆ ಎಲ್ಲರಿಗೂ ಆತಂಕ ಇದೆ. ಶೈಕ್ಷಣಿಕ ವ್ಯವಸ್ಥೆ ಹಳಿ ತಪ್ಪದಂತೆ ಸರಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದ್ದರೂ ಕೆಲವರು ಇಂಥ ಕೃತ್ಯ ಎಸಗಿದ್ದಾರೆ. ಅಂಥವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಎಚ್ಚರಿಸಿದ್ದಾರೆ.