ಕರವೇ ವಿರುದ್ಧ ಸಿಡಿದೆದ್ದ ವೈದ್ಯರು; ಇಂದು ಮುಷ್ಕರಕ್ಕೆ ಕರೆ
ಬೆಂಗಳೂರು, ನವೆಂಬರ್ 05 : ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ವಿರುದ್ಧ ಆಕ್ರೋಶಗೊಂಡಿರುವ ವೈದ್ಯರು ಸೋಮವಾರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದು ಹೊರರೋಗಿಗಳಿಗೆ ಚಿಕಿತ್ಸೆ ಸಿಗುವುದು ಅನುಮಾನವಾಗಿದೆ.
ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ವೃತಿಯಲ್ಲಿ ರಕ್ಷಣೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ವೈದ್ಯರು ಮುಷ್ಕರ ನಡೆಸಲಿದ್ದಾರೆ.
ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ದಿನದಂದು ಕರವೇ ಕಾರ್ಯಕರ್ತರು ಮಿಂಟೋ ಆಸ್ಪತ್ರೆಗೆ ನುಗ್ಗಿ ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದು ಆರೋಪ. ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಬಂಧಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಶುಕ್ರವಾರದಿಂದ ಮಿಂಟೋ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಬಡ ರೋಗಿಗಳಿಗೆ ತೊಂದರೆ ಉಂಟಾಗಿದೆ. ರಾಜ್ಯ ಶಿಕ್ಷಣ ಇಲಾಖೆಯು ಬೆಂಗಳೂರಿನ ವೈದ್ಯಕೀಯ ಡೀನ್ ಡಾ. ಸತೀಶ್ ಮತ್ತು ಮಿಂಟೋ ನಿರ್ದೇಶಕಿ ಸುಜಾತಾ ರಾಥೋಡ್ ಅವರ ಜೊತೆ ಮಾತುಕತೆ ನಡೆಸಿ ಕಿರಿಯ ವೈದ್ಯರ ಮನವೊಲಿಕೆಗೆ ನಡೆಸಿದ ಪ್ರಯತ್ನ ವಿಫಲವಾಗಿದೆ.
ನವೆಂಬರ್ 5ರ ಮಂಗಳವಾರ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗವನ್ನು ಬಂದ್ ಮಾಡಿ ಮುಷ್ಕರ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ. ಆದ್ದರಿಂದ, ಸರ್ಕಾರಿ ಆಸ್ಪತ್ರೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆಇದೆ.
ಶಸ್ತ್ರ ಚಿಕಿತ್ಸೆ ವೇಳೆ ಕಣ್ಣು ಕಳೆದುಕೊಂಡ ವ್ಯಕ್ತಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಲು ಶುಕ್ರವಾರ ಮಿಂಟೋ ಆಸ್ಪತ್ರೆಗೆ ಕರವೇ ಕಾರ್ಯಕರ್ತರು ಬಂದಿದ್ದರು. ಆಗ ಕನ್ನಡ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹಿಳಾ ಕಿರಿಯ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಸೇರಿದಂತೆ ಹಲವು ಕಾರ್ಯಕರ್ತರು ಘಟನೆ ವೇಳೆ ಅಲ್ಲಿದ್ದರು. ಕರವೇ ಕಾರ್ಯಕರ್ತರು ಆಸ್ಪತ್ರೆ ಮೇಲೆ ದಾಳಿ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.












Click it and Unblock the Notifications