ಐದು ಸಿಲಿಂಡರ್ ಉಚಿತ: ಮತದಾರರಿಗೆ ಬಂಪರ್ ಆಫರ್ ಕೊಟ್ಟ ಜೆಡಿಎಸ್
ಬೆಂಗಳೂರು ಮಾರ್ಚ್ 30: ರಾಜ್ಯದಲ್ಲಿ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳ ಮತಬೇಟೆ ಚುರುಕಾಗಿದೆ. ಈ ಬಾರಿ ಶತಾಯಗತಾಯ ಕಮಲ ಪಾಳೆಯಿಂದ ಅಧಿಕಾರವನ್ನು ಪಡೆಯಲು ಜೆಡಿಎಸ್ ತೊಡೆ ತಟ್ಟಿ ನಿಂತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತದಾರರಿಗೆ ಹಲವಾರು ಭರವಸೆಗಳನ್ನು ನೀಡುವ ಮೂಲಕ ತನ್ನತ್ತ ಸೆಳೆಯುತ್ತಿದೆ.
'ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ನೀಡಲಿದ್ದು, ಹತ್ತು ಸಿಲಿಂಡರ್ಗಳನ್ನು ಅರ್ಧ ಬೆಲೆಗೆ ನೀಡುವ ಯೋಜನೆ ಜಾರಿಗೊಳಿಸಲಾಗುವುದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

'ಎಲ್ಪಿಜಿ ಸಿಲಿಂಡರ್ ಖರೀದಿಗೆ ಸಬ್ಸಿಡಿ ನೀಡುವುದಾಗಿ ಹೇಳಿಕೆ ಉಜ್ವಲ ಯೋಜನೆ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ ಈಗ ಮಹಿಳೆಯರಿಗೆ ಆಘಾತ ನೀಡಿದೆ. ಸಿಲಿಂಡರ್ ಬೆಲೆ ಸಾವಿರ ರೂಪಾಯಿ ದಾಟಿದೆ. ಬಡವರು ಜೀವನ ಸಾಗಿಸುವುದೇ ದುಸ್ತರವಾಗಿದೆ' ಎಂದು
ಮಂಗಳವಾರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನಯಾತ್ರೆಯಲ್ಲಿ ಪಾಲ್ಗೊಂಡಿದ್ದ ವೇಳೆ ಕುಮಾರಸ್ವಾಮಿಯವರು ಅವರು ಸುದ್ದಿಗಾರರ ಜೊತೆ ಮಾಡನಾಡಿದರು.
ಆಟೋಚಾಲಕರಿಗೆ ಮಾಸಿಕ 2,000 ಸಹಾಯಧನ ನೀಡುವ ಯೋಜನೆಯನ್ನೂ ಜಾರಿಗೆ ತರಲಾಗುವುದು. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನೂ ಶಾಸ್ವತವಾಗಿ ಈಡೇರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಜೆಡಿಎಸ್ ಈ ಹಿಂದೆ ಪಂಚರತ್ನ ಯೋಜನೆಗಳನ್ನು ಪ್ರಕಟಿಸಿತ್ತು. ಎಲ್ಲ ರೋಗಗಳಿಗೂ ಉಚಿತ ಚಿಕಿತ್ಸೆ, ದ್ವಿತೀಯ ಪಿಯುಸಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಉಚಿತ ಶಿಕ್ಷಣ, ರೈತರಿಗೆ ದಿನದ 24 ಗಂಟೆಗಳ ಕಾಲ ನಿರಂತರ ಉಚಿತ ವಿದ್ಯುತ್ ಪೂರೈಕೆ, ರೈತರಿಗೆ ಪ್ರತೀ ಎಕರೆಗೆ 10,000 ಸಹಾಯಧನ ನೀಡುವುದು, ಎಲ್ಲರಿಗೂ ವಸತಿ ಸೌಲಭ್ಯ ಹಾಗೂ ಮಹಿಳೆಯರು ಮತ್ತು ಯುವಜನ ಸಬಲೀಕರಣಕ್ಕೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಗಳನ್ನು 'ಪಂಚರತ್ನ'ದಲ್ಲಿ ಪ್ರಕಟಿಸಲಾಗಿತ್ತು. ಕೊಬ್ಬರಿ ಮತ್ತು ಅಡಿಕೆ ಬೆಳಗಳ ದರ ಕುಸಿತ ತಡೆಯಲು ವಿಶೇಷ ಯೋನೆ ಅನುಷ್ಠಾನಕ್ಕೆ ತರುವುದಾಗಿಯೂ ಕುಮಾರಸ್ವಾಮಿ ಪ್ರಕಟಿಸಿದ್ದರು.
ಚುನಾವಣೆ ಯಾವಾಗ?
ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13ರಂದು ಅಧಿಸೂಚನೆ, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಕ್ವಿಂಟಲ್ ಕೊಬ್ಬರಿಗೆ 15 ಸಾವಿರ ಬೆಲೆ ನಿಗಧಿ
ಈ ಹಿಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 15 ಸಾವಿರ ಬೆಲೆ ನಿಗದಿಪಡಿಸುವ ಮೂಲಕ ತೆಂಗು ಬೆಳೆಗಾರರ ಹಿತ ಕಾಯುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಪಟ್ಟಣದಲ್ಲಿ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆಗಾಗಿ ಒತ್ತಾಯಿಸಿ ಕೈಗೊಂಡಿದ್ದ ಅಹೋರಾತ್ರಿ ಧರಣಿಯನ್ನುದ್ದೇಶಿಸಿ ಮಾತನಾಡಿದ ಅವರು, ಇನ್ನು ಕೇವಲ ಎರಡು ತಿಂಗಳು ಕಾಲ ನೀವು ಬೆಳೆದ ಕೊಬ್ಬರಿಯನ್ನು ಮಾರಾಟ ಮಾಡಲು ಹೋಗಬೇಡಿ.
ನಮ್ಮ ಪಕ್ಷ ತೆಂಗು ಬೆಳೆಗಾರರ ರಕ್ಷಣೆಗೆ ನಿಲ್ಲಲಿದೆ. ಮುಂಗಾರಿನ ಆರಂಭದಲ್ಲಿ ರೈತರ ಪ್ರತಿ ಎಕರೆಗೆ 10 ಸಾವಿರ ರೂ.ಗಳನ್ನು ಸರಕಾರದಿಂದ ಉಚಿತವಾಗಿ ನೀಡಲಾಗುವುದು. ನಮ್ಮ ಪಕ್ಷಕ್ಕೆ ಬಲ ತುಂಬಲು ತುರುವೇಕೆರೆ ವಿಧಾನಸಭೆ ಕ್ಷೇತ್ರದಿಂದ ಎಂ.ಟಿ.ಕೃಷ್ಣಪ್ಪ ಅವರನ್ನು ಶಾಸಕರನ್ನಾಗಿ ಮಾಡಿ ಎಂದು ಮನವಿ ಮಾಡಿದರು.












Click it and Unblock the Notifications