ಹೈದರಾಬಾದ್-ಕರ್ನಾಟಕ ಭಾಗದಿಂದ ರಾಹುಲ್ ರಾಜ್ಯ ಪ್ರವಾಸ
ಬೆಂಗಳೂರು, ಜನವರಿ 19 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಪ್ರವಾಸದ ದಿನಾಂಕ ಅಂತಿಮಗೊಂಡಿದೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಅವರು ಚಾಲನೆ ನೀಡಲಿದ್ದಾರೆ.
ಫೆಬ್ರವರಿ 10, 11 ಮತ್ತು 12ರಂದು ರಾಹುಲ್ ಗಾಂಧಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಪಕ್ಷ ಭದ್ರ ನೆಲೆ ಹೊಂದಿರುವ ಹೈದರಾಬಾದ್-ಕರ್ನಾಟಕ ಭಾಗದಿಂದ ಅವರು ಪ್ರವಾಸ ಆರಂಭಿಸಲಿದ್ದಾರೆ.
ಕರ್ನಾಟಕ ಚುನಾವಣೆ : ರಾಹುಲ್ ಗಾಂಧಿ ಸಪ್ತ ಸೂತ್ರಗಳು!
ಕಳೆದ ಚುನಾವಣೆಯಲ್ಲಿ ಹೈದರಾಬಾದ್-ಕರ್ನಾಟಕ ಭಾಗದ 39 ವಿಧಾನಸಭಾ ಕ್ಷೇತ್ರಗಳ ಪೈಕಿ 24ರಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಆದ್ದರಿಂದ, ಈ ಬಾರಿಯ ಪ್ರಚಾರವನ್ನೂ ಪಕ್ಷ ಹೈದರಾಬಾದ್-ಕರ್ನಾಟಕ ಭಾಗದಿಂದಲೇ ಆರಂಭಿಸಲಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು, ಪಕ್ಷದ ಚುನಾವಣಾ ಸಿದ್ಧತೆ ಕುರಿತು ಮಾತನಾಡಿದ್ದಾರೆ. 'ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಸಿದ್ಧತೆಗಳನ್ನು ಆರಂಭಿಸಿದ್ದೇವೆ. ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಿದ್ದೇವೆ. ರಾಹುಲ್ ಗಾಂಧಿ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದಾರೆ' ಎಂದರು.
'ಜನರ ಜೊತೆ ಮಾತುಕತೆ ನಡೆಸಲು ಅನುಕೂಲವಾಗಲಿದೆ ಎಂಬ ಕಾರಣಕ್ಕೆ ರಾಹುಲ್ ಗಾಂಧಿ ರಸ್ತೆ ಮೂಲಕವೇ ಪ್ರಯಾಣ ಮಾಡಿದ್ದಾರೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಈ ಬಾರಿಯೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲು ಪಕ್ಷ ತಂತ್ರ ರೂಪಿಸಿದೆ' ಎಂದು ವೇಣುಗೋಪಾಲ್ ಹೇಳಿದ್ದಾರೆ.
ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಹೈದರಾಬಾದ್-ಕರ್ನಾಟಕ ಭಾಗಕ್ಕೆ 371ನೇ ಕಾಲಂ ಅಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ಇದು ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ವಿಶೇಷ ಸ್ಥಾನಮಾನ ನೀಡಿದ್ದರಿಂದ ಉದ್ಯೋಗ, ಶಿಕ್ಷಣ ಮುಂತಾದವುಗಳಲ್ಲಿ ಈ ಭಾಗದ ಜನರಿಗೆ ಹೆಚ್ಚಿನ ಅವಕಾಶಗಳು ಸಿಕ್ಕಿವೆ. ಆದ್ದರಿಂದ ಈ ಬಾರಿ 30 ಸ್ಥಾನಗಳಲ್ಲಿಯೂ ಗೆಲ್ಲುವ ವಿಶ್ವಾಸದಲ್ಲಿ ಕಾಂಗ್ರೆಸ್ ಪಕ್ಷವಿದೆ.