ಮೈತ್ರಿ ಮಾತುಕತೆ, ಜೆಡಿಎಸ್ ಚಿತ್ತ ಎಡಪಕ್ಷಗಳತ್ತ!
ಬೆಂಗಳೂರು, ಜನವರಿ 22 : ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈತ್ರಿ ಬಗ್ಗೆ ಚರ್ಚೆ ಆರಂಭವಾಗಿದೆ. ಜೆಡಿಎಸ್ ಈ ಬಾರಿ ಕಾಂಗ್ರೆಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ಎಡಪಕ್ಷಗಳು ಉತ್ತಮ ಎಂಬ ಬಗ್ಗೆ ಚಿಂತನೆ ನಡೆಸಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಗಳೂರಿನಲ್ಲಿ ಸೋಮವಾರ ಈ ಕುರಿತು ಮಾತನಾಡಿದರು. 'ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ಮುಂದಿರುವ ಆಯ್ಕೆಯಲ್ಲ' ಎಂದು ಅವರು ಸ್ಪಷ್ಟಪಡಿಸಿದರು.
ಸಿ ವೋಟರ್ ಸಮೀಕ್ಷೆ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ
ಎಚ್.ಡಿ.ದೇವೇಗೌಡರು ತುಮಕೂರು, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. 'ರಾಜ್ಯದ 224 ಕ್ಷೇತ್ರಗಳಲ್ಲಿಯೂ 2018ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ' ಎಂದು ದೇವೇಗೌಡರು ಹೇಳಿದರು. ಕೆಲವು ಕ್ಷೇತ್ರಗಳಲ್ಲಿ ಎಡ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲು ಅವಕಾಶ ನೀಡಿ, ಅವರನ್ನು ಬೆಂಬಲಿಸುವ ಸಾಧ್ಯತೆಯೂ ಇದೆ.
ವಜ್ಜಲ್, ಪಾಟೀಲ್ ಜೆಡಿಎಸ್ ತೊರೆದ ಕಾರಣ ಬಹಿರಂಗ
'ಕಾಂಗ್ರೆಸ್ ಜೊತೆ ಹಿಂದೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಪಶ್ಚಾತ್ತಾಪ ಪಡುತ್ತಿದ್ದಾರೆ' ಎಂದು ದೇವೇಗೌಡರು ಹೇಳುವ ಮೂಲಕ ಅತಂತ್ರ ವಿಧಾನಸಭೆ ರಚನೆಯಾದರೆ ಕಾಂಗ್ರೆಸ್ ಜೊತೆ ಕೈ ಜೋಡಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.
ಗ್ರಾಮೀಣ, ನಗರ ಕ್ಷೇತ್ರಗಳಲ್ಲಿ ಸಮಬಲ ಸಾಧಿಸಿದವರೇ ಕರ್ನಾಟಕದಲ್ಲಿ ಬಾಸ್
'ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ನಮ್ಮ ಪಕ್ಷ ಹೆಚ್ಚು ಬಲ ಹೊಂದಿಲ್ಲ. ಪಕ್ಷವನ್ನು ಸಂಘಟನೆ ಮಾಡುವ ಕೆಲಸ ಮಾಡುತ್ತಿದ್ದೇನೆ. ಮಂಗಳೂರಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗುತ್ತದೆ' ಎಂದು ದೇವೇಗೌಡರು ಹೇಳಿದರು.
ಎಸ್ಡಿಪಿಐ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಎಚ್.ಡಿ.ದೇವೇಗೌಡರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. '2018ರ ಚುನಾವಣೆ ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ನಡುವೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಹೋರಾಟವಾಗಲಿದೆ' ಎಂದರು.
ಇದುವರೆಗೂ ಕರ್ನಾಟಕ ಚುನಾವಣೆ ಬಗ್ಗೆ ನಡೆದ ಸಮೀಕ್ಷೆಗಳು ಅತಂತ್ರ ವಿಧಾನಸಭೆ ರಚನೆಯಾಗಲಿವೆ ಎಂದು ಹೇಳಿವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪುನಃ ಆಡಳಿತಕ್ಕೆ ಬರುವ ವಿಶ್ವಾಸ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಯೋಜನೆಗಳು ಗೆಲುವು ತಂದುಕೊಡಲಿವೆ ಎಂಬ ವಿಶ್ವಾಸದಲ್ಲಿ ಬಿಜೆಪಿ ಇದೆ.